ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರಬೇಕೆಂದು ಜನ ಆಶೀರ್ವಾದ ಮಾಡಿ ಕಳಿಸಿದ್ದಾರೆಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆ ಕೊನೇ ಸಾಲಿನಲ್ಲೇ ಕುಳಿತು ಆಪ್ತ ಶಾಸಕರೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದು ಮಂಗಳವಾರ ಕುತೂಹಲ ಮೂಡಿಸಿತು.
ವಿಧಾನಸಭೆ : ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರಬೇಕೆಂದು ಜನ ಆಶೀರ್ವಾದ ಮಾಡಿ ಕಳಿಸಿದ್ದಾರೆಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆ ಕೊನೇ ಸಾಲಿನಲ್ಲೇ ಕುಳಿತು ಆಪ್ತ ಶಾಸಕರೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದು ಮಂಗಳವಾರ ಕುತೂಹಲ ಮೂಡಿಸಿತು.
ಕೊನೆಯ ಸಾಲಿನಲ್ಲಿ ಹೋಗಿ ಕೂತ ಡಿ.ಕೆ.ಶಿವಕುಮಾರ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಸಾಲಿನಲ್ಲಿನ ತಮ್ಮ ಕುರ್ಚಿಯಲ್ಲಿ ಆಸೀನರಾಗಿದ್ದರು. ಅವರ ಪಕ್ಕದಲ್ಲಿ ಕುಳಿತಿರಬೇಕಾಗಿದ್ದ ಡಿ.ಕೆ.ಶಿವಕುಮಾರ್ ಅವರು ಕೊನೆಯ ಸಾಲಿನಲ್ಲಿ ಹೋಗಿ ಕೂತರು.
ಒಂದು ಗಂಟೆಗೂ ಹೆಚ್ಚು ಕಾಲ ಚರ್ಚಿಸಿದರು
ಈ ವೇಳೆ ಮೊದಲಿಗೆ ಲಕ್ಷ್ಮಣ ಸವದಿ, ಗುಬ್ಬಿ ಶ್ರೀನಿವಾಸ್, ನಯನಾ ಮೋಟಮ್ಮ ಅವರೊಂದಿಗೆ ಚರ್ಚಿಸಿದರು. ಬಳಿಕ ಗ್ರೇಟರ್ ಬೆಂಗಳೂರು ತಿದ್ದುಪಡಿ ವಿಧೇಯಕ ಪರ್ಯಾಲೋಚನೆಗೆ ಮಂಡಿಸಿದ ಡಿ.ಕೆ.ಶಿವಕುಮಾರ್ ಅವರು ಪುನಃ ಕೊನೆಯ ಸಾಲಿಗೆ ತೆರಳಿದರು. ಬಳಿಕ ಮಾಗಡಿ ಬಾಲಕೃಷ್ಣ, ಸಿ.ಪಿ.ಯೋಗೇಶ್ವರ್, ಡಿ.ಸುಧಾಕರ್, ಇಕ್ಬಾಲ್ ಹುಸೇನ್, ಕದಲೂರು ಉದಯ್, ಅಶೋಕ್ ರೈ ಅವರ ಜತೆ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚಿಸಿದರು.
ಮುಖ್ಯಮಂತ್ರಿಗಳು ಸದನದಲ್ಲಿ ಉಪಸ್ಥಿತರಿದ್ದಾಗಲೇ ಆಪ್ತ ಶಾಸಕರೊಂದಿಗೆ ಪ್ರತ್ಯೇಕವಾಗಿ ಕುಳಿತು ಶಿವಕುಮಾರ್ ಅವರು ಮಾತುಕತೆ ನಡೆಸಿದ್ದು ಕುತೂಹಲಕ್ಕೆ ಕಾರಣವಾಗಿದೆ.

