ಸಾರಾಂಶ
ಕನ್ನಡಪ್ರಭ ವಾರ್ತೆ, ಬೆಂಗಳೂರು
ರಾಮನಗರದಲ್ಲಿ ಬಿಜೆಪಿಯವರು ವಕೀಲರನ್ನು ತಪ್ಪು ದಾರಿಗೆಳೆದು ರಾಜಕಾರಣ ಮಾಡುತ್ತಿದ್ದಾರೆ. ಈ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದ್ದು, ರಾಜಕಾರಣ ಬಿಟ್ಟು ವಕೀಲರು ಚರ್ಚೆಗೆ ಬಂದರೆ ಕಾನೂನು ವ್ಯಾಪ್ತಿಯಲ್ಲಿ ಪರಿಹಾರ ನೀಡುವ ಪ್ರಯತ್ನ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.
ರಾಮನಗರದ ವಕೀಲರ ಮೇಲೆ ದಾಖಲಾಗಿರುವ ಪ್ರಕರಣ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ರಾಮನಗರದಲ್ಲಿ ರಾಜಕಾರಣ ನಡೆಯುತ್ತಿದೆ.
ರಾಜಕಾರಣ ಮಾಡುವವರನ್ನು ನಾನು ಬೇಡ ಎನ್ನುವುದಿಲ್ಲ. ಈ ವಿಚಾರವಾಗಿ ಚರ್ಚಿಸಲು ಕುಮಾರಸ್ವಾಮಿ ಅವರು ಸದನದಲ್ಲಿ ಸಮಯ ಕೇಳಿದ್ದಾರಂತೆ. ಅದಕ್ಕೆ ಗೃಹ ಸಚಿವರು ಉತ್ತರ ನೀಡುತ್ತಾರೆ.
ಕಾನೂನು ಬದ್ಧವಾಗಿ ಅಧಿಕಾರಿಗಳು ಎಲ್ಲರಿಗೂ ರಕ್ಷಣೆ, ಗೌರವ ನೀಡಬೇಕು. ನಮ್ಮ ಬಳಿ ಬಂದು ಕುಳಿತು ಮಾತನಾಡಿದರೆ ಚರ್ಚೆಗೆ ಸಿದ್ಧ. ರಾಜಕಾರಣವನ್ನೇ ಮಾಡುತ್ತೇವೆ ಎಂದರೆ ರಾಜಕಾರಣ ಮಾಡಿಕೊಳ್ಳಲಿ, ನಮ್ಮ ಅಭ್ಯಂತರವೇನೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ಮಧ್ಯಪ್ರವೇಶಿಸುವುದಿಲ್ಲ: ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ನಿಂದಿಸಿದ್ದಾರೆ ಎಂಬ ಆರೋಪದ ಬಗ್ಗೆ ಕೇಳಿದಾಗ, ‘ಆ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ನಾನು ಈ ವಿಚಾರದಲ್ಲಿ ಮಧ್ಯ ಪ್ರವೇಶಿಸುವುದಿಲ್ಲ.
ನನಗೆ ಮಧ್ಯಪ್ರವೇಶಿಸುವ ಇಚ್ಛೆಯೂ ಇಲ್ಲ. ಆದರೆ ಅವರು ಬಂದು ತಮ್ಮ ನೋವನ್ನು ಹೇಳಿಕೊಂಡರೆ, ಕಾನೂನು ಚೌಕಟ್ಟಿನಲ್ಲಿ ಪರಿಹಾರ ನೀಡುವ ಪ್ರಯತ್ನ ಮಾಡುತ್ತೇನೆ. ನಮಗೆ ವಕೀಲರು, ಅಧಿಕಾರಿಗಳು, ಸಾರ್ವಜನಿಕರ ಬಗ್ಗೆ ಸಮಾನ ಗೌರವವಿದೆ’ ಎಂದು ಶಿವಕುಮಾರ್ ತಿಳಿಸಿದರು.