ಸಾರಾಂಶ
ಹುಬ್ಬಳ್ಳಿ : ಈಚೆಗೆ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಚಲನ ಚಿತ್ರರಂಗದವರ ನಟ್ಟು-ಬೋಲ್ಟ್ ಟೈಟ್ ಮಾಡುವುದು ಹೇಗೆಂದು ನನಗೆ ಗೊತ್ತು ಎಂದು ಹೇಳಿರುವುದರಲ್ಲಿ ತಪ್ಪೇನಿಲ್ಲ ಎಂದು ಕನ್ನಡ ಫಿಲಂ ಚೇಂಬರ್ ಅಧ್ಯಕ್ಷ ಎಂ.ಎಸ್. ರವೀಂದ್ರ ಅವರು ಸಮರ್ಥಿಸಿಕೊಂಡಿದ್ದಾರೆ.
ಡಿ.ಕೆ. ಶಿವಕುಮಾರ್ ಅವರು ನೀಡಿದ ಹೇಳಿಕೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭರ್ಜರಿ ಪರ - ವಿರೋಧ ಚರ್ಚೆಗಳು ನಡೆಯುತ್ತಿರುವ ಮಧ್ಯೆ ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರವೀಂದ್ರ ಅವರು, ಡಿಕೆಶಿ ಹೇಳಿಕೆಯನ್ನು ಸಮರ್ಥಿಸಿದರು. ಮಾ.1ರಂದು ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸೆಲೆಬ್ರಿಟಿಗಳು ಪಾಲ್ಗೊಳ್ಳದೆ ಇರುವುದಕ್ಕೆ ಡಿ.ಕೆ. ಶಿವಕುಮಾರ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ. ದೊಡ್ಡ ಕಾರ್ಯಕ್ರಮ ಮಾಡಿದಾಗ ನಿರೀಕ್ಷಿತ ಮಟ್ಟದಲ್ಲಿ ಸೆಲೆಬ್ರಿಟಿಗಳು ಬಾರದಿರುವುದರಿಂದ ಬೇಸರವಾದ ಕಾರಣ ಈ ರೀತಿಯ ಹೇಳಿಕೆ ನೀಡುವುದು ಸಹಜ ಎಂದು ಅವರು ತಿಳಿಸಿದರು.
ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯಲ್ಲಿ ತಪ್ಪೇನಿಲ್ಲ. ಆದರೆ, ಚಲನಚಿತ್ರ ಅಕಾಡೆಮಿಯವರು ಯಾರಿಗೂ ಸರಿಯಾಗಿ ಆಹ್ವಾನ ನೀಡಿಲ್ಲ. ಹಾಗಾಗಿ, ಬಹಳಷ್ಟು ನಟರು ಕಾರ್ಯಕ್ರಮಕ್ಕೆ ಬರುವುದಕ್ಕೆ ಸಾಧ್ಯವಾಗಿಲ್ಲ. ಆದರೆ, ಈ ವಿಚಾರ ಡಿ.ಕೆ. ಶಿವಕುಮಾರ್ ಅವರಿಗೆ ಗೊತ್ತಿರಲಿಲ್ಲ. ಹೀಗಾಗಿ, ಈ ರೀತಿಯ ಹೇಳಿಕೆ ನೀಡಿದ್ದಾರೆ ಅಷ್ಟೆ ಎಂದು ಅವರು ವಿವರಿಸಿದರು. ನೆಲ,-ಜಲ ವಿಷಯದಲ್ಲಿ ಎಂದೂ ಸೆಲೆಬ್ರಿಟಿಗಳು ನಿರ್ಲಕ್ಷ್ಯ ಮಾಡಿಲ್ಲ. ಕನ್ನಡಿಗರ ಜತೆ ಚಿತ್ರೋದ್ಯಮ ಸದಾ ಇದ್ದೇ ಇರುತ್ತದೆ ಎಂದು ಅವರು ತಿಳಿಸಿದರು.