ಹಾಲೆನೂರು ಲೇಪಾಕ್ಷರನ್ನು ಪಕ್ಷದಿಂದ ವಜಾಗೊಳಿಸಿ

| Published : May 16 2024, 12:51 AM IST

ಸಾರಾಂಶ

ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು, ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬೆಳ್ಳಾವಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ಹಾಲೆನೂರು ಲೇಪಾಕ್ಷ, ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಕೆಲಸ ಮಾಡುತ್ತಿದ್ದು, ಅವರನ್ನು ಪಕ್ಷದಿಂದ ವಜಾಗೊಳಿಸುವಂತೆ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಸೈಯದ್ ಸದಾತ್ ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರುಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು, ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬೆಳ್ಳಾವಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ಹಾಲೆನೂರು ಲೇಪಾಕ್ಷ, ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಕೆಲಸ ಮಾಡುತ್ತಿದ್ದು, ಅವರನ್ನು ಪಕ್ಷದಿಂದ ವಜಾಗೊಳಿಸುವಂತೆ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಸೈಯದ್ ಸದಾತ್ ಒತ್ತಾಯಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷ ಒಂದು ತತ್ವ, ಸಿದ್ದಾಂತದ ಮೇಲೆ ನಡೆದುಕೊಂಡು ಬಂದಿದೆ. ಇಲ್ಲಿ ವ್ಯಕ್ತಿಗಿಂತ ಪಕ್ಷಕ್ಕೆ ಹೆಚ್ಚು ಬೆಲೆಯಿದೆ. ಆದರೆ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಿಂದ ಬಂದಂತಹ ಕೆಲವರು ಕಾಂಗ್ರೆಸ್ ಪಕ್ಷದ ಸಿದ್ದಾಂತಗಳನ್ನು ಪಾಲಿಸುತ್ತಿಲ್ಲ. ಇದರಿಂದ ಮೂಲ ಕಾಂಗ್ರೆಸಿಗರು ಮುಜುಗರ ಅನುಭವಿಸುವಂತಾಗಿದೆ. ಹಾಗಾಗಿ ಪಕ್ಷದ ಮುಖಂಡರು ಮತ್ತು ರಾಜ್ಯ ಮಟ್ಟದ ನಾಯಕರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿರುವ ಹಾಲೇನೂರು ಲೇಪಾಕ್ಷರನ್ನು ಪಕ್ಷದಿಂದ ಹಾಗೂ ಬೆಳ್ಳಾವಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು ಎಂದರು.

ಕಾಂಗ್ರೆಸ್ ಪಕ್ಷ ಈಗಾಗಲೇ ಆಗ್ನೇಯ ಶಿಕ್ಷಕರ ಕ್ಷೇತ್ರದ ಅಧಿಕೃತ ಅಭ್ಯರ್ಥಿಯಾಗಿ ಡಿ.ಟಿ. ಶ್ರೀನಿವಾಸ್‌ರನ್ನು ಘೋಷಿಸಿದೆ. ಆದರೆ ಹಾಲೆನೂರು ಲೇಪಾಕ್ಷ ಪಕ್ಷದ ಅಧಿಕೃತ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರ ಪರ ಕೆಲಸ ಮಾಡುವ ಬದಲು, ಪಕ್ಷೇತರ ಅಭ್ಯರ್ಥಿಯಾಗಿರುವ ಶಿವರಾಜ್ ಜತೆಗೆ ಇಡೀ ಜಿಲ್ಲೆಯಾದ್ಯಂತ ಓಡಾಟ ನಡೆಸಿ ಶಿಕ್ಷಕರಿಂದ ಮತಯಾಚಿಸುತ್ತಿದ್ದಾರೆ. ಇದು ಪಕ್ಷ ವಿರೋಧಿ ಚಟುವಟಿಕೆಯಾಗಿದೆ. ಒಂದು ವೇಳೆ ಪಕ್ಷದ ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ಳದಿದ್ದರೆ, ಜಿಲ್ಲಾ ಕಚೇರಿ ಮುಂಭಾಗದ ಧರಣಿ ನಡೆಸಲು ಸಿದ್ದರಿರುವುದಾಗಿ ತಿಳಿಸಿದರು.ಪಕ್ಷದ ಮುಖಂಡರು ಸಹ ಮೂಲ ಕಾರ್ಯಕರ್ತರನ್ನು ಕಡೆಗಣಿಸಿ, ಹೊಸದಾಗಿ ಪಕ್ಷ ಸೇರಿದವರಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಂತಹ ಹುದ್ದೆ ನೀಡಿ, ಕಾರ್ಯಕರ್ತರಿಗೆ ನೋವುಂಟು ಮಾಡಿದರೂ ಸಹಿಸಿಕೊಂಡು ಪಕ್ಷದ ಹಿತದೃಷ್ಟಿಯಿಂದ ಸುಮ್ಮನಿದ್ದೇವು. ಆದರೆ ಪಕ್ಷ ವಿರೋಧಿ ಚಟುವಟಿಕೆಯನ್ನು ಸಹಿಸಲು ಸಾಧ್ಯವಿಲ್ಲ. ಡಿ.ಸಿ.ಗೌರಿಶಂಕರ್ ಸಹ ಇದನ್ನು ತಮ್ಮ ಹಿಂಬಾಲಕರಿಗೆ ಮನವರಿಕೆ ಮಾಡಿಕೊಡಬೇಕು. ಕಾಂಗ್ರೆಸ್ ಪಕ್ಷಕ್ಕೆ ಬಂದ ನಂತರ, ಇಲ್ಲಿಯ ತತ್ವ, ಸಿದ್ದಾಂತಗಳಿಗೆ ಬದ್ದರಾಗಿ ಕೆಲಸ ಮಾಡುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಬೇಕೆಂದು ಒತ್ತಾಯಿಸಿದರು.

ಕಾರ್ಯಕರ್ತರಾದ ರಘುಕುಮಾರ್, ಹರ್ಷವರ್ಧನ್‌ ಇದ್ದರು.