ಸಾರಾಂಶ
ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ರಾಜ್ಯದ ಹಾಗೂ ಸ್ಥಳೀಯ ಕಲಾವಿದರಿಗೆ ಅವಕಾಶ ನೀಡದೆ ಅನ್ಯಾಯ ಮಾಡಲಾಗುತ್ತಿದೆ.
ಕನ್ನಡಪ್ರಭ ವಾರ್ತೆ ಮೈಸೂರು
ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ರಾಜ್ಯದ ಮಂಗಳವಾದ್ಯ ಕಲಾವಿದರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಕರ್ನಾಟಕ ರಾಜ್ಯ ಸವಿತಾ ಮಂಗಳವಾದ್ಯ ಸಂಗೀತಗಾರರ ಜಿಲ್ಲಾ ಹಾಗೂ ತಾಲೂಕು ಸಂಘದವರು ಮೈಸೂರು ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟಿಸಿದರು.ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ರಾಜ್ಯದ ಹಾಗೂ ಸ್ಥಳೀಯ ಕಲಾವಿದರಿಗೆ ಅವಕಾಶ ನೀಡದೆ ಅನ್ಯಾಯ ಮಾಡಲಾಗುತ್ತಿದೆ. ಯಾವುದೇ ವೇದಿಕೆಗಳಲ್ಲೂ ಅವಕಾಶ ಸಿಗುತ್ತಿಲ್ಲ. ಒಬ್ಬರಿಗೇ ಹಲವು ಕಾರ್ಯಕ್ರಮಗಳನ್ನು ನೀಡಲಾಗುತ್ತಿದೆ. ಉಳಿದ ಉತ್ತಮ ಕಲಾವಿದರು ಕಡೆಗಣನೆಗೆ ಒಳಗಾಗುತ್ತಿದ್ದಾರೆ. ಎಷ್ಟೇ ಅರ್ಜಿ ಹಾಕಿದರೂ ಅವಕಾಶ ಸಿಗುತ್ತಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.ಮುಂದಿನ ದಸರಾದಲ್ಲಿ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ನೀಡುವ ಅಧಿಕಾರಿಗಳು ಮತ್ತೆ ಅದೇ ಕೆಲಸ ಮಾಡುತ್ತಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಅರಮನೆ ಮಂಡಳಿ ಅಧಿಕಾರಿಗಳ ಭ್ರಷ್ಟತನದಿಂದಾಗಿ ನಿಜವಾದ ಕಲಾವಿದರು ಅನ್ಯಾಯಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ, ಮುಂದಿನ ದಸರಾದಲ್ಲಿ ಒಬ್ಬರಿಗೇ ಅವಕಾಶ ಕೊಡದೆ ಎಲ್ಲಾ ಕಲಾವಿದರಿಗೂ ಅವಕಾಶ ಮಾಡಿಕೊಡಬೇಕು ಎಂದು ಅವರು ಒತ್ತಾಯಿಸಿದರು.ಸಂಘದ ಅಧ್ಯಕ್ಷ ಎಸ್. ಪುಟ್ಟರಾಜು, ಎಂ.ಎನ್. ಶ್ರೀನಿವಾಸು, ಹರೀಶ್ ಪಾಂಡವ್, ನಾರಾಯಣ್, ಕೃಷ್ಣ, ಅಜಯ್, ಶ್ರೀಧರ್ ಮೊದಲಾದವರು ಇದ್ದರು.