ಸಾರಾಂಶ
ಕುಡಿಯುವ ನೀರು ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಕುಡಿಯುವ ನೀರು ಶುದ್ಧವಾಗಿದ್ದರೆ ಎಷ್ಟೋ ಕಾಯಿಲೆ ಗಳನ್ನು ತಡೆಗಟ್ಟಲು ಸಾಧ್ಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಹಿರೇಮಗಳೂರಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಕುಡಿಯುವ ನೀರು ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಕುಡಿಯುವ ನೀರು ಶುದ್ಧವಾಗಿದ್ದರೆ ಎಷ್ಟೋ ಕಾಯಿಲೆ ಗಳನ್ನು ತಡೆಗಟ್ಟಲು ಸಾಧ್ಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು. ಹಿರೇಮಗಳೂರಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಕುಡಿಯುವ ನೀರನ್ನು ಹೆಚ್ಚಾಗಿ ವ್ಯರ್ಥಗೊಳಿಸದೇ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ಮಾಡಿದರು. ಶುದ್ಧ ಕುಡಿಯುವ ನೀರಿನ ಘಟಕ ನಿವಾಸಿಗಳ ಸಲುವಾಗಿ ಮಾಡಿರುವುದು ಹಾಗಾಗಿ ಅದನ್ನು ಸದ್ಬಳಕೆ ಮಾಡಿ. ನೀರಿನಿಂದ ಬಹಳಷ್ಟು ಸಾಂಕ್ರಾಮಿಕ ರೋಗಗಳು ಬರುತ್ತವೆ. ಆರೋಗ್ಯ ಕಾಪಾಡಿ ಕೊಳ್ಳಬೇಕಾದರೆ ಶುದ್ಧ ಕುಡಿಯುವ ನೀರನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದರು. ನಗರಸಭಾ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಮಾತನಾಡಿ, ಸುಮಾರು 10.74 ಲಕ್ಷ ರು. ವೆಚ್ಚದಲ್ಲಿ 15 ಸಾವಿರ ಲೀಟರ್ ಸಾಮರ್ಥ್ಯ ಹೊಂದಿರುವ ಕುಡಿಯುವ ನೀರಿನ ಘಟಕ ಸ್ಥಾಪಿಸಿದೆ. ಈ ಘಟಕದಿಂದ ಸುತ್ತಮುತ್ತಲಿನ ಜನತೆಗೆ ಬಹಳಷ್ಟು ಅನುಕೂಲವಾಗಲಿದೆ ಎಂದರು.ನಗರಸಭಾ ಸದಸ್ಯೆ ವಿದ್ಯಾ ಬಸವರಾಜ್ ಮಾತನಾಡಿ, ಹಲವಾರು ವರ್ಷಗಳಿಂದ ಕುಡಿಯುವ ನೀರಿನ ಘಟಕ ಒದಗಿಸುವ ಸಂಬಂಧ ನಿವಾಸಿಗಳ ಬೇಡಿಕೆಯಿದ್ದ ಹಿನ್ನೆಲೆಯಲ್ಲಿ ಇದೀಗ ಘಟಕ ಸ್ಥಾಪಿಸಿದೆ. ನಿವಾಸಿಗಳು ಬೇಸಿಗೆ ಸಮಯವಾಗಿರುವ ಹಿನ್ನೆಲೆಯಲ್ಲಿ ನೀರನ್ನು ಕುಡಿಯುವುದಕ್ಕಾಗಿ ಮಾತ್ರ ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.ಈಗಾಗಲೇ ವಾರ್ಡಿನ ರಸ್ತೆ, ಚರಂಡಿ ಸೇರಿದಂತೆ ಮೂಲಸೌಕರ್ಯಗಳ ಕಾಮಗಾರಿಗಳು ಅನಿವಾರ್ಯ ಕಾರಣಗಳಿಂದ ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಶಾಸಕರು ಹಾಗೂ ನಗರಸಭಾ ಅಧ್ಯಕ್ಷರು ಮುತುವರ್ಜಿವಹಿಸಿ ವಾರ್ಡಿನ ಕಾಮಗಾರಿಗಳಿಗೆ ಉತ್ತೇಜನ ನೀಡಿ ನಿವಾಸಿಗಳಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ನಗರಸಭಾ ಪೌರಾಯುಕ್ತ ಬಿ.ಸಿ.ಬಸವರಾಜ್, ಇಂಜಿನಿಯರ್ಗಳಾದ ಲೋಕೇಶ್, ರಶ್ಮಿ, ಗ್ರಾಮಸ್ಥರಾದ ಹಿರೇಮಗಳೂರು ರಾಮಚಂದ್ರ, ಸೋಮಶೇಖರ್, ಜಗದೀಶ್, ಮಂಜುನಾಥ್ ಹಾಜರಿದ್ದರು.
28 ಕೆಸಿಕೆಎಂ 2ಹಿರೇಮಗಳೂರಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಎಚ್.ಡಿ. ತಮ್ಮಯ್ಯ ಅವರು ಉದ್ಘಾಟಿಸಿದರು. ನಗರಸಭಾಧ್ಯಕ್ಷ ವರಸಿದ್ದಿ ವೇಣುಗೋಪಾಲ್, ಪೌರಾಯುಕ್ತ ಬಸವರಾಜ್ ಇದ್ದರು.