ಕೊಪ್ಪಳ: ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್, ಹೊಸಪೇಟೆ ಸ್ಟೀಲ್, ಮುಕುಂದ ಸುಮಿ, ಅಲ್ಟ್ರಾಟೆಕ್, ದೊಡ್ಲ ಡೈರಿ, ಎಕ್ಸ್ ಇಂಡಿಯಾ ಸೇರಿದಂತೆ ಅನೇಕ ಕಾರ್ಖಾನೆಗಳ ಕಂಪನಿಯ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವತಿಯಿಂದ ಅಂಗವಿಕಲರಿಗೆ ತ್ರಿಚಕ್ರ ವಾಹನಗಳ ವಿತರಣೆ ಮಾಡಲಾಯಿತು.
ಸಮಾಜದ ಅಂಚಿನಲ್ಲಿರುವ ಅಂಗವಿಕಲರು ಸ್ವಾಭಿಮಾನದಿಂದ ಬದುಕಲು ಮತ್ತು ತಮ್ಮ ದೈನಂದಿನ ಚಟುವಟಿಕೆಯನ್ನು ಸ್ವತಂತ್ರವಾಗಿ ನಿರ್ವಹಿಸಲು ಅನುಕೂಲವಾಗುವಂತೆ ಕಿರ್ಲೋಸ್ಕರ್ ಸೇರಿ ವಿವಿಧ ಕಂಪನಿಗಳು 50ಕ್ಕೂ ಹೆಚ್ಚು ತ್ರಿಚಕ್ರ ವಾಹನಗಳನ್ನು ದೇಣಿಗೆಯಾಗಿ ನೀಡಿದ್ದನ್ನು ಶುಕ್ರವಾರ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಸಂಸದ ರಾಜಶೇಖರ ಹಿಟ್ನಾಳ ಅವರು ವಿತರಣೆ ಮಾಡಿದರು.ಆನಂತರ ಮಾತನಾಡಿದ ಅವರು, ಖಾಸಗಿ ಸಂಸ್ಥೆಗಳು ಸರ್ಕಾರದೊಂದಿಗೆ ಕೈಜೋಡಿಸಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳುವುದು ಅತ್ಯಂತ ಶ್ಲಾಘನೀಯ ಎಂದರು. ಇಂತಹ ಉಪಕ್ರಮಗಳು ಅಂಕವಿಕಲರ ಬದುಕಿನಲ್ಲಿ ನಿಜವಾದ ಬದಲಾವಣೆ ತರಲಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಮಾತನಾಡಿ, ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆಯ (ಸಿಎಸ್ಆರ್) ಚಟುವಟಿಕೆ ಜಿಲ್ಲೆಯಲ್ಲಿ ಸಮಾವೇಶಾತ್ಮಕ ಬೆಳವಣಿಗೆಯನ್ನು ಉತ್ತೇಜಿಸುತ್ತಿವೆ ಎಂದು ಹೇಳಿದರು. ಅಂಗವಿಕಲರ ಸಬಲೀಕರಣಕ್ಕೆ ಇಂತಹ ಸಹಾಯಹಸ್ತ ಮಹತ್ವದ್ದಾಗಿದೆ ಎಂದು ಹೇಳಿದರು.ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ, ಕೊಪ್ಪಳ ಕಾರ್ಖಾನೆ ಮತ್ತು ಬಾಯ್ಲರ್ಗಳ ಸ್ವಾಸ್ಥ್ಯ ಇಲಾಖೆಯ ಸಹಾಯಕ ನಿರ್ದೇಶಕ ವಿಜಯಕುಮಾರ್ ಬಿ., ಗಂಗಾವತಿ ಕಾರ್ಮಿಕ ನಿರೀಕ್ಷಕ ಎಂ. ಅಶೋಕ, ಕೊಪ್ಪಳ ಕಾರ್ಮಿಕ ನಿರೀಕ್ಷಕಿ ಮಂಜುಳಾ ವಿಶ್ವನಾಥ, ಕುಷ್ಟಗಿ ಕಾರ್ಮಿಕ ನಿರೀಕ್ಷಕಿ ನಿವೇದಿತಾ, ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಪರವಾಗಿ ಶಿವಯ್ಯ ಸ್ವಾಮಿ, ಕಿರಣ್ ಶೇಜೆಕರ್, ಡಾ. ಪ್ರವೀಣ್, ವಿಕ್ರಂ ಪಾಟೀಲ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.