ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರು
ಮಾ.21ರಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ವ್ಯವಸ್ಥಿತ ಹಾಗೂ ನ್ಯಾಯಸಮ್ಮತ ರೀತಿಯಲ್ಲಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ನಗರದ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲಾ ಪರೀಕ್ಷಾ ಕೇಂದ್ರಗಳ ಮೇಲೆ ತೀವ್ರ ನಿಗಾ ವಹಿಸಬೇಕು. ಯಾವುದೇ ರೀತಿಯಿಂದ ಲೋಪದೋಷ ಆಗದಂತೆ ಕಾರ್ಯ ನಿರ್ವಹಿಸಬೇಕು ಎಂದರು.
ಜಿಲ್ಲೆಯ ವ್ಯಾಪ್ತಿಯ 133 ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತಿದ್ದು, ಪರೀಕ್ಷಾ ಕೇಂದ್ರದ 200 ಮೀ. ಸುತ್ತಾ ಸಾರ್ವಜನಿಕರು ಮತ್ತು ಪಾಲಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಜೆರಾಕ್ಸ್ ಅಂಗಡಿಗಳನ್ನು ಕೂಡ ತೆರೆಯುವಂತಿಲ್ಲ. ಸರ್ಕಾರ ನೀಡುವ ಎಲ್ಲಾ ಆದೇಶಗಳನ್ನು ಪರಿಪಾಲನೆ ಮಾಡುವ ಮೂಲಕ ಪರೀಕ್ಷೆ ಸುವ್ಯವಸ್ಥೆ ನಡೆಯುವಂತೆ ನೋಡಿಕೊಳ್ಳಬೇಕು ಹಾಗೂ ನಿಯಮಗಳನ್ನು ಸರಿಯಾಗಿ ಪಾಲಿಸುವಂತೆ ಅವರು ಸೂಚಿಸಿದರು.ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದ್ದು, ಅಭ್ಯರ್ಥಿಗಳ ಅನುಕೂಲಕ್ಕಾಗಿ ಸೂಕ್ತ ಸೂಚನಾ ಫಲಕಗಳ ವ್ಯವಸ್ಥೆ ಮಾಡಲಾಗಿದೆ. ಅಭ್ಯರ್ಥಿಗಳಿಗೆ ಅಗತ್ಯ ಅಸನದ ವ್ಯವಸ್ಥೆ ಮಾಡಲಾಗಿದ್ದು, ಕುಡಿಯುವ ನೀರು, ಶೌಚಾಲಯ ಹಾಗೂ ಇತರೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಮೊಬೈಲ್ ಸ್ವಾಧೀನಾಧಿಕಾರಿಯನ್ನು ನೇಮಿಸಲಾಗಿದೆ. ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಗೂ ಪ್ರಶ್ನಾಪತ್ರಿಕೆ ಪಾಲಕರನ್ನು ಆಯೋಜಿಸಲಾಗಿದೆ ಎಂದು ಅವರು ವಿವರಿಸಿದರು.
ಜಿಪಂ ಸಿಇಒ ಯುಕೇಶ್ ಕುಮಾರ್, ಎಸ್ಪಿ ಎನ್. ವಿಷ್ಣುವರ್ಧನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು, ಡಿಸಿಪಿ ಎಂ. ಮುತ್ತುರಾಜು, ಡಿಡಿಪಿಐ ಜವರೇಗೌಡ, ಡಿಡಿಪಿಯು ಮರಿಸ್ವಾಮಿ ಮೊದಲಾದವರು ಇದ್ದರು.133 ಪರೀಕ್ಷಾ ಕೇಂದ್ರಗಳುಜಿಲ್ಲೆಯ ಎಚ್.ಡಿ. ಕೋಟೆ 12, ಹುಣಸೂರು 15, ಕೆ.ಆರ್. ನಗರ 11, ಮೈಸೂರು ಉತ್ತರ 19, ಮೈಸೂರು ದಕ್ಷಿಣ 15, ಮೈಸೂರು ಗ್ರಾಮಾಂತರ 18, ನಂಜನಗೂಡು 1, ಪಿರಿಯಾಪಟ್ಟಣ 12, ಟಿ. ನರಸೀಪುರ 13 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 133 ಪರೀಕ್ಷಾ ಕೇಂದ್ರಗಳಿವೆ.
ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳ ವಿವರ- ಮುಖ್ಯ ಅಧೀಕ್ಷಕರು 133, ಉಪಮುಖ್ಯ ಅಧೀಕ್ಷಕರು 24, ಮಾರ್ಗಾಧಿಕಾರಿಗಳು 54, ಸ್ಥಾನಿಕ ಜಾಗೃತ ದಳದ ಕಾರ್ಯಕ್ಕೆ ಅಧಿಕಾರಿಗಳು 133, ಮೊಬೈಲ್ ಫೋನ್ ಸ್ವಾಧಿನಾಧಿಕಾರಿಗಳು 133, ತಾಲೂಕು ಹಂತದ ಜಾಗೃತಿ ದಳ 3 ಹಾಗೂ ಜಿಲ್ಲಾ ಹಂತದ ಜಾಗೃತ ದಳ 3 ನಿಯೋಜಿಸಲಾಗಿದೆ.ಜಿಲ್ಲೆಯಲ್ಲಿ ಮಾ.21 ರಿಂದ ಏಪ್ರಿಲ್ 4 ರವರೆಗೆ ಪರೀಕ್ಷೆಗಳು ಕಟ್ಟು ನಿಟ್ಟಾಗಿ ಪರೀಕ್ಷೆ ನಡೆಯಲಿದೆ. 133 ಪರೀಕ್ಷಾ ಕೇಂದ್ರಗಳಲ್ಲಿ 19114 ಬಾಲಕರು, 18790 ಬಾಲಕಿಯರು ಸೇರಿದಂತೆ ಒಟ್ಟು 37904 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.
- ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾಧಿಕಾರಿ