ಗಣೇಶನ ಹಬ್ಬವನ್ನು ಶಾಂತಿ ಹಾಗೂ ಸಂಭ್ರಮದಿಂದ ಆಚರಿಸಲು ಪೊಲೀಸ್ ಇಲಾಖೆ ಎಲ್ಲ ರೀತಿಯ ಸಹಕಾರ ನೀಡುತ್ತದೆ. ಆದರೆ ಸುಪ್ರಿಂ ಕೋರ್ಟ್ನ ಆದೇಶದಂತೆ ಡಿಜೆ ಬಳಕೆಗೆ ಅವಕಾಶವಿಲ್ಲ.
ಕನ್ನಡಪ್ರಭ ವಾರ್ತೆ ಲಕ್ಷ್ಮೇಶ್ವರ
ಗಣೇಶನ ಹಬ್ಬವನ್ನು ಶಾಂತಿ ಹಾಗೂ ಸಂಭ್ರಮದಿಂದ ಆಚರಿಸಲು ಪೊಲೀಸ್ ಇಲಾಖೆ ಎಲ್ಲ ರೀತಿಯ ಸಹಕಾರ ನೀಡುತ್ತದೆ. ಆದರೆ ಸುಪ್ರಿಂ ಕೋರ್ಟ್ನ ಆದೇಶದಂತೆ ಡಿಜೆ ಬಳಕೆಗೆ ಅವಕಾಶವಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್. ಹೇಳಿದರು.ಪಟ್ಟಣದ ತಾಪಂ ಕಚೇರಿಯ ಸಭಾಂಗಣದಲ್ಲಿ ಗಣೇಶನ ಹಬ್ಬದ ಅಂಗವಾಗಿ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದರು.
ಪಟ್ಟಣದಲ್ಲಿ ಗಣೇಶ ಹಬ್ಬಕ್ಕೆ ಶಾಂತಿ ಮತ್ತು ಸಂಭ್ರಮದಿಂದ ಆಚರಿಸಲು ಪೊಲೀಸ್ ಇಲಾಖೆಯಿಂದ ಎಲ್ಲಾ ರೀತಿಯ ಸಹಕಾರ ನೀಡುತ್ತೇವೆ. ಗಣೇಶನ ಹಬ್ಬದಲ್ಲಿ ಗಣೇಶ ಮಂಡಳಿಯವರು ಹಲವು ನಿಬಂಧನೆಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಗಣೇಶನ ಪೆಂಡಾಲ್ಗಳನ್ನು ಹಾಕುವುದಕ್ಕೆ ಹಾಗೂ ಗಣೇಶನ ಪ್ರತಿಷ್ಠಾಪನೆ ಹಾಗೂ ವಿಸರ್ಜನೆಗೆ ಇಲಾಖೆ ಹಲವು ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ. ಪೆಂಡಾಲ್ಗಳಲ್ಲಿ ಸಿಸಿ ಕ್ಯಾಮೆರಾ ಹಾಕಬೇಕು, ಗಣೇಶ ಮಂಡಳಿಯ ಸದಸ್ಯರು ಪೆಂಡಾಲ್ಗಳಲ್ಲಿ ನಿರಂತರವಾಗಿ ಇದ್ದು ಎಲ್ಲ ರೀತಿಯ ಎಚ್ಚರಿಕೆ ತೆಗೆದುಕೊಳ್ಳಬೇಕು ಎಂದು ಹೇಳಿದರು.ಗಣೇಶನ ಹಬ್ಬದಲ್ಲಿ ಸುಪ್ರಿಂ ಕೋರ್ಟ್ ಆದೇಶದಂತೆ ಡಿಜೆ ಸಂಪೂರ್ಣ ನಿಷೇಧ ಮಾಡಲಾಗಿದೆ. ಶಬ್ದ ಮಾಲಿನ್ಯ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಕಳೆದ ಹಲವು ವರ್ಷಗಳಿಂದ ನಡೆಸುತ್ತಿರುವ ಈ ಉತ್ಸವವನ್ನು ಇನ್ನಷ್ಟು ಸಂಭ್ರಮದಿಂದ ಆಚರಿಸಲು ಇಲಾಖೆ ಸಹಕಾರ ನೀಡುತ್ತದೆ ಎಂದು ಅವರು ಹೇಳಿದರು.ಈ ವೇಳೆ ಸುರೇಶ ನಂದೆಣ್ಣವರ, ಈರಣ್ಣ ಪೂಜಾರ ಮಾತನಾಡಿ, ನಮ್ಮ ಗಣೇಶನ ಹಬ್ಬಕ್ಕೆ ಮಾತ್ರ ಯಾಕೆ ಡಿಜೆ ನಿಷೇಧ?, ಪ್ರತಿ ವರ್ಷದಂತೆ ಈ ವರ್ಷವೂ ನಾವೂ ಡಿಜೆ ಬಳಕೆ ಮಾಡುತ್ತೇವೆ. ಪೊಲೀಸ್ ಇಲಾಖೆಯ ಯಾವುದೇ ಕ್ರಮ ಕೈಗೊಂಡರು ಅದನ್ನು ಎದುರಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿ ಸಭೆಯಿಂದ ಅರ್ಧಕ್ಕೆ ಎದ್ದು ಹೋದರು.
ಈ ವೇಳೆ ಪೊಲೀಸ್ ವರಿಷ್ಠಾಧಿಕಾರಿ ಪ್ರತಿಕ್ರಿಯಿಸಿ, ಕಳೆದ ಹಲವು ವರ್ಷಗಳಿಂದ ಸುಪ್ರೀಂ ಕೋರ್ಟ್ ಜಾರಿಗೆ ತಂದಿರುವ ಆದೇಶವಿದು. ಇಲಾಖೆ ಗಣೇಶ ಹಬ್ಬದ ಸಂಭ್ರಮ ಕಸಿದುಕೊಳ್ಳಲು ಬಯಸುವುದಿಲ್ಲ ಎಂದು ಸಮಜಾಯಿಷಿ ನೀಡಿದರು.ಈ ವೇಳೆ ಮಹೇಶ ಹೊಗೆಸೊಪ್ಪಿನ, ಮಹೇಶ ಕಲಘಟಗಿ, ಮಂಜುನಾಥ ಮಾಗಡಿ, ಜಯಕ್ಕ ಕಳ್ಳಿ, ಶರಣು ಗೋಡಿ, ಮಂಜುನಾಥ ಯಲಿಗಾರ, ದಾದಾಪೀರ್ ಮುಚ್ಚಾಲೆ. ಗಂಗಾಧರ ಮೆಣಸಿನಕಾಯಿ ಮಾತನಾಡಿ, ಪೊಲೀಸ್ ಇಲಾಖೆಯು ಗಣೇಶ ಹಬ್ಬಕ್ಕೆ ಎಲ್ಲ ರೀತಿಯ ಸಹಕಾರ ನೀಡುವಂತೆ ಮನವಿ ಮಾಡಿದರು.
ಸಭೆಯಲ್ಲಿ ಸಿಪಿಐ ಬಿ.ವಿ. ನ್ಯಾಮಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಿಎಸ್ಐ ಆನಂದ ಕ್ಯಾರಕಟ್ಟಿ, ಕ್ರೈಂ ಪಿಎಸ್ಐ ಟಿ.ಕೆ. ರಾಠೋಡ, ತಾಪಂ ಹಾಗೂ ಹೆಸ್ಕಾಂ ಇಲಾಖೆ ಅಧಿಕಾರಿಗಳು ಇದ್ದರು.