ಬೈಕ್ ರ‍್ಯಾಲಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಚಾಲನೆ

| Published : Feb 23 2024, 01:47 AM IST

ಸಾರಾಂಶ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ದಿನಾಚರಣೆ ಅಂಗವಾಗಿ ಜಿಲ್ಲಾದ್ಯಂತ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾ ಗುರುವಾರ ದೇವಗಿರಿ ಗ್ರಾಮಕ್ಕೆ ಆಗಮಿಸಿದೆ.

ಪುಷ್ಪಾರ್ಚನೆ ಮೂಲಕ ಸಂವಿಧಾನ ಜಾಥಾಕ್ಕೆ ಸ್ವಾಗತ

ಕನ್ನಡಪ್ರಭ ವಾರ್ತೆ ಹಾವೇರಿ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ದಿನಾಚರಣೆ ಅಂಗವಾಗಿ ಜಿಲ್ಲಾದ್ಯಂತ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾ ಗುರುವಾರ ದೇವಗಿರಿ ಗ್ರಾಮಕ್ಕೆ ಆಗಮಿಸಿದೆ. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಆಯೋಜಿಸಲಾದ ಬೈಕ್ ರ‍್ಯಾಲಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಬೈಕ್ ಓಡಿಸುವುದರ ಮೂಲಕ ಚಾಲನೆ ನೀಡಿದರು.

ಸಂವಿಧಾನ ಜಾಗೃತಿ ಜಾಥಾ ದೇವಗಿರಿಗೆ ಆಗಮಿಸುವ ಮಾರ್ಗಮಧ್ಯದಲ್ಲಿ ಸಂಭ್ರಮದಿಂದ ಜಾಥಾವನ್ನು ಸ್ವಾಗತಿಸಲಾಯಿತು. ಡಾ. ಬಿ.ಆರ್. ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ರಾಘುನಂದನ್ ಮೂರ್ತಿ ಪುಷ್ಪಾರ್ಚನೆ ಮಾಡಿ ಸ್ವಾಗತಿಸಿದರು. ನಂತರ ಬೈಕ್ ರ‍್ಯಾಲಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ. ಗೋಪಾಲ, ಉಪ ವಿಭಾಗಾಧಿಕಾರಿ ಚೆನ್ನಪ್ಪ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಮೃತಗೌಡ ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಪ್ರವೀಣ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜಾನಾಯ್ಕ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜ.೨೬ರಂದು ಆರಂಭಗೊಂಡ ಈ ಸಂವಿಧಾನ ಜಾಗೃತಿ ಜಾಥಾ ಜಿಲ್ಲೆಯ ೨೨೩ ಗ್ರಾಮ ಪಂಚಾಯಿತಿ ಹಾಗೂ ೧೦ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಎರಡು ಮಾರ್ಗಗಳಲ್ಲಿ ಸಂಚರಿಸಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನದ ಆಶಯಗಳನ್ನು ಜನರಿಗೆ ತಲುಪಿಸುವ ಯಶಸ್ವಿಯಾಗಿದೆ. ಈ ಜಾಗೃತಿ ಜಾಥಾ ಫೆ. ೨೩ರಂದು ಬೆಳಗ್ಗೆ ೧೦.೩೦ಕ್ಕೆ ಹಾವೇರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾರೋಪಗೊಳ್ಳಲಿದೆ.

ಜಾಗೃತಿ ರಥವು ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಜಿಲ್ಲೆಯ ಮಹಾನ್ ವ್ಯಕ್ತಿಗಳಾದ ಕನಕದಾಸ, ಸರ್ವಜ್ಞ, ಶಿಶುನಾಳ ಷರೀಫ್ ಒಳಗೊಂಡಂತೆ ಮಹನೀಯರ ಪ್ರಕೃತಿ ಹೊತ್ತು ಸಾಮಾಜಿಕ ಸಮಾನತೆಯ ಸಂದೇಶವನ್ನು ಗ್ರಾಮ ಗ್ರಾಮಗಳಿಗೆ ತಲುಪಿಸಿದೆ.

ಇದರೊಂದಿಗೆ ಭಾರತ ಸಂವಿಧಾನದ ಸಂದೇಶದ ಕಿರುಚಿತ್ರ ಹಾಗೂ ಆರ್ಥಿಕ ಶಕ್ತಿ ನೀಡಲು ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಸಾಕ್ಷ್ಯಚಿತ್ರ ಪ್ರದರ್ಶನ, ಜಾನಪದ ಸಂಗೀತ, ಬೀದಿನಾಟಕ ಹಾಗೂ ಸಂವಿಧಾನ ಕುರಿತ ಕಿರು ಉಪನ್ಯಾಸ ಮಾಲಿಕೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಭಾರತದ ಸಂವಿಧಾನ ಮೂಲ ಆಶಯಗಳನ್ನು ಮನೆ ಮನೆಗೆ ತಲುಪಿಸಲು ಕಾರ್ಯ ಮಾಡಿದೆ.