ಹಾವೇರಿ: ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸೇವೆಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸುವ ಉದ್ದೇಶದಿಂದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮಂಗಳವಾರ ಶಿಗ್ಗಾಂವಿ ತಾಲೂಕಿನ ಹಲವು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಂಕಾಪುರ ಪಟ್ಟಣದಲ್ಲಿರುವ ನವಿಲುಧಾಮ ಹಾಗೂ ಕಿಲಾರಿ ತಳಿ ಗೋವು ಸಂವರ್ಧನಾ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಕಾರ್ಯಚಟುವಟಿಕೆಗಳು, ಪ್ರಾಣಿ ಸಂರಕ್ಷಣೆ ಹಾಗೂ ನಿರ್ವಹಣಾ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬಳಿಕ ಐತಿಹಾಸಿಕ ನಗರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಸ್ಥಳದ ಅಭಿವೃದ್ಧಿ ಮತ್ತು ನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು.ನಂತರ ಬಂಕಾಪುರ ಪುರಸಭೆ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ 24*7 ಕುಡಿಯುವ ನೀರು ಸರಬರಾಜು ಯೋಜನೆಯ ಕಾರ್ಯವೈಖರಿಯನ್ನು ಅವಲೋಕಿಸಿದರು. ಜರಗಟ್ಟಿ, ಕೊಟ್ಟಿಗೇರಿ ಹಾಗೂ ಸುಂಕದಕಟ್ಟಿ ವಾರ್ಡ್ಳಿಗೆ ಭೇಟಿ ನೀಡಿ ಸ್ಥಳೀಯ ನಿವಾಸಿಗಳೊಂದಿಗೆ ನೇರವಾಗಿ ಸಂವಾದ ನಡೆಸಿ ನೀರು ಸರಬರಾಜಿನ ಸ್ಥಿತಿಗತಿ ಕುರಿತು ಮಾಹಿತಿ ಪಡೆದರು. ಯೋಜನೆಯ ಅನುಷ್ಠಾನ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಿ, ಸಮಸ್ಯೆಗಳಿದ್ದರೆ ತಕ್ಷಣ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.24*7 ಕುಡಿಯುವ ನೀರು ಪೂರೈಕೆಯಾಗದಿರುವ ಮನೆಗಳಿಗೆ ಒಂದು ವಾರದೊಳಗೆ ನೀರು ಪೂರೈಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪುರಸಭೆ ಸಿಬ್ಬಂದಿ ಹಾಗೂ ವಾಟರ್ ಮ್ಯಾನ್ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಜೊತೆಗೆ ಸಾರ್ವಜನಿಕರು ಕುಡಿಯುವ ನೀರನ್ನು ಮಿತವ್ಯಯವಾಗಿ ಬಳಸುವಂತೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಪುರಸಭೆ ವತಿಯಿಂದ ಹಮ್ಮಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಹಾಗೆಯೇ ಶಿಗ್ಗಾಂವಿ ತಾಲೂಕಿನ ಶಿಶುವಿನಾಳ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಶ್ರೀ ಸಂತ ಶಿಶುವಿನಾಳ ಶರೀಫ್ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ, ಕಾಮಗಾರಿಯನ್ನು ಗುಣಮಟ್ಟದೊಂದಿಗೆ ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು. ಅಲ್ಲದೆ ಈಗಾಗಲೇ ನಿರ್ಮಾಣಗೊಂಡಿರುವ ಸಾಂಸ್ಕೃತಿಕ ಭವನವನ್ನು ವೀಕ್ಷಿಸಿ ಅದರ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು. ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳು ಮತ್ತು ಸಾರ್ವಜನಿಕ ಸೇವೆಗಳ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.