ಬಳಿಕ ಜಿಲ್ಲಾಧಿಕಾರಿ ಡಾ.ಕುಮಾರ್ ಅವರು ಪಾಂಡವಪುರ ಪಟ್ಟಣದ ಪಾಂಡವಪುರ- ನಾಗಮಂಗಲ ರಸ್ತೆಯಲ್ಲಿರುವ ಅಂಕೇಗೌಡ ಜ್ಞಾನ ಪ್ರತಿಷ್ಠಾನ ಪುಸ್ತಕ ಮನೆಗೆ ಭೇಟಿ ನೀಡಿ ಅಂಕೇಗೌಡ ಅವರೊಂದಿಗೆ ಸಮಾಲೋಚನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಮಂಡ್ಯ
ಪದ್ಮಶ್ರೀ ಪುರಸ್ಕೃತ ಅಂಕೇಗೌಡ ಅವರ ಪುಸ್ತಕ ಮನೆಗೆ ಸುಮಾರು ಎರಡು ಎಕರೆ ಜಾಗ ಒದಗಿಸುವ ಸಂಬಂಧ ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಾಲೂಕಿನ ಎಲೆಚಾಕನಹಳ್ಳಿ ಗ್ರಾಮದಲ್ಲಿ ಕರ್ನಾಟಕ ಗೃಹ ಮಂಡಳಿಯಿಂದ ಅಭಿವೃದ್ಧಿಪಡಿಸಲಾಗುತ್ತಿರುವ ವಸತಿ ಬಡಾವಣೆಗೆ ಭೇಟಿ ನೀಡಿ, ಲಭ್ಯವಿರುವ ಸಿಎ ನಿವೇಶನಗಳನ್ನು ಪರಿಶೀಲಿಸಿದರು.ಈ ಸಂದರ್ಭದಲ್ಲಿ ಸಂಬಂಧಿತ ಅಧಿಕಾರಿಗಳೊಂದಿಗೆ ಸ್ಥಳದ ಲಭ್ಯತೆ, ಸೂಕ್ತತೆ ಹಾಗೂ ಅಗತ್ಯ ಮೂಲಸೌಕರ್ಯಗಳ ಕುರಿತು ಚರ್ಚಿಸಿ ಮಾಹಿತಿ ಪಡೆದುಕೊಂಡರು.
ಬಳಿಕ ಜಿಲ್ಲಾಧಿಕಾರಿ ಡಾ.ಕುಮಾರ್ ಅವರು ಪಾಂಡವಪುರ ಪಟ್ಟಣದ ಪಾಂಡವಪುರ- ನಾಗಮಂಗಲ ರಸ್ತೆಯಲ್ಲಿರುವ ಅಂಕೇಗೌಡ ಜ್ಞಾನ ಪ್ರತಿಷ್ಠಾನ ಪುಸ್ತಕ ಮನೆಗೆ ಭೇಟಿ ನೀಡಿ ಅಂಕೇಗೌಡ ಅವರೊಂದಿಗೆ ಸಮಾಲೋಚನೆ ನಡೆಸಿದರು. ಈ ವೇಳೆ ಗ್ರಂಥಾಲಯದ ಚಟುವಟಿಕೆಗಳು, ಸಾರ್ವಜನಿಕರಿಗೆ ದೊರೆಯುತ್ತಿರುವ ಸೌಲಭ್ಯಗಳು ಹಾಗೂ ಭವಿಷ್ಯದ ಅಭಿವೃದ್ಧಿ ಯೋಜನೆಗಳ ಕುರಿತು ಮಾಹಿತಿ ಪಡೆದು ಸಂಸ್ಥೆಯ ವಿಸ್ತರಣೆ ಮತ್ತು ಜ್ಞಾನ ಪ್ರಸಾರದ ಉದ್ದೇಶದಿಂದ ಎರಡು ಎಕರೆ ಜಾಗ ಒದಗಿಸುವ ಕುರಿತು ಸ್ಥಳ ಪರಿಶೀಲನೆ ನಡೆಸಿ ಚರ್ಚಿಸಿದರು.ಜಿಲ್ಲೆಯಲ್ಲಿ ಓದು ಸಂಸ್ಕೃತಿಯನ್ನು ಉತ್ತೇಜಿಸುವುದು, ಯುವಜನರಲ್ಲಿ ಜ್ಞಾನಾರ್ಜನೆಗೆ ಪೂರಕ ವಾತಾವರಣ ನಿರ್ಮಿಸುವುದು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಶೈಕ್ಷಣಿಕ ಮತ್ತು ಜ್ಞಾನ ಸಂಪನ್ಮೂಲಗಳನ್ನು ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.