ಕನ್ನಡಪ್ರಭ ವಾರ್ತೆ ಬೆಂಗಳೂರು
ಸದಾ ರಾಜಕೀಯ ಚಟುವಟಿಕೆಯ ಕೇಂದ್ರವಾಗಿರುವ ರಾಮನಗರ (ಬೆಂಗಳೂರು ದಕ್ಷಿಣ) ಜಿಲ್ಲೆಯಿಂದ ಶಾಸಕರಾಗಿ ಮುಖ್ಯಮಂತ್ರಿಯಾದವರಲ್ಲಿ ಡಿ.ಕೆ.ಶಿವಕುಮಾರ್ ಐದನೆಯವರು. ಆ ಮೂಲಕ ಅತಿಹೆಚ್ಚು ಮುಖ್ಯಮಂತ್ರಿಗಳನ್ನು ನೀಡಿದ ಜಿಲ್ಲೆ ಎಂಬ ಹೆಗ್ಗಳಿಕೆ ರಾಮನಗರ ಪಾತ್ರವಾಗಿದೆ.ಈವರೆಗೆ ರಾಮನಗರದ ಜತೆಗೆ ಅವಿಭಜಿತ ಶಿವಮೊಗ್ಗ-ದಾವಣಗೆರೆ ಜಿಲ್ಲೆಯಿಂದ ಅತಿಹೆಚ್ಚು ಮುಖ್ಯಮಂತ್ರಿಗಳನ್ನು ನೀಡಿದ ಹೆಗ್ಗಳಿಕೆಯಿತ್ತು. ಕಡಿದಾಳ ಮಂಜಪ್ಪ, ಎಸ್.ನಿಜಲಿಂಗಪ್ಪ, ಜೆ.ಎಚ್.ಪಟೇಲ್ ಹಾಗೂ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗ ಮತ್ತು ಅವಿಭಜಿತ ಶಿವಮೊಗ್ಗ ಜಿಲ್ಲೆಯಿಂದ ಮುಖ್ಯಮಂತ್ರಿಗಳಾಗಿದ್ದರು. ಅದೇ ರೀತಿ ರಾಮನಗರ ಮತ್ತು ಅವಿಭಜಿತ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಈವರೆಗೆ ಕೆಂಗಲ್ ಹನುಮಂತಯ್ಯ, ರಾಮಕೃಷ್ಣ ಹೆಗಡೆ, ಎಚ್.ಡಿ. ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದರು. ಇದೀಗ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವ ಮೂಲಕ ರಾಮನಗರದಿಂದ ಐವರು ಮುಖ್ಯಮಂತ್ರಿಗಳಾದಂತಾಗಿದೆ.
ಅದರಲ್ಲೂ ಡಿ.ಕೆ.ಶಿವಕುಮಾರ್ ಅವರು ಕನಕಪುರ (ಹಿಂದಿನ ಸಾತನೂರು ಸೇರಿ) ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿದ್ದಾಗಲೇ ಸಿಎಂ ಗಾದಿಗೇರಿದ ಎರಡನೇ ನಾಯಕನಾಗಿದ್ದಾರೆ. ಈ ಹಿಂದೆ 1983ರಲ್ಲಿ ರಾಮಕೃಷ್ಣ ಹೆಗಡೆ ಅವರು ಕನಕಪುರದ ಶಾಸಕರಾಗಿದ್ದಾಗ ಮುಖ್ಯಮಂತ್ರಿ ಸ್ಥಾನಕ್ಕೇರಿದ್ದರು.ರಾಮನಗರ ಮೂಲದ 2ನೇ ಸಿಎಂ:
ಡಿ.ಕೆ.ಶಿವಕುಮಾರ್ ಅವರು ರಾಮನಗರ ಜಿಲ್ಲೆಯಿಂದ ಐದನೇ ಮುಖ್ಯಮಂತ್ರಿಯಾಗಿದ್ದರೂ ರಾಮನಗರ ಜಿಲ್ಲೆಯ ಮೂಲದ ಎರಡನೇ ಮುಖ್ಯಮಂತ್ರಿ. ರಾಮಕೃಷ್ಣ ಹೆಗಡೆ ಅವರು ಉತ್ತರ ಕನ್ನಡ ಜಿಲ್ಲೆಯವರಾಗಿದ್ದರೆ, ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಹಾಸನ ಮೂಲದವರು. ಕೆಂಗಲ್ ಹನುಮಂತಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಮೂಲ ಮಾತ್ರ ರಾಮನಗರ.
ಒಕ್ಕಲಿಗ ಸಮುದಾಯದ 8ನೇ ಸಿಎಂ:
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ ಒಕ್ಕಲಿಗ ಸಮುದಾಯದ ಎಂಟನೆಯವರಾಗಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಕೆ.ಸಿ.ರೆಡ್ಡಿ, ಕೆಂಗಲ್ ಹನುಮಂತಯ್ಯ, ಕಡಿದಾಳ್ ಮಂಜಪ್ಪ, ಎಚ್.ಡಿ.ದೇವೇಗೌಡ, ಎಸ್.ಎಂ.ಕೃಷ್ಣ, ಎಚ್.ಡಿ.ಕುಮಾರಸ್ವಾಮಿ, ಡಿ.ವಿ.ಸದಾನಂದಗೌಡ ಅವರು ಒಕ್ಕಲಿಗ ಸಮುದಾಯದವಾಗಿದ್ದಾರೆ.