ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡಗು ಜಿಲ್ಲೆಯ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅಧ್ಯಕ್ಷತೆಯಲ್ಲಿ ನಡೆಯಿತು.ನಗರದ ಜಿ.ಪಂ.ಸಿಇಒ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಚೇರಿಯ ಕಾರ್ಯಪಾಲಕ ಅಭಿಯಂತರ ಪಿ.ಆರ್. ಸುರೇಶ್ ಕುಮಾರ್ ಅವರು ಜಿಲ್ಲೆ ಹಾಗೂ ತಾಲೂಕು ಪ್ರಯೋಗಾಲಯಗಳಿಂದ ಕಳೆದ ಏಪ್ರಿಲ್ನಿಂದ ಇಲ್ಲಿಯವರೆಗೆ ನೀರಿನ ಮಾದರಿ ಪರೀಕ್ಷೆಗಳ ವಿವರಣೆ ನೀಡಿದರು.
ನೀರಿನ ಮಾದರಿ ಪರೀಕ್ಷೆಗಳಲ್ಲಿ ಕಂಡುಬಂದಿರುವ ರಾಸಾಯನಿಕ ವರದಿಗಳನ್ನು ವಿಸ್ತೃತವಾಗಿ ಮಂಡಿಸಿದರು.ಪಂಚಾಯಿತಿ ಮಟ್ಟದಲ್ಲಿ ಎಫ್ಟಿಕೆ ಕಿಟ್ ಉಪಯೋಗಿಸಿಕೊಂಡು ನೀರಿನ ಮಾದರಿ ಪರೀಕ್ಷಿಸಿ ಶುದ್ಧವಾಗಿರುವ ನೀರು ಕುಡಿಯಲು ಪೂರೈಸುವಂತೆ ನಿರ್ದೇಶನ ನೀಡಿದರು.ಜಿಲ್ಲೆಯಲ್ಲಿ ಹೊಸದಾಗಿ ಅನುಷ್ಠಾನ ಮಾಡಲು ಉದ್ದೇಶಿಸಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸಂಬಂಧಿಸಿದಂತೆ ಇಲಾಖೆ ನಿರ್ದೇಶಕರಿಗೆ ಪತ್ರ ಪಡೆದು ಮಾಹಿತಿ ಪಡೆಯುವಂತೆ ಸೂಚಿಸಿದರು.
ಜಲಜೀವನ್ ಮಿಷನ್ ಬ್ಯಾಚು ಒಂದು ಯೋಜನೆಯಡಿ ಮಡಿಕೇರಿ ತಾಲೂಕಿನಲ್ಲಿ ಕೈಗೊಳ್ಳಬೇಕಿರುವ 28 ಹೊಸ ಕುಡಿಯುವ ನೀರಿನ ಶುದ್ಧೀಕರಣ ಘಟಕ ಪ್ರಸ್ತಾವನೆ ಸಂಬಂಧ ಕಡತ ಮಂಡಿಸುವಂತೆ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ನಿರ್ದೇಶನ ನೀಡಿದರು.ಜಲಜೀವನ್ ಮಿಷನ್ ಯೋಜನಾ ಮಾಹಿತಿಯ ಫಲಕಗಳ ಅಳವಡಿಕೆಗೆ ದರ ನಿಗದಿ, ಜಿಲ್ಲಾ ಮತ್ತು ತಾಲೂಕು ಮಟ್ಟದ ಪ್ರಯೋಗಾಲಯ ವಾರ್ಷಿಕ ಕ್ರಿಯಾಯೋಜನೆ ಅನುಮೋದನೆ ಹಾಗೂ ಪಿಎಂ-ಜನ್ಮನ್ ಯೋಜನೆಯಡಿ ಪಿವಿಟಿಜಿ ಜನವಸತಿ ಕಾಮಗಾರಿಗಳಿಗೆ ಜಿ.ಪಂ.ಸಿಇಒ ಅನುಮೋದನೆ ನೀಡಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಸುರೇಶ್ ಕುಮಾರ್ ಅವರು ಕೊಡಗು ಜಿಲ್ಲೆಯ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಕಾರ್ಯಚಟುವಟಿಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.ಜಿಲ್ಲೆಯಲ್ಲಿ ಹೊಸದಾಗಿ ಅನುಷ್ಠಾನ ಮಾಡಲು ಉದ್ದೇಶಿಸಿರುವ ಬಹುಗ್ರಾಮ ಕುಡಿಯುವ ನೀರು ಯೋಜನೆ ಅನುಷ್ಠಾನಕ್ಕೆ ಅನುಮೋದನೆ ಸಂಬಂದ ಹಲವು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ 1,05,331 ಕುಟುಂಬಗಳಿದ್ದು, ಮಡಿಕೇರಿ ತಾಲೂಕಿನಲ್ಲಿ 8,325, ಸೋಮವಾರಪೇಟೆ ತಾಲೂಕಿನಲ್ಲಿ 30,930, ಕುಶಾಲನಗರ ತಾಲೂಕಿನಲ್ಲಿ 19,388, ವಿರಾಜಪೇಟೆ ತಾಲೂಕಿನಲ್ಲಿ 20,496, ಪೊನ್ನಂಪೇಟೆ ತಾಲೂಕಿನಲ್ಲಿ 26,192 ಕುಟುಂಬಗಳಿದ್ದು, ಸುಮಾರು 88,535 ಲಕ್ಷಗಳಿಗೆ ಅಂದಾಜು ಪಟ್ಟಿ ತಯಾರಿಸಲಾಗಿದೆ ಎಂದು ಸುರೇಶ್ ಕುಮಾರ್ ವಿವರಿಸಿದರು.ಜಿ.ಪಂ.ಉಪ ಕಾರ್ಯದರ್ಶಿ ಎಸ್.ಧನರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮ ಅಧಿಕಾರಿ ಡಾ.ಮಧುಸೂದನ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕೃಷ್ಣಪ್ಪ, ಸಣ್ಣ ನೀರಾವರಿ ಇಲಾಖೆಯ ಅಭಿಯಂತರರು, ಕೃಷಿ ಇಲಾಖೆಯ ಉಪ ನಿರ್ದೇಶಕರು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಇತರರು ಇದ್ದರು.