ತುರ್ತು ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧ: ಜಿಲ್ಲಾಧಿಕಾರಿ ಜಾನಕಿ

| Published : May 11 2025, 11:51 PM IST

ತುರ್ತು ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧ: ಜಿಲ್ಲಾಧಿಕಾರಿ ಜಾನಕಿ
Share this Article
  • FB
  • TW
  • Linkdin
  • Email

ಸಾರಾಂಶ

ಯುದ್ಧದಂತಹ ಸನ್ನಿವೇಶ ಹಾಗೂ ತುರ್ತು ಪರಿಸ್ಥಿತಿ ಎದುರಾದಲ್ಲಿ ಸಾರ್ವಜನಿಕರ ರಕ್ಷಣೆಗೆ ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ತಿಳಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಯುದ್ಧದಂತಹ ಸನ್ನಿವೇಶ ಹಾಗೂ ತುರ್ತು ಪರಿಸ್ಥಿತಿ ಎದುರಾದಲ್ಲಿ ಸಾರ್ವಜನಿಕರ ರಕ್ಷಣೆಗೆ ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ತಿಳಿಸಿದರು.

ಭಾನುವಾರ ಯುದ್ದ ಅಥವಾ ಇನ್ನಿತರ ವಿಪತ್ತು ನಿರ್ವಹಣೆ ಕುರಿತು ತುರ್ತು ಕ್ರಮ ಕೈಗೊಳ್ಳಲು ಗೂಗಲ್ ಮೀಟ್ ಮೂಲಕ ಉಪವಿಭಾಗಾಧಿಕಾರಿಗಳು ಹಾಗೂ ತಹಸೀಲ್ದಾರರೊಂದಿಗೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಗಳು ನಾಗರಿಕರ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಈಗಾಗಲೇ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಮೂರು ತಿಂಗಳವರೆಗೆ ಬೇಕಾಗುವಷ್ಟು ಆಹಾರ ಧಾನ್ಯಗಳ ದಾಸ್ತಾನು ಇಡಲಾಗುತ್ತಿದೆ.ಅಕ್ರಮವಾಗಿ ದಾಸ್ತಾನು ಹಾಗೂ ಕಾಳಸಂತೆಯಲ್ಲಿ ಮಾರಾಟವಾಗದಂತೆ ಹೆಚ್ಚಿನ ನಿಗಾ ವಹಿಸಲು ಆಹಾರ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಕುಡಿಯಲು ನೀರು ಹಾಗೂ ಆರೋಗ್ಯ ಸೌಲಭ್ಯಕ್ಕಾಗಿ ಬೆಡ್‌ ಹಾಗೂ ಔಷಧಿಗಳ ದಾಸ್ತಾನು ಇಡಲು ತಿಳಿಸಲಾಗಿದೆ. ತುರ್ತು ವಾಹನಗಳಿಗೆ ಬೇಕಾಗುವ ಇಂಧನ ವ್ಯವಸ್ಥೆ ಸಹ ಮಾಡಿಕೊಳ್ಳಲಾಗುತ್ತಿದೆ. ಅಗ್ನಿಶಾಮಕ ದಳದವರು ದಿನದ 24 ಗಂಟೆಗಳ ಕಾಲ ಸನ್ನದ್ದ ಸ್ಥಿತಿಯಲ್ಲಿರಲು ಸೂಚಿಸಲಾಗಿದೆ.

ಸಾಮಾಜಿಕ ತಾಣಗಳಲ್ಲಿ ಹರಡುವ ಸುಳ್ಳು ಸುದ್ದಿಗಳ ಮೇಲೆ ನಿರಂತರ ನಿಗಾವಹಿಸಲಾಗುತ್ತಿದ್ದು, ವದಂತಿ ಹರಡುವುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಯಾವುದೇ ವದಂತಿಗಳಿಗೆ ಕಿವಿಗೊಡದೇ ಸಾರ್ವಜನಿಕರು ಸೂಕ್ತ ತಿಳಿವಳಿಕೆ ಹೊಂದುವ ಅಗತ್ಯವಿದೆ. ದಿನದ 24 ಗಂಟೆಗಳ ಕಾಲ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರಯಲಾಗಿದೆ. ಸಹಾಯವಾಣಿ ಕೇಂದ್ರಗಳು ವ್ಯವಸ್ಥಿತವಾಗಿ ನಡೆಯಲು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲು ಸೂಚಿಸಲಾಗಿದೆ. ಸಹಾಯವಾಣಿ ಕೇಂದ್ರದ ಪ್ರತಿ ದಿನದ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ನೀಡಲಾಗಿರುವ ಮಾರ್ಗಸೂಚಿಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತಲುಪಿಸುವ ಕೆಲಸವಾಗಬೇಕು. ತುರ್ತು ಪರಿಸ್ಥಿತಿಯಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು. ಮಿಲಿಟರಿಯಲ್ಲಿ ಸೈನಿಕರು ಯಾವ ಸ್ಥಿತಿಯಲ್ಲಿ ಇದ್ದಾರೆ ಅದೇ ಸ್ಥಿತಿಯಲ್ಲಿ ನಾವು ಇದ್ದೇವೆ ಎಂಬ ಭಾವನೆ ಇಟ್ಟುಕೊಂಡು ಕೆಲಸ ಮಾಡಲು ತಿಳಿಸಿದರು. ಜಿಲ್ಲೆಯ ವಿವಿಧೆಡೆ ಮಾಕ್‌ಡ್ರಿಲ್‌ ನಡೆಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.ಸಭೆಯಲ್ಲಿ ಉಪವಿಭಾಗಾಧಿಕಾರಿಗಳಾದ ಸಂತೋಷ ಜಗಲಾಸರ, ಶ್ವೇತಾ ಬೀಡಿಕರ, ನಗರಾಭಿವೃದ್ಧಿ ಕೋಶದ ಪ್ರಭಾರಿಯೋಜನಾ ನಿರ್ದೇಶಕ ಸುರಖೋಡ ಸೇರಿದಂತೆ ಆಯಾ ತಾಲೂಕಿನ ತಹಸೀಲ್ದಾರ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಸಹಾಯವಾಣಿಕೇಂದ್ರ ಸ್ಥಾಪನೆ:

ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿ ದೂ.ಸಂ.08354-236240, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಕಂಟ್ರೋಲ್‌ ರೂಂ. ನಂ. 08354-235279, 9480803900, ಜಿಲ್ಲಾ ಅಗ್ನಿಶಾಮಕ ದಳ 101, 08354-236101ಗೆ ಕರೆ ಮಾಡಬಹುದಾಗಿದೆ.