ಕನ್ನಡಪ್ರಭ ವಾರ್ತೆ ಮಳವಳ್ಳಿ
ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ನಿಂದ ಪಟ್ಟಣದಲ್ಲಿ ಅಭಿಮಾನಿಗಳು, ಮುಖಂಡರು, ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.ಪಟ್ಟಣದ ಅನಂತ್ರಾಂ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಹಾಗೂ ಮುಖಂಡರು ಡಿ.ಕೆ.ಶಿವಕುಮಾರ್ ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಪರ ಘೋಷಣೆ ಕೂಗಿ, ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು ಮಾತನಾಡಿ, ಕೆಪಿಸಿಸಿ ಅಧ್ಯಕ್ಷರಾಗಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ ಅಧಿಕಾರಕ್ಕೆ ತಂದ ಡಿ.ಕೆಯಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುತ್ತಿರುವುದು ಪಕ್ಷದ ಕಾರ್ಯಕರ್ತರಿಗೆ ಮತ್ತಷ್ಟು ಸ್ಫೂರ್ತಿ ಸಿಕ್ಕಿದಂತಾಗಿದೆ. ಬಡವರ ಏಳಿಗೆಗಾಗಿ ಶ್ರಮಿಸಿ ಮಾದರಿ ಮುಖ್ಯಮಂತ್ರಿಯಾಗಲಿ ಎಂದು ಆಶಿಸಿದರು.ಟಿಎಪಿಸಿಎಂಎಸ್ ನಿರ್ದೇಶಕ ಕೆ.ಜೆ.ದೇವರಾಜು ಮಾತನಾಡಿ, ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಿರುವ ಡಿ.ಕೆ.ಶಿವಕುಮಾರ್ ಅವರಿಗೆ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರ ವತಿಯಿಂದ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟ ಉತ್ತಮ ಆಡಳಿತ ರೀತಿಯಲ್ಲಿಯೇ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಉತ್ತಮ ಆಡಳಿತ ನಡೆಸಬೇಕೆಂದು ತಿಳಿಸಿದರು.
ಮನ್ನುಲ್ ನಿರ್ದೇಶಕ ಡಿ.ಕೃಷ್ಣೇಗೌಡ ಮಾತನಾಡಿ, ಮಾಜಿ ಸಿಎಂ ಸಿದ್ದರಾಮಯ್ಯರ ಹಾದಿಯಲ್ಲಿಯೇ ನೂತನ ಸಿಎಂ ಡಿ.ಕೆ.ಶಿವಕುಮಾರ್ ಜನಪರ ಆಡಳಿತನ ನಡೆಸಲಿ. ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ಕಾಂಗ್ರೆಸ್ ಪಕ್ಷಕ್ಕಾಗಿ ನಿರಂತರ ದುಡಿಯುವ ಜೊತೆಗೆ ರಾಜಕೀಯದಲ್ಲಿ ಹಿರಿತನವನ್ನು ಹೊಂದಿದ್ದಾರೆ. ಡಿಕೆಶಿ ಸಚಿವ ಸಂಪುಟದಲ್ಲಿ ನರೇಂದ್ರಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮನವಿ ಮಾಡಿದರು.
ಇದೇ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ, ಮನ್ಮುಲ್ ನಿರ್ದೇಶಕ ಆರ್.ಎನ್ ವಿಶ್ವಾಸ್, ಟಿಎಪಿಸಿಎಂಎಸ್ ಅಧ್ಯಕ್ಷ ಲಿಂಗರಾಜು, ಮುಖಂಡರಾದ ಸಿ.ಮಾಧು, ಪುಟ್ಟಸ್ವಾಮಿ, ಪೇಟೆಬೀದಿ ರವಿ, ಶ್ರೀಕಾಂತ್, ದೊರೆಸ್ವಾಮಿ, ಸಾದಿಕ್ ಪಷಾ, ಮಲ್ಲಯ್ಯ, ಚೌಡಯ್ಯ, ಚಂದ್ರಕುಮಾರ್, ಶಿವರಾಜ್, ವಿಶ್ವ(ದಿಲೀಪ್) ಬಸವರಾಜು, ಮಂಜು, ಶಾಂತರಾಜು ಸೇರಿದಂತೆ ಇತರರು ಇದ್ದರು.ಪಟ್ಟಣದ ಟೋಲ್ಗೇಟ್ನ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪುರಸಭೆ ಮಾಜಿ ಸದಸ್ಯ ಬಸವರಾಜು ಅವರ ನೇತೃತ್ವದಲ್ಲಿ ಎಲ್.ಇ.ಡಿ ಸ್ಥಾಪಿಸಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ದೃಶ್ಯವನ್ನು ಸಾರ್ವಜನಿಕರಿಗೆ ವೀಕ್ಷಿಸಿಲು ಅನುವು ಮಾಡಿಕೊಡಲಾಯಿತು.