ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ಸನ್ನದ್ಧ: ಕವಿತಾ ಎಸ್. ಮನ್ನಿಕೇರಿ

| Published : Oct 19 2025, 01:01 AM IST / Updated: Oct 19 2025, 01:02 AM IST

ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ಸನ್ನದ್ಧ: ಕವಿತಾ ಎಸ್. ಮನ್ನಿಕೇರಿ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯೋತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಹಕರಿಸಬೇಕು.

ಹೊಸಪೇಟೆ: ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ನವೆಂಬರ್‌ ಒಂದರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಶನಿವಾರ ಮಾತನಾಡಿದರು.

ಕನ್ನಡಾಂಬೆ ಭುವನೇಶ್ವರಿದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕನ್ನಡಿಗರ ನಾಡ ಹಬ್ಬ ರಾಜ್ಯೋತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಹಕರಿಸಬೇಕು. ರಾಷ್ಟ್ರಧ್ವಜಾರೋಹಣ, ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸಲು ಸೂಕ್ತ ಕ್ರಮವಹಿಸಬೇಕು ಎಂದರು.

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ವಿವಿಧ ಇಲಾಖೆಗಳ ವಿಶೇಷ ಯೋಜನೆಗಳನ್ನು ಸಾರ್ವಜನಿಕವಾಗಿ ಜಾಗೃತಿ ಮೂಡಿಸಲು ಫಲಕಗಳನ್ನು ಸಿದ್ಧತೆ ಪಡಿಸಿಕೊಳ್ಳಬೇಕು. ಅ.26ರ ರೊಳಗೆ ಎಲ್ಲ ಇಲಾಖೆಗಳು ವಿವರಗಳನ್ನು ಸಲ್ಲಿಸಬೇಕು ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣನವರ್ ಮಾತನಾಡಿ, ಪ್ರತಿ ವರ್ಷದಂತೆ ಈ ಬಾರಿ ಕನ್ನಡ ಪರ ಸಂಘಟನೆಗಳ ಯುವಕರು ಹಂಪಿಯ ಶ್ರೀವಿರೂಪಾಕ್ಷ ದೇಗುಲದಿಂದ ಕನ್ನಡ ಜ್ಯೋತಿಯನ್ನು ತರುವ ಮೂಲಕ ಜಿಲ್ಲಾ ಕ್ರೀಡಾಂಗಣದಲ್ಲಿನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಗೌರವಿಸಿ ಸನ್ಮಾನಿಸಲಾಗುವುದು ಎಂದರು.

ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಗುಂಡಿ ಮಾರುತಿ ಮಾತನಾಡಿ, ಹೊಸಪೇಟೆ ನಗರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಕನ್ನಡ ಪರ ಸಂಘಟನೆಗಳ ಮುಖಂಡ ಪಿ.ವೆಂಕಟೇಶ್ ಧ್ವನಿಗೂಡಿಸಿ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಗಳಲ್ಲಿ ಅಕ್ಷರಗಳನ್ನು ಶೇ.60 ರಷ್ಟು ಅಳತೆಯಲ್ಲಿ ನಮೂದಿಸುವಲ್ಲಿ ಅನೇಕರು ವಿಫಲರಾಗಿದ್ದಾರೆ. ಈ ಬಗ್ಗೆ ಜಾಗೃತಿ ಮೂಡಿಸಬೇಕಿದೆ ಎಂದರು.

ಜಿಪಂ ಸಿಇಒ ಅಕ್ರಂ ಷಾ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್, ಸಹಾಯಕ ಆಯುಕ್ತ ಪಿ.ವಿವೇಕಾನಂದ, ತಹಸೀಲ್ದಾರ ಎಂ.ಶೃತಿ, ಜಂಟಿ ಕೃಷಿ ನಿರ್ದೇಶಕ ಟಿ.ಮಂಜುನಾಥ, ತೋಟಗಾರಿಕೆ ಇಲಾಖೆ ಪಿ.ಜಿ.ಚಿದಾನಂದ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಲ್.ಆರ್. ಶಂಕರ ನಾಯ್ಕ, ನಗರಸಭೆ ಪೌರಾಯುಕ್ತ ಶಿವಕುಮಾರ್ ಯರಗುಡಿ, ಪರಿಶಿಷ್ಟ ಪಂಗಡ ಕಲ್ಯಾಣಾಧಿಕಾರಿ ಕೆ.ರವಿಕುಮಾರ್, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಇದ್ದರು.