ಸಾರಾಂಶ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಜಿಲ್ಲೆಯಲ್ಲಿ ಜೂ.17ರಂದು ನಡೆಯಲಿರುವ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಸೌಹಾರ್ದಯುತವಾಗಿ ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ ಮಾಡಿದರು.ಇಲ್ಲಿನ ಜಿಲ್ಲಾ ಪೊಲೀಸ್ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಶಾಂತಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಈ ಹಬ್ಬವನ್ನು ಮುಸ್ಲಿಂ ಬಾಂಧವರು ಶಾಂತಿ-ಸೌಹಾರ್ದಯುತವಾಗಿ ನಡೆಯಲು ಜಿಲ್ಲಾಡಳಿತ ಅಗತ್ಯ ಸಹಕಾರ ನೀಡಲಿದೆ ಎಂದರು.
ಜಿಲ್ಲೆಯಲ್ಲಿ ಅಹಿತಕರ ಘಟನೆಗಳಿಗೆ ಯಾವುದೇ ಅವಕಾಶವಿಲ್ಲದಂತೆ ಸಮಾಧಾನವಾಗಿ ಹಬ್ಬ ಆಚರಿಸಿ. ಈ ಸಂಭ್ರಮಾಚರಣೆಯ ಪೂರ್ವದಲ್ಲಿ ಮೊಹಲ್ಲಾಗಳಲ್ಲಿನ ಮುಖಂಡರು ಅಲ್ಲಿನ ಯುವಕರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು. ಒಂದುವೇಳೆ ಅಹಿತಕರ ಘಟನೆಗಳು ನಡೆಯುತ್ತಿದ್ದಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಗೆ ಸಕಾಲದಲ್ಲಿ ಮಾಹಿತಿ ನೀಡಿ ಜವಾಬ್ದಾರಿಯುತವಾಗಿ ವರ್ತಿಸುವಂತೆ ಅವರು ಸಲಹೆ ನೀಡಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ಕುಮಾರ್ ಮಾತನಾಡಿ, ಹಬ್ಬದ ಸಂಭ್ರಮಾಚರಣೆಯಲ್ಲಿರುವವರಿಗೆ ಹಬ್ಬದಿಂದ ಹೊರಗುಳಿದಿರುವ ಅನ್ಯ ಕೋಮಿನವರು ಅಗತ್ಯ ಸಹಕಾರ ನೀಡಬೇಕು. ಸಮುದಾಯದ ಮುಖಂಡರು ತಮ್ಮ ಸಮುದಾಯದ ಯುವಕರಿಗೆ ಹಬ್ಬಶಾಂತಿಯುತವಾಗಿ ಆಚರಿಸಲು ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.
ಅಂದು ಜಿಲ್ಲಾಡಳಿತವು ಶಾಂತಿ ಮತ್ತು ಸುರಕ್ಷತೆಯ ದೃಷ್ಟಿಯಿಂದ ನೀಡುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸುರಕ್ಷತಾ ದೃಷ್ಟಿಯಿಂದ ಅಗತ್ಯ ವಿರುವ ಕಡೆಗಳಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲು ಕ್ರಮ ವಹಿಸಲಾಗುವುದು. ಕಳೆದ ವರ್ಷಗಳಲ್ಲಿ ಅಹಿತಕರ ಘಟನೆಗಳಿಗೆ ಕಾರಣವಾದವರಿಗೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ ಅಲ್ಲದೇ ಕೆಲವರನ್ನು ಗಡಿಪಾರು ಮಾಡಲಾಗಿದೆ ಎಂದರು.ಪ್ರಸ್ತುತ ಜಿಲ್ಲೆಯ 213 ಸ್ಥಳಗಳಲ್ಲಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಲಿದ್ದಾರೆ. ಆ ಸ್ಥಳಗಳಿಗೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ, ಅಗತ್ಯ ಭದ್ರತೆ ಒದಗಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಶಿವಮೊಗ್ಗ ಮಹಾನಗರಪಾಲಿಕೆಯ ಆಯುಕ್ತ ಮಾಯಣ್ಣಗೌಡ ಅವರು ಮಾತನಾಡಿ, ಹಬ್ಬ ನಡೆಯುವ ಮೂರು ದಿನಗಳ ಕಾಲ ನಗರದ ಸ್ವಚ್ಚತೆಗೆ ವಿಶೇಷ ಗಮನಹರಿಸಲಾಗಿದೆ ಅಲ್ಲದೆ ಅಗತ್ಯ ಸಿಬ್ಬಂಧಿಯನ್ನು ನಿಯೋಜಿಸಲಾಗಿದೆ. ಜಲಮಂಡಳಿ ವತಿಯಿಂದ ದೈನಂದಿನ ನೀರು ಪೂರೈಕೆ ಮಾಡುವುದರ ಜೊತೆಗೆ ಸುಮಾರು 25ಟ್ಯಾಂಕರ್ಗಳ ಮೂಲಕ ನೀರನ್ನು ಒದಗಿಸಲು ಕ್ರಮ ವಹಿಸಲಾಗಿದೆ ಎಂದರು.
ಪ್ರಾರ್ಥನಾ ಸ್ಥಳಗಳು, ಸಮೀಪದಲ್ಲಿನ ಚರಂಡಿ ಹಾಗೂ ರಾಜಾ ಕಾಲುವೆಗಳ ಸ್ವಚ್ಛತೆಗೆ ಈಗಾಗಲೇ ಕ್ರಮಕೈಗೊಳ್ಳಲಾಗಿದೆ. ಹಬ್ಬದ ದಿನಗಳಂದು ಪೌರ ಕಾರ್ಮಿಕರಿಗೆ ನೀಡಬೇಕಾಗಿದ್ದ ರಜೆಗೆ ಪರ್ಯಾಯ ದಿನವನ್ನು ನಿಗದಿಪಡಿಸಲು ಸೂಚಿಸಿದ್ದು, ಹಬ್ಬದ ದಿನದಂದು ನಗರದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ಸಂಗ್ರಹಕ್ಕೆ ವಿಶೇಷ ಗಮನಹರಿಸಲಾಗಿದೆ ಅಲ್ಲದೇ ಸಾಕಷ್ಟು ಕಸಸಂಗ್ರಹಿಸುವ ವಾಹನಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದರು.ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷರ ಅನಿಲ್ಕುಮಾರ್ ಭೂಮರೆಡ್ಡಿ, ಎ.ಜಿ.ಕಾರ್ಯಪ್ಪ, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಶಿವಯೋಗಿ ಎಲಿ, ತಹಶೀಲ್ದಾರ್ ಗಿರೀಶ್ ಮತ್ತಿತರರು ಉಪಸ್ಥಿತರಿದ್ದರು.ಗೋಹತ್ಯೆ ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಲು ಹಿಂದೂ ಜಾಗರಣಾ ವೇದಿಕೆ ಮನವಿ
ಸಾಗರ: ಬಕ್ರೀದ್ ಹಬ್ಬದ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ ಗೋಹತ್ಯೆ ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲಾದ್ಯಂತ ಪೊಲೀಸ್ ಇಲಾಖೆ ಗೋಹತ್ಯೆಯನ್ನು ತಡೆಯಲು ವಿಶೇಷ ಪ್ರಯತ್ನ ನಡೆಸುತ್ತಿದೆ. ಇದರಿಂದಾಗಿ ಕೆಲವು ಸ್ಥಳಗಳಲ್ಲಿ ಗೋಹತ್ಯೆ ಹತೋಟಿಗೆ ಬಂದಿದೆ. ಜೂ.೧೭ರಂದು ಬಕ್ರೀದ್ ಹಬ್ಬವಿದ್ದು, ಕಳೆದ ವರ್ಷ ಬಕ್ರೀದ್ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಅತಿಹೆಚ್ಚು ಗೋಹತ್ಯೆ ಪ್ರಕರಣಗಳು ದಾಖಲಾಗಿದ್ದವು. ಈ ವರ್ಷ ಅಂತಹ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವನ್ನು ಪೊಲೀಸ್ ಇಲಾಖೆ ತೆಗೆದುಕೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.ಸಾಗರ ತಾಲ್ಲೂಕಿನ ಮುಸ್ಲಿಂ ಬಾಹುಳ್ಯ ಇರುವ ಬೇರೆಬೇರೆ ಭಾಗಗಳಲ್ಲಿ ನೂರಾರು ಸಂಖ್ಯೆಯಲ್ಲಿ ಗೋವುಗಳನ್ನು ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಹತ್ಯೆ ಮಾಡಲು ತಂದು ಕಟ್ಟಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಗೋವಿನ ಮಾಲಿಕತ್ವದ ಪರವಾನಗಿಗಳು ಅವರ ಬಳಿ ಇದೆಯೋ, ಇಲ್ಲವೋ ಎಂಬುದನ್ನು ಪರಿಶೀಲಿಸಿ ಇಲಾಖೆ ಗೋವುಗಳ ರಕ್ಷಣೆಗೆ ಮುಂದಾಗಬೇಕು ಎಂದು ಮನವಿಯಲ್ಲಿ ವಿನಂತಿಸಲಾಗಿದೆ.ಗೋವುಗಳ ಮಾಲೀಕತ್ವ ಪರವಾನಗಿ ಇಲ್ಲದವರ ವಿರುದ್ಧ ಸೂಕ್ತ ಕಾನೂನುಕ್ರಮ ಜರುಗಿಸುವ ಜೊತೆಗೆ ಗೋವುಗಳನ್ನು ರಕ್ಷಣೆ ಮಾಡಬೇಕು. ಮುಸ್ಲೀಂ ಬಾಹುಳ್ಯ ಇರುವ ಪ್ರದೇಶಗಳಲ್ಲಿ, ಪ್ರಮುಖ ರಸ್ತೆಗಳಲ್ಲಿ ಗೋವುಗಳ ಅಕ್ರಮ ಸಾಗಾಣಿಕೆ ನಡೆಯದಂತೆ ಚೆಕ್ಪೋಸ್ಟ್ ನಿರ್ಮಿಸಲು ಮನವಿಯಲ್ಲಿ ಒತ್ತಾಯಿಸಲಾಗಿದೆ.ವೇದಿಕೆ ಜಿಲ್ಲಾ ಸಹ ಸಂಚಾಲಕ ಕೆ.ಎಚ್.ಸುಧೀಂದ್ರ, ಪ್ರಮುಖರಾದ ಕೋಮಲ್ ರಾಘವೇಂದ್ರ, ನಂದೀಶ್, ರಾಘವೇಂದ್ರ ಕಾಮತ್, ಗಣೇಶ್ ಇನ್ನಿತರರು ಹಾಜರಿದ್ದರು.