ಯಾವುದೇ ಸಮಸ್ಯೆಗೂ ಆತ್ಮಹತ್ಯೆ ಪರಿಹಾರವಲ್ಲ. ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸುವ ಸಾಮರ್ಥ್ಯವನ್ನು ರೈತರು ಬೆಳೆಸಿಕೊಳ್ಳಬೇಕು. ನಿಮ್ಮನ್ನೇ ನಂಬಿಕೊಂಡಿರುವ ಕುಟುಂಬಗಳಿವೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಆತ್ಮಸ್ಥೈರ್ಯದಿಂದ ಜೀವನ ನಡೆಸುವುದನ್ನು ಕಲಿಯಬೇಕು.
ಕನ್ನಡಪ್ರಭ ವಾರ್ತೆ ಮಂಡ್ಯ
ಸಾಲ ಬಾಧೆಯಿಂದ ಆತ್ಮಹತ್ಯೆಗೆ ಶರಣಾದ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಬಿ.ಹಟ್ನ ಗ್ರಾಮದ ರೈತ ದಂಪತಿ ಹಾಗೂ ಎಂ.ಬೆಟ್ಟಹಳ್ಳಿಯ ರೈತ ಕುಟುಂಬಗಳಿಗೆ ಜಿಲ್ಲಾಡಳಿತದಿಂದ ತಲಾ ೫ ಲಕ್ಷ ರು. ಪರಿಹಾರವನ್ನು ಸಚಿವ ಎನ್.ಚಲುವರಾಯಸ್ವಾಮಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.ಆತ್ಮಹತ್ಯೆ ಮಾಡಿಕೊಂಡ ಬಿ.ಹಟ್ನ ಗ್ರಾಮದ ಪುಟ್ಟಸ್ವಾಮಿ ಮತ್ತು ನಾಗಮ್ಮ ನಿವಾಸಕ್ಕೆ ತೆರಳಿದ ಸಚಿವರು ಕುಟುಂಬದವರಿಗೆ ಧೈರ್ಯ ತುಂಬಿ ಪರಿಹಾರ ವಿತರಿಸಿದರು. ಊರಿನ ಕೆಲವು ಮುಖಂಡರು ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ೧೫ ಲಕ್ಷ ರು. ಪರಿಹಾರ ನೀಡುವಂತೆ ಸಚಿವರಲ್ಲಿ ಮನವಿ ಮಾಡಿದರು. ಸದ್ಯ ಸರ್ಕಾರ ನಿಗದಿಪಡಿಸಿರುವ ಪರಿಹಾರ ಹಣವನ್ನು ಕುಟುಂಬಕ್ಕೆ ನೀಡಲಾಗಿದೆ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಹೆಚ್ಚಿನ ಪರಿಹಾರ ದೊರಕಿಸಿಕೊಡುವ ಬಗ್ಗೆ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಅದೇ ರೀತಿ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಂಡಿಬೆಟ್ಟಹಳ್ಳಿ ಮಂಜುನಾಥ್ ಅವರ ನಿವಾಸಕ್ಕೂ ಸಚಿವರು ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಮೃತನ ಕುಟುಂಬಕ್ಕೆ ೫ ಲಕ್ಷ ರು. ಪರಿಹಾರ ನೀಡಿದರು. ಯಾವುದೇ ಸಮಸ್ಯೆಗೂ ಆತ್ಮಹತ್ಯೆ ಪರಿಹಾರವಲ್ಲ. ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸುವ ಸಾಮರ್ಥ್ಯವನ್ನು ರೈತರು ಬೆಳೆಸಿಕೊಳ್ಳಬೇಕು. ನಿಮ್ಮನ್ನೇ ನಂಬಿಕೊಂಡಿರುವ ಕುಟುಂಬಗಳಿವೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಆತ್ಮಸ್ಥೈರ್ಯದಿಂದ ಜೀವನ ನಡೆಸುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದರು.ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಕೆ.ಆರ್.ನಂದಿನಿ, ಪಾಂಡವಪುರ ಉಪವಿಭಾಗಾಧಿಕಾರಿ ಕೆ.ಆರ್.ಶ್ರೀನಿವಾಸ್, ಜಂಟಿ ಕೃಷಿ ನಿರ್ದೇಶಕ ಜಯಸ್ವಾಮಿ ಇದ್ದರು.