ಸಮುದಾಯದ ಎಲ್ಲರೂ ಕೂಡ ಒಗ್ಗಟ್ಟಿನಿಂದ ಮುನ್ನಡೆಯುವ ಮೂಲಕ ಟ್ರಸ್ಟಿನ ಪ್ರಗತಿಗೆ ಮುಂದಾಗಬೇಕಿದೆ.
ಕನ್ನಡಪ್ರಭ ವಾರ್ತೆ ಹುಣಸೂರುತಾಲೂಕು ಭೋವಿ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ಜಿ.ಡಿ. ಹರೀಶ್ ಗೌಡ ಭರವಸೆ ನೀಡಿದರು. ಪಟ್ಟಣದ ಟೌನ್ಹಾಲ್ ಹತ್ತಿರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಹುಣಸೂರು ತಾಲೂಕು ಭೋವಿ ಸಮಾಜ ಅಭಿವೃದ್ಧಿ ಟ್ರಸ್ಟ್ ಉದ್ಘಾಟಿಸಿ, ಟ್ರಸ್ಟ್ ವತಿಯಿಂದ 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಭೋವಿ ಸಮಾಜದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಅವರು ಮಾತನಾಡಿದರು. ತಾಲೂಕು ಭೋವಿ ಸಮಾಜ ಅಭಿವೃದ್ಧಿ ಟ್ರಸ್ಟ್ ಆರಂಭವಾಗಿದ್ದು, ಇದರ ಅಭಿವೃದ್ಧಿಗೆ ಶಾಸಕನಾಗಿ ಎಲ್ಲ ರೀತಿಯ ಸಹಕಾರ ನೀಡುತ್ತೇನೆ. ಟ್ರಸ್ಟ್ನ ಎಲ್ಲ ಪದಾಧಿಕಾರಿಗಳು ಸಾಕಷ್ಟು ಕಷ್ಟಪಟ್ಟು ಟ್ರಸ್ಟ್ ಆರಂಭಿಸಿದ್ದಾರೆ. ಆದ್ದರಿಂದ ಸಮುದಾಯದ ಎಲ್ಲರೂ ಕೂಡ ಒಗ್ಗಟ್ಟಿನಿಂದ ಮುನ್ನಡೆಯುವ ಮೂಲಕ ಟ್ರಸ್ಟಿನ ಪ್ರಗತಿಗೆ ಮುಂದಾಗಬೇಕಿದೆ. ನಾನು ಕೂಡ ಭೋವಿ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಜಾಗವನ್ನು ನೀಡುವುದು ಸೇರಿದಂತೆ ಎಲ್ಲ ರೀತಿಯ ಅಗತ್ಯ ಸಹಕಾರ ನೀಡುತ್ತೇನೆ ಎಂದರು. 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತಾಲೂಕು ಭೋವಿ ಸಮಾಜ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು. ವರ್ಷ ಹರೀಶ್ ಗೌಡ, ತಾಲೂಕು ಭೋವಿ ಸಮಾಜ ಅಭಿವೃದ್ಧಿ ಟ್ರಸ್ಟ್ ಗೌರವಾಧ್ಯಕ್ಷ ಗಣೇಶ್, ಅಧ್ಯಕ್ಷ ವಾಸು, ಉಪಾಧ್ಯಕ್ಷರಾದ ಸ್ವಾಮಿ ಭೋವಿ, ಆನಂದ್ ಸೇರಿದಂತೆ ಭೋವಿ ಸಮಾಜದ ಹಲವು ಮುಖಂಡರು ಇದ್ದರು.