ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತಿ ಸಮಿತಿ ಸಭೆ

| Published : Oct 09 2025, 02:01 AM IST

ಸಾರಾಂಶ

ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತಿ ಸಮಿತಿ ಸಭೆ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಸಫಾಯಿ ಕರ್ಮಚಾರಿಗಳ/ಮ್ಯಾನ್ಯುವೆಲ್ ಸ್ಕ್ಯಾವೆಂಜರ್‌ಗಳ ಜಿಲ್ಲಾ ಜಾಗೃತಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.ಸಭೆಯ ಆರಂಭದಲ್ಲಿ ಮಾತನಾಡಿದ ಸಮಿತಿ ಸದಸ್ಯ ಡಿ.ಆರ್.ರಾಜು, ಗೋಣಿಕೊಪ್ಪದಲ್ಲಿ ಪೌರಕಾರ್ಮಿಕರು ಎರಡು ಬದಿ ಚರಂಡಿ ನೀರು ಹರಿಯುವ ಮಧ್ಯದಲ್ಲಿ ಪ್ರಾಣಿಗಳಂತೆ ವಾಸ ಮಾಡುತ್ತಿದ್ದು, ಈ ಕುಟುಂಬಗಳಿಗೆ ನಿವೇಶನ ಒದಗಿಸಿ ಗೃಹಭಾಗ್ಯ ಯೋಜನೆಯಡಿ ಮನೆ ನಿರ್ಮಿಸಿಕೊಡಬೇಕು ಎಂದು ಮನವಿ ಮಾಡಿದರು.ಪೌರಕಾರ್ಮಿಕರು ಎರಡು ತಲೆಮಾರುಗಳಿಂದ ಅದೇ ಸ್ಥಳದಲ್ಲಿಯೇ ವಾಸ ಮಾಡುತ್ತಿದ್ದು, ಇವರಿಗೆ ಇದುವರೆಗೆ ನಿವೇಶನ ಒದಗಿಸಿಲ್ಲ. ಆದ್ದರಿಂದ ಮಾನವೀಯ ದೃಷ್ಟಿಯಿಂದ ಜಿಲ್ಲೆಯಲ್ಲಿನ ನಿವೇಶನ ರಹಿತ ಪೌರಕಾರ್ಮಿಕರಿಗೆ ವಸತಿ ಹಾಗೂ ಮನೆ ನಿರ್ಮಿಸಿಕೊಡಬೇಕು ಎಂದು ಡಿ.ಆರ್.ರಾಜು ಅವರು ಕೋರಿದರು.ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ತಾಲೂಕು ಪಂಚಾಯಿತಿ ಇಒ ಅವರು ಪೌರಕಾರ್ಮಿಕರಿಗೆ ನಿವೇಶನ ಗುರುತಿಸಬೇಕು. ಜೊತೆಗೆ ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಮನೆ ನಿರ್ಮಾಣಕ್ಕೆ ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.ಈ ಸಂದರ್ಭ ಡಿ.ಆರ್.ರಾಜು ಮಾತನಾಡಿ, ಪೌರಕಾರ್ಮಿಕರಲ್ಲಿ ಕೆಲವರಿಗೆ ಕಾಯಂ ಆಗಿದ್ದು, ಇನ್ನು ಹಲವರಿಗೆ ಕಾಯಂ ಮಾಡಿಲ್ಲ. ಆ ನಿಟ್ಟಿನಲ್ಲಿ ಪೌರಕಾರ್ಮಿಕರಿಗೆ ಸೂಕ್ತ ಸೇವಾ ಭದ್ರತೆ ಒದಗಿಸಬೇಕು ಎಂದರು. ಸಮಿತಿ ಸದಸ್ಯರಾದ ರಂಗಸ್ವಾಮಿ, ಪೌರಕಾರ್ಮಿಕರಿಗೆ ಸೇವಾ ಭದ್ರತೆ ಒದಗಿಸುವುದರ ಜೊತೆಗೆ ನೇಮಕಾತಿ ಆದೇಶ ಪತ್ರ ನೀಡಬೇಕು ಎಂದು ಮನವಿ ಮಾಡಿದರು.ಜಿಲ್ಲೆಯ ಸ್ಥಳೀಯ ಸಂಸ್ಥೆ ವ್ಯಾಪ್ತಿಗಳಲ್ಲಿ ಪೌರಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿದ್ದು, ನಿವೇಶನ ರಹಿತ ಪೌರಕಾರ್ಮಿಕ ಕುಟುಂಬಗಳಿಗೆ ನಿವೇಶನ ಒದಗಿಸಬೇಕಿದೆ. ಪೌರಕಾರ್ಮಿಕ ವೃತ್ತಿಯನ್ನೇ ನಂಬಿಕೊಂಡು ಬದುಕುತ್ತಿದ್ದು, ಇಂತಹ ಕುಟುಂಬಗಳಿಗೆ ನಿವೇಶನ ಜೊತೆಗೆ ಗೃಹಭಾಗ್ಯ ಯೋಜನೆಯಡಿ ಮನೆ ನಿರ್ಮಿಸಬೇಕು ಎಂದು ಸಮಿತಿ ಸದಸ್ಯರೊಬ್ಬರು ಹೇಳಿದರು.ಗೋಣಿಕೊಪ್ಪದಲ್ಲಿ ಇತ್ತೀಚೆಗೆ ಒಬ್ಬ ಪೌರಕಾರ್ಮಿಕ ಮೃತಪಟ್ಟಿದ್ದು, ಇವರ ಕುಟುಂಬಕ್ಕೆ ಯಾವುದೇ ರೀತಿಯ ಸೌಲಭ್ಯ ಕಲ್ಪಿಸಿಲ್ಲ. ಜೊತೆಗೆ ಮನೆ ಖಾಲಿ ಮಾಡಿ ಎಂದು ಒತ್ತಾಯಿಸುತ್ತಿದ್ದಾರೆ. ಈ ಸಂಬಂಧ ಅಧಿಕಾರಿಗಳು ಪೌರಕಾರ್ಮಿಕರ ಭದ್ರತೆಗೆ ಮುಂದಾಗಬೇಕು ಎಂದು ಡಿ.ಆರ್.ರಾಜು ಕೋರಿದರು.ಪೌರಕಾರ್ಮಿಕರನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವಂತಿಲ್ಲ. ಪೌರಕಾರ್ಮಿಕರಿಗೆ ಸ್ಥಳೀಯ ಸಂಸ್ಥೆಗಳಿಂದ ನೇರವಾಗಿ ವೇತನ ಪಾವತಿಸುವಂತಾಗಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್ ಹಲವು ಮಾಹಿತಿ ನೀಡಿದರು. ಸಮಿತಿ ಸದಸ್ಯರಾದ ರೂಪಾ, ತೇಜಾವತಿ, ರಾಜೇಶ್ವರಿ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ನಾಚಪ್ಪ, ಗಿರೀಶ್, ಗೋಪಿ, ತಾ.ಪಂ. ಇಒಗಳಾದ ಪರಮೇಶ್, ಅಪ್ಪಣ್ಣ, ತಹಸೀಲ್ದಾರ್ ಕಿರಣ್ ಗೌರಯ್ಯ ಇತರರು ಇದ್ದರು.

ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಮನವಿ:

ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.

ಸಮಿತಿ ಸದಸ್ಯರಾದ ಎಚ್.ಎಸ್.ಮುತ್ತಪ್ಪ, ಜಾಯ್ಸ್ ಮೆನೇಜಸ್, ಪಿ.ಪಿ.ಸುಕುಮಾರ, ಜೆ.ಎಲ್.ಜನಾರ್ಧನ, ಇತರರು ಸಭೆಯಲ್ಲಿ ಹಲವು ಮಾಹಿತಿ ನೀಡಿದರು. ಮುತ್ತಪ್ಪ ಅವರು ಮಾತನಾಡಿ ಗರಗಂದೂರು ಬಳಿಯ ಮಲ್ಲಿಕಾರ್ಜುನ ಕಾಲೋನಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಕೊಳವೆ ಬಾವಿ ಕೊರೆಸುವಂತಾಗಬೇಕು. ಮಡಿಕೇರಿ ನಗರದಲ್ಲಿ ಇದುವರೆಗೆ ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಆಗಿಲ್ಲ. ಈ ಬಗ್ಗೆ ತಕ್ಷಣವೇ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಅಂಬೇ್ಡಕರ್‌ ಪ್ರತಿಮೆ ನಿರ್ಮಾಣಕ್ಕೆ ಜಾಗ ಗುರ್ತಿಸಲಾಗಿದ್ದು, ನಗರಸಭೆ ಪೌರಾಯುಕ್ತರ ಗಮನ ಸೆಳೆಯುವಂತೆ ಸಲಹೆ ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಹಲವು ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಐಟಿಡಿಪಿ ಇಲಾಖೆ ಅಧಿಕಾರಿ ಎಸ್.ಹೊನ್ನೇಗೌಡ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಪುರಸಭೆ ಮುಖ್ಯಾಧಿಕಾರಿಗಳಾದ ಕೃಷ್ಣಪ್ರಸಾದ್, ನಾಚಪ್ಪ, ಗಿರೀಶ್, ತಾ.ಪಂ.ಇಒಗಳಾದ ಪರಮೇಶ್, ಅಪ್ಪಣ್ಣ, ತಹಶೀಲ್ದಾರರಾದ ಕಿರಣ್ ಗೌರಯ್ಯ ಇತರರು ಇದ್ದರು.