ನವಭಾರತ ಸಾಕ್ಷರತಾ ಕಾರ್ಯಕ್ರಮ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಸೂಚನೆ

| Published : Oct 27 2023, 12:31 AM IST

ನವಭಾರತ ಸಾಕ್ಷರತಾ ಕಾರ್ಯಕ್ರಮ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯಲ್ಲಿ 15 ವರ್ಷ ಮೇಲ್ಪಟ್ಟ ಅನಕ್ಷರಸ್ಥರನ್ನು ಸಾಕ್ಷರರನ್ನಾಗಿಸಲು ಉಲ್ಲಾಸ್ ನವಭಾರತ ಸಾಕ್ಷರತಾ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚಿಸಿದರು
ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆ ಕನ್ನಡಪ್ರಭ ವಾರ್ತೆ ಚಾಮರಾಜನಗರ ಜಿಲ್ಲೆಯಲ್ಲಿ 15 ವರ್ಷ ಮೇಲ್ಪಟ್ಟ ಅನಕ್ಷರಸ್ಥರನ್ನು ಸಾಕ್ಷರರನ್ನಾಗಿಸಲು ಉಲ್ಲಾಸ್ ನವಭಾರತ ಸಾಕ್ಷರತಾ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನವಭಾರತ ಸಾಕ್ಷರತಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಯಸ್ಕರ ಶಿಕ್ಷಣ ಎಂಬುದು ಪ್ರಸ್ತುತ ಎಲ್ಲರಿಗೂ ಶಿಕ್ಷಣ ಎಂಬಂತಾಗಿದೆ. 15 ವರ್ಷ ಮೇಲ್ಪಟ್ಟ ಅನಕ್ಷರಸ್ಥರಿಗೆ ಓದು, ಬರಹ, ಸುಲಭ ಲೆಕ್ಕಾಚಾರ ಮಾಡುವುದನ್ನು ಬುನಾದಿ ಶಿಕ್ಷಣದ ಜತೆಗೆ ಕೌಶಲ್ಯಾಭಿವೃದ್ದಿ, ಚಟುವಟಿಕಾಭಿವೃದ್ದಿ, ಮುಂದುವರಿದ ಶಿಕ್ಷಣ, ಡಿಜಿಟಲ್ ಸಾಕ್ಷರತೆ ಕುರಿತು ಅರಿವು ಮೂಡಿಸಬೇಕಿದೆ. ನವಭಾರತ ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ ಒಟ್ಟಾರೆ ಸಾಕ್ಷರತಾ ಪ್ರಮಾಣವನ್ನು ಹೆಚ್ಚಳ ಮಾಡಬೇಕಿದೆ ಎಂದು ತಿಳಿಸಿದರು. ಸಾಕ್ಷರತೆ ಮೂಲಕ ಅನಕ್ಷರಸ್ಥರಲ್ಲಿ ಸ್ವಾವಲಂಬನೆ ಹೆಚ್ಚಿಸಬೇಕಿದೆ. ನಿರಂತರ ಕಲಿಕೆ ಮೂಲಕ ಜೀವನಮಟ್ಟ ಸುಧಾರಣೆ, ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡಬೇಕಿದೆ. ನಗರ ಗ್ರಾಮೀಣ ಪ್ರದೇಶಗಳ ಮಧ್ಯೆ ಇರುವ ಸಾಕ್ಷರತಾ ಪ್ರಮಾಣದ ಅಂತರ ಕಡಿಮೆ ಮಾಡಬೇಕಿದೆ. ಜನಗಣತಿ ಸಮೀಕ್ಷೆ ಪ್ರಕಾರ ಸಾಕ್ಷರತಾ ಪ್ರಮಾಣ ಮಾಹಿತಿಯೊಂದಿಗೆ ಜಿಲ್ಲೆಯ ಸಾಕ್ಷರರ ಸಂಖ್ಯೆ ಹೆಚ್ಚು ಮಾಡಲು ವಿಶೇಷ ಆದ್ಯತೆ ನೀಡಬೇಕು ಎಂದರು. ಗ್ರಾಮ ಪಂಚಾಯಿತಿಗಳ ಪಾತ್ರ ಸಂಪೂರ್ಣ ಸಾಕ್ಷರತಾ ಆಂದೋಲನ ಕಾರ್ಯಕ್ರಮದಲ್ಲಿ ಪ್ರಮುಖವಾಗಿದೆ. ಚುನಾಯಿತ ಪ್ರತಿನಿಧಿಗಳ ಸಹಕಾರ ಪಡೆಯಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿಗಳ ಅಧಿಕಾರಿಗಳನ್ನು ತೊಡಗಿಸಿಕೊಂಡು ನವಭಾರತ ಸಾಕ್ಷರತಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಆಂದೋಲನ ಮಾದರಿಯಲ್ಲಿ ಕಾರ್ಯಕ್ರಮ ನಿಗದಿ ಮಾಡಿಕೊಂಡು ಸಂಪೂರ್ಣ ಸಾಕ್ಷರತೆ ಸಾಧಿಸುವಲ್ಲಿ ಮುಂದಾಗಬೇಕೆಂದು ತಿಳಿಸಿದರು. ಇದೇ ಸಂದರ್ಭದಲ್ಲಿ ನವಭಾರತ ಸಾಕ್ಷರತಾ ಕಾರ್ಯಕ್ರಮ ಕುರಿತ ಪೋಸ್ಟರ್, ಕಿರು ಹೊತ್ತಿಗೆ ಹಾಗೂ ಮಡಿಕೆ ಪತ್ರಗಳನ್ನು ಅವರು ಬಿಡುಗಡೆ ಮಾಡಿದರು. ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೆಶಕ ರಾಮಚಂದ್ರರಾಜೇ ಅರಸ್, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲ ಕಾಶಿನಾಥ್, ಜಿಲ್ಲಾ ವಯಸ್ಕರ ಶಿಕ್ಷಣ ಅಧಿಕಾರಿ ಜಿ.ಎ. ಲೋಕೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೆಶಕ ಮಂಜುನಾಥ ಪ್ರಸನ್ನ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಗೀತಾಲಕ್ಷ್ಮಿ, ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಅಧಿಕಾರಿ ಡಾ. ರವಿಕುಮಾರ್‌ ಇದ್ದರು. ಸ್ವಯಂ ಸೇವಕರಿಂದ ಬೋಧನೆ ಗ್ರಾಮ ಪಂಚಾಯಿತಿಗಳಲ್ಲಿ ಸ್ವಯಂ ಸೇವಕ ಬೋಧಕರ ಮೂಲಕ ಬೋಧನೆ ಮಾಡಿಸಿ ಮೌಲ್ಯಮಾಪನ ಒಳಪಡಿಸುವ ಪ್ರಕ್ರಿಯೆ ನಡೆಯಬೇಕು. ಸ್ವಯಂ ಸೇವಕ ಬೋಧಕರನ್ನು ನಿಯೋಜಿಸಿಕೊಳ್ಳುವಾಗ ವಿದ್ಯಾರ್ಥಿಗಳನ್ನು ಸಹ ತೊಡಗಿಸಿಕೊಳ್ಳಬಹುದು. ಇದರಿಂದ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಳಕಳಿ ಮನೋಭಾವ ಬೆಳೆಸಲು ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಉತ್ತೇಜನ ನೀಡಬೇಕು ಎಂದು ತಿಳಿಸಿದರು. ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನವಭಾರತ ಸಾಕ್ಷರತಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯಲ್ಲಿ ನವಭಾರತ ಸಾಕ್ಷರತಾ ಕಾರ್ಯಕ್ರಮ ಕುರಿತ ಪೋಸ್ಟರ್, ಕಿರು ಹೊತ್ತಿಗೆ ಹಾಗೂ ಮಡಿಕೆ ಪತ್ರಗಳನ್ನು ಅವರು ಬಿಡುಗಡೆ ಮಾಡಿದರು.