ಕನ್ನಡಪ್ರಭ ವಾರ್ತೆ ಮಡಿಕೇರಿ
ಮಾದಕ ವ್ಯಸನವನ್ನು ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ಯುವ ಪೀಳಿಗೆಯು ಜಾಗೃತರಾದರೆ ಮಾತ್ರ ಸಮಾಜದಿಂದ ಈ ಪಿಡುಗನ್ನು ನಿರ್ಮೂಲನೆ ಮಾಡಲು ಸಾಧ್ಯ. ಯುವ ಪೀಳಿಗೆ ಡ್ರಗ್ಸ್, ಹೆರಾಯಿನ್, ಗಾಂಜಾ ಮತ್ತಿತರ ಮಾದಕ ವಸ್ತುಗಳಿಗೆ ಬಲಿಯಾಗದೆ ಉತ್ತಮ ಜೀವನ ಕಟ್ಟಿಕೊಳ್ಳಲು ಪ್ರಯತ್ನಿಸಬೇಕುಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಹೇಳಿದ್ದಾರೆ. ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಪೊಲೀಸ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಸಹಕಾರದಲ್ಲಿ ಎಫ್ಎಂಸಿ ಕಾಲೇಜು ಸಭಾಂಗಣದಲ್ಲಿ ಶನಿವಾರ ನಡೆದ ಡಾ. ಮಹಾಂತ ಶಿವಯೋಗಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕರ್ನಾಟಕ ಸರ್ಕಾರ ಮತ್ತು ಪೊಲೀಸ್ ಇಲಾಖೆ ಯುವಜನತೆಯಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ಡ್ರಗ್ಸ್ ಬೇಡ ಬ್ರೋ ಎಂಬ ಯುವ ಸ್ನೇಹಿ ಅಭಿಯಾನವನ್ನು ಹಮ್ಮಿಕೊಂಡಿದೆ. ಮಾದಕ ವಸ್ತುಗಳ ಸೇವನೆಯು ವ್ಯಕ್ತಿಯ ಆರೋಗ್ಯ, ಭವಿಷ್ಯ ಮತ್ತು ಜೀವನವನ್ನು ಸಂಪೂರ್ಣವಾಗಿ ನಾಶ ಮಾಡುವ ಗಂಭೀರ ಸಮಸ್ಯೆಯಾಗಿದೆ. ಯುವಜನತೆ ತಾತ್ಕಾಲಿಕ ಖುಷಿ ಅಥವಾ ಕುತೂಹಲಕ್ಕಾಗಿ ಇವುಗಳಿಗೆ ದಾಸರಾಗಬಾರದು ಎಂದು ಬಿಂದುಮಣಿ ಹೇಳಿದರು.ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮನೋರೋಗ ವಿಭಾಗದ ಮುಖ್ಯಸ್ಥರಾದ ಡಾ. ರೂಪೇಶ್ ಗೋಪಾಲ್ ಮಾತನಾಡಿ, ಯುವ ಜನರು, ವಿದ್ಯಾರ್ಥಿಗಳು, ಮದ್ಯ ಹಾಗೂ ಮಾದಕ ವಸ್ತುಗಳಿಗೆ ತುತ್ತಾಗಬಾರದು. ಉತ್ತಮ ಜೀವನ ಕಟ್ಟಿಕೊಂಡಾಗ ರಾಷ್ಟ್ರದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಇದರಿಂದ ಕುಟುಂಬದ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ ಎಂದರು.
ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಡಾ. ಮೇ. ರಾಘವ ಬಿ. ಮಾತನಾಡಿ ಸ್ವಸ್ಥ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಮುಂದಾಗಬೇಕು. ದುಶ್ಚಟಗಳಿಗೆ ದಾಸರಾಗದೆ ಶಿಸ್ತುಬದ್ಧ ಜೀವನ ನಡೆಸಬೇಕು ಎಂದರು.
ಡಿವೈಎಸ್ಪಿ ಸೂರಜ್ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ವಿವಿಧ ರೀತಿಯ ಮಾದಕ ವಸ್ತುಗಳು (ಡ್ರಗ್ಸ್) ಯುವ ಸಮೂಹವನ್ನು ದೈಹಿಕವಾಗಿ, ಮಾನಸಿಕವಾಗಿ ಮತ್ತು ಸಾಮಾಜಿಕವಾಗಿ ಅತ್ಯಂತ ಅಪಾಯಕಾರಿ ರೀತಿಯಲ್ಲಿ ಬಲಿ ತೆಗೆದುಕೊಳ್ಳುತ್ತಿವೆ. ಆದ್ದರಿಂದ ಯುವ ಸಮೂಹ ಎಚ್ಚೆತ್ತುಕೊಳ್ಳಬೇಕು. ಪೊಲೀಸ್ ಇಲಾಖೆಯ ಮೊಬೈಲ್ ಆ್ಯಪ್ಗಳನ್ನು ಬಳಸಿಕೊಳ್ಳುವ ಮೂಲಕ ಪೆಡ್ಲರ್ಗಳ ಮಾಹಿತಿ ನೀಡಬೇಕು. ಮಾಹಿತಿ ನೀಡಿದವರ ವೈಯಕ್ತಿಕ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ಹೇಳಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಅವರು ವ್ಯಸನ ಮುಕ್ತ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾ ವಿಧಿ ಬೋಧಿಸಿದರು.ಮನೋರೋಗ ವಿಭಾಗದ ವೈದ್ಯಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳಿಂದ ಮಾದಕ ವ್ಯಸನದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಕಿರು ನಾಟಕದ ಮೂಲಕ ಜಾಗೃತಿ ಮೂಡಿಸಲಾಯಿತು. ಕಾರ್ಯಪ್ಪ ಕಾಲೇಜಿನ ಪ್ರಾಧ್ಯಾಪಕಿ ರೇಣುಶ್ರೀ, ಉಪನ್ಯಾಸಕರಾದ ಪ್ರೊ. ಶ್ರೀಧರ್ ಹೆಗಡೆ, ಡಾ. ಗಾಯತ್ರಿ ಎ.ಎನ್., ಡಾ. ತಳವಾರ್ ಡಿ.ಎಚ್., ಡಾ. ಶೈಲಶ್ರೀ, ಕೆ.ಎಂ.ಪೂಣಚ್ಚ, ಅಲೋಕ್ ಹಾಗೂ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು, ಮನೋರೋಗ ವಿಭಾಗದ ವೈದ್ಯಾಧಿಕಾರಿಗಳು ಇದ್ದರು. ಕಾಲೇಜಿನ ವಿದ್ಯಾರ್ಥಿಗಳಾದ ಲೋಚನ, ಗಾನ ನಿರೂಪಿಸಿದರು, ಸ್ವಪ್ನ, ಚೊಂದಮ್ಮ, ಲಿಖಿತ ನಾಡಗೀತೆ ಹಾಡಿದರು. ವಾರ್ತಾಧಿಕಾರಿ ಚಿನ್ನಸ್ವಾಮಿ ಸ್ವಾಗತಿಸಿದರು.