ಸಾರಾಂಶ
ಕನ್ನಡಪ್ರಭ ವಾರ್ತೆ ಯಾದಗಿರಿ
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದ ಮೇಲೆ ದೌರ್ಜನ್ಯ ನಡೆಯುವಂತಹ ಗ್ರಾಮಗಳ ಪಟ್ಟಿಯನ್ನು ಇಟ್ಟುಕೊಂಡು ತಕ್ಷಣ ಕಾಲಕಾಲಕ್ಕೆ ಭೇಟಿ ನೀಡಿ ಅಲ್ಲಿ ಸೂಕ್ತ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಅಸ್ಪೃಶ್ಯತೆ ಆಚರಣೆ ಜಾರಿಯಲ್ಲಿ ಇರುವಂತಹ ಹಳ್ಳಿಗಳಲ್ಲಿ ಅಸ್ಪೃಶ್ಯತಾ ನಿವಾರಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿ, ಅನುಸೂಚಿತ ಪಂಗಡ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ವಿವಿಧ ಕಡೆ ಸ್ಮಶಾನ ಭೂಮಿಯ ಅವಶ್ಯಕತೆ ಇದೆ. ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಬೇಕು. ಜನಸಂಖ್ಯೆ ಆಧಾರದ ಮೇಲೆ ಸ್ಮಶಾನಭೂಮಿ ಒದಗಿಸುವ ಬಗ್ಗೆ ವರದಿ ಸಲ್ಲಿಸಲು ಸೂಚಿಸಿದ ಅವರು, ವಿವಿಧ ಪ್ರಕರಣಗಳಲ್ಲಿ ನೊಂದ ಸಂತ್ರಸ್ತರಿಗೆ ಪರಿಹಾರ ಒದಗಿಸುವಂತೆ ಸೂಚನೆ ನೀಡಿದರು.ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಜ.1 ರಿಂದ ಜು.14ರವರೆಗಿನ ಅವಧಿಯಲ್ಲಿ ನೊಂದ ಸಂತ್ರಸ್ತರಿಗೆ ಒಟ್ಟು ₹54.86 ಲಕ್ಷ ಪರಿಹಾರ ಧನವನ್ನು ಜಿಲ್ಲಾಡಳಿತದಿಂದ ವಿತರಿಸಲಾಗಿದೆ ಎಂದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದ ಮೇಲೆ ಆಗುವ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ಅವಧಿಯಲ್ಲಿ ಪರಿಹಾರ ವಿತರಿಸಲು ಒಟ್ಟು ₹99.86 ಲಕ್ಷ ಅನುದಾನ ಬಿಡುಗಡೆಯಾಗಿದೆ. ಬಾಕಿ ಉಳಿದ ₹45 ಲಕ್ಷ ಅನುದಾನ ಬಿಡುಗಡೆ ಶೀಘ್ರವೇ ಬಿಡುಗಡೆ ಮಾಡಲಾಗುತ್ತದೆ ಎಂದು ಸಭೆಯಲ್ಲಿ ತಿಳಿಸಲಾಯಿತು.
ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ವ್ಯಾಪ್ತಿಯಲ್ಲಿ ಭೂ ಒಡೆತನ ಯೋಜನೆ, ಸಾರ್ವಜನಿಕ ಸ್ಮಶಾನಭೂಮಿ ಸೌಲಭ್ಯ ಗುರುತಿಸುವುದು ಹಾಗೂ ವಿವಿಧ ನಿಗಮಗಳ ವ್ಯಾಪ್ತಿಯಲ್ಲಿ ನೀಡಲಾಗುವ ಸಾಲಕ್ಕಾಗಿ ಅನಗತ್ಯ ದಾಖಲಾತಿ ಕೇಳದಂತೆ ಅಧಿಕಾರಿಗಳಿಗೆ ತಿಳಿಸಿದರು. ಸ್ಮಶಾನ ಭೂಮಿ ಒತ್ತುವರಿಯಾಗಿರುವ ಬಗ್ಗೆ ಪರಿಶೀಲಿಸಿ ತಕ್ಷಣ ತೆರವುಗೊಳಿಸಬೇಕು ಎಂದರು.ಈ ವೇಳೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರಿಮಾ ಪನ್ವಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧರಣೇಶ ಎಸ್.ಪಿ., ಡಿವೈಎಸ್ಪಿಗಳಾದ ಅರುಣಕುಮಾರ ಕೋಳೂರು, ಜಾವೀದ್ ಇನಾಂದಾರ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಸರೋಜಾ ಜಿ. ಟಿ., ದೌರ್ಜನ್ಯ ಸಮಿತಿಯ ಸದಸ್ಯರಾದ ಮರೆಪ್ಪ ಚಟ್ಟೆರಕಾರ, ಮಲ್ಲಪ್ಪ ಗೋಗಿ, ನಿಂಗಪ್ಪ ದೇವಳಗುಡ್ಡ, ದಿನೇಶಕುಮಾರ, ರವಿಕುಮಾರ ಯಕ್ಷಂತಿ, ಸರಕಾರಿ ಅಭಿಯೋಜಕರಾದ ವಿಶ್ವನಾಥ ಉಬಾಳೆ ಇತರರಿದ್ದರು.