ಅನುಸೂಚಿತ ಜಾತಿ, ಪಂಗಡಗಳ ಜಿಲ್ಲಾ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿ ಸಭೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಜಿಲ್ಲೆಯಲ್ಲಿ ಅನುಸೂಚಿತ ಜಾತಿ, ಪಂಗಡಗಳಿಗೆ ಸೇರಿದ ಕುಟುಂಬಗಳ ಮೇಲಿನ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ವ್ಯಾಜ್ಯಗಳನ್ನು ಶೀಘ್ರ ಇತ್ಯರ್ಥಪಡಿಸಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿ, ಪಂಗಡಗಳ ಜಿಲ್ಲಾ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಸಂತ್ರಸ್ತರ ಪರವಾಗಿ ಸಾಕ್ಷಿಗಳು ಸಮರ್ಪಕ ಹೇಳಿಕೆ ದಾಖಲಿಸಲು ಅವರಿಗೆ ಸರಿಯಾದ ಮಾರ್ಗದರ್ಶನ ಮಾಡಬೇಕು. ಅವರಿಗೆ ಸರ್ಕಾರದಿಂದ ಸಿಗುವ ಸೌಲಭ್ಯ ಸಕಾಲದಲ್ಲಿ ದೊರೆಯುವಂತೆ ನೋಡಿಕೊಳ್ಳಬೇಕು ಎಂದರು. ಜಾತಿ ನಿಂದನೆ ಪ್ರಕರಣ ಹೂಡುವ ಸರ್ಕಾರದ ನಿಯಮ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಇದಕ್ಕೆ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸ್ಪಂದಿಸಿ ಕಾರ್ಯ ನಿರ್ವಹಿಸಬೇಕು ಎಂದರು.

ಒತ್ತಾಯಕ್ಕೆ ಮಣಿದು ಯಾವುದೇ ದೌರ್ಜನ್ಯ ಪ್ರಕರಣ ದಾಖಲಾಗಬಾರದು. ನೈಜ ವಿಷಯ ಗಮನದಲ್ಲಿಟ್ಟುಕೊಂಡು ಪ್ರಕರಣ ದಾಖಲಿಸಬೇಕು. ಪ್ರಥಮ ವರ್ತಮಾನ ವರದಿ ಆಧಾರದ ಮೇಲೆ ಸೂಕ್ತ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಅನುಸೂಚಿತ ಜಾತಿ, ಪಂಗಡಗಳ ಜನರು ವಾಸಿಸುವ ಪ್ರದೇಶಕ್ಕೆ ಅಗತ್ಯ ಮೂಲಭೂತ ಸೌಲಭ್ಯ ಸೇರಿದಂತೆ ಅವರಿಗೆ ನಿಯಮಾನುಸಾರ ವಸತಿ ನಿವೇಶನಗಳ ಹಕ್ಕುಪತ್ರಗಳನ್ನು ನೀಡಲು ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಕೈಗೊಳ್ಳುವುದಾಗಿ ತಿಳಿಸಿದರು.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಮಾತನಾಡಿ, ಅನುಸೂಚಿತ ಜಾತಿ, ಪಂಗಡಗಳಿಗೆ ಸೇರಿದ ಕುಟುಂಬಗಳ ಮೇಲಿನ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಬಾಕಿ ಇರುವ ದೋಷಾರೋಪಣ ಪಟ್ಟಿಗೆ ಸಂಬಂಧಪಟ್ಟಂತೆ ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಾಲತಿ, ಸರ್ಕಾರಿ ಅಭಿಯೋಜಕರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.