ಸಾರಾಂಶ
ಕನ್ನಡಪ್ರಭ ವಾರ್ತೆ ಇಂಡಿ
ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲಕುಮಾರ ಘೋಷ್ ಭೇಟಿ ನೀಡಿ ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ವಿಭಾಗ, ಹೆರಿಗೆ ವಿಭಾಗ ಹಾಗೂ ನೇತ್ರ ತಪಾಸಣೆ ವಿಭಾಗಗಳಿಗೆ ತೆರಳಿ ಕಾರ್ಯ ವೈಖರಿಯನ್ನು ಪರಿಶೀಲಿಸಿದರು. ಆಸ್ಪತ್ರೆಯ ಅಭಿವೃದ್ಧಿ ಕಾರ್ಯಗಳ ಕುರಿತು ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು.ಆಸ್ಪತ್ರೆಯ ಕಾರ್ಯವೈಖರಿಯನ್ನು ಕಂಡು ಪ್ರಶಂಸೆ ವ್ಯಕ್ತಪಡಿಸಿದ ಅವರು, ವಿಜಯಪುರ ಜಿಲ್ಲೆಯ ಬೇರೆ ಆಸ್ಪತ್ರೆಗಳನ್ನು ನೋಡಲಾಗಿದ್ದು, ಈ ಆಸ್ಪತ್ರೆಯ ಕಾರ್ಯ ವೈಖರಿ ಹಾಗೂ ಪ್ರಗತಿಯನ್ನು ಕಂಡು ಖುಷಿಯಾಯಿತು ಎಂದರು. ಮುಂದಿನ ದಿನಗಳಲ್ಲಿ ಇದೇ ರೀತಿಯಾಗಿ ಸಾರ್ವಜನಿಕರಿಗೆ ಉತ್ತಮ ಸೇವೆಗಳನ್ನು ನೀಡುವಂತೆ ಆಸ್ಪತ್ರೆಯ ಎಲ್ಲಾ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೂಚಿಸಿದರು. ಆಸ್ಪತ್ರೆಯ ಅಭಿವೃದ್ಧಿ ಕಾರ್ಯದಲ್ಲಿ ಸದಾ ನಿಮ್ಮ ಜೊತೆಯಲ್ಲಿ ಇರುವುದಾಗಿ ಭರವಸೆ ನೀಡಿದರು.ಆಸ್ಪತ್ರೆಯಲ್ಲಿ ತಿಂಗಳಿಗೆ ಸರಾಸರಿ 90 ರಿಂದ 95ರವರೆಗೆ ಸಾಧಾರಣ ಹೆರಿಗೆಗಳು ಹಾಗೂ 28 ರಿಂದ 30 ರವರೆಗೆ ಸಿಜೇರಿಯನ್ ನಡೆಯುತ್ತಿರುವ ಬಗ್ಗೆ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಇಂಗಳೇಶ.ಆರ್.ಎಸ್ ವಿವರಿಸಿದರು. ಸಾರ್ವಜನಿಕ ಆಸ್ಪತ್ರೆಯ ಮುಂಭಾಗದಲ್ಲಿ ಸಸಿ ನೆಡುವುದರ ಮೂಲಕ ಜುಲೈ-1 ರಾಷ್ಟ್ರೀಯ ವೈದ್ಯರ ದಿನಾಚರಣೆಯ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಕಂದಾಯ ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತಕುಮಾರ ಗುಣಾರ, ತಹಸೀಲ್ದಾರ್ ಬಿ.ಎಸ್.ಕಡಕಬಾವಿ, ತಾಲೂಕಾ ಆರೋಗ್ಯ ಅಧಿಕಾರಿ ಡಾ.ಕೃಷ್ಣಕುಮಾರ ಜಾಧವ ಹಾಗೂ ಆಸ್ಪತ್ರೆ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.