ಸಾರಾಂಶ
- ಜಿಲ್ಲೆಯ ರೈತ ಸಂಪರ್ಕ ಕೇಂದ್ರ, ಕೃಷಿ ಪರಿಕರ ಮಾರಾಟ ಮಳಿಗೆಗಳಲ್ಲಿ ಗುಣಮಟ್ಟದ ಬಿತ್ತನೆ ಬೀಜಗಳು ಲಭ್ಯ - - -
ಕನ್ನಡಪ್ರಭ ವಾರ್ತೆ, ದಾವಣಗೆರೆ ಜಿಲ್ಲೆಯಲ್ಲಿ ಲೂಸ್ ಬೀಜಗಳನ್ನು ವಿವಿಧ ಭಾಗಗಳಿಂದ ಸಂಗ್ರಹಿಸಿ ರೈತರಿಗೆ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ರೈತರು ಅಂತಹ ಬಿಡಿ ಬೀಜಗಳನ್ನು ಖರೀದಿಸಿ, ಬಿತ್ತನೆ ಮಾಡಬಾರದೆಂದು ಕೃಷಿ ಇಲಾಖೆ ಮನವಿ ಮಾಡಿದೆ.ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಚುರುಕಾಗಿದೆ. ಭೂಮಿ ಸಿದ್ಧತೆ, ಸಮಗ್ರ ಬೆಳೆ ನಿರ್ವಹಣೆ ಜೊತೆಗೆ ಉತ್ತಮ ಇಳುವರಿ ಪಡೆಯುವಲ್ಲಿ ಗುಣಮಟ್ಟದ ಬಿತ್ತನೆ ಬೀಜಗಳು ಬಹುಮುಖ್ಯ. ಜಿಲ್ಲೆಯಲ್ಲಿ ಕೃಷಿ ಇಲಾಖೆ ವತಿಯಿಂದ ರೈತ ಸಂಪರ್ಕ ಕೇಂದ್ರ ಹಾಗೂ ನಿಗದಿಪಡಿಸಿದ ಸಹಕಾರಿ ಸಂಘಗಳ ಮೂಲಕ ರಿಯಾಯತಿ ದರದಲ್ಲಿ ವಿವಿಧ ಬಿತ್ತನೆ ಬೀಜಗಳನ್ನು ವಿತರಣೆ ಮಾಡಲಾಗುವುದು. ಜಿಲ್ಲೆಯ ವಿವಿಧ ಕೃಷಿ ಪರಿಕರ ಮಾರಾಟ ಮಳಿಗೆಗಳಲ್ಲಿ ಕೂಡ ಗುಣಮಟ್ಟದ ಬಿತ್ತನೆ ಬೀಜಗಳು ಲಭ್ಯವಿದೆ. ರೈತರಿಗೆ ಯಾವುದೇ ಬಿತ್ತನೆ ಬೀಜಗಳ ಕೊರತೆ ಆಗುವುದಿಲ್ಲ ಎಂದು ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಬಿಡಿ ಬಿತ್ತನೆ ಬೀಜಗಳ ಹಾವಳಿ ಹೆಚ್ಚಾಗುತ್ತಿದೆ. ಅಂತಹ ಬೀಜಗಳನ್ನು ಬಿತ್ತಿ, ತೊಂದರೆ ಅಥವಾ ಬೆಳೆ ನಷ್ಟ ಅನುಭವಿಸಬೇಕಾಗುತ್ತದೆ. ಅಲ್ಲದೆ, ಈ ಬಿತ್ತನೆ ಬೀಜಗಳಿಗೆ ಯಾವುದೇ ದಾಖಲೆಗಳು ಇರುವುದಿಲ್ಲ. ಆಗ ಸರ್ಕಾರದಿಂದ ಪರಿಹಾರ ಪಡೆಯಲು ಅಸಾಧ್ಯ. ಆದ್ದರಿಂದ ರೈತರು ಲೂಸ್ ಬಿತ್ತನೆ ಬೀಜಗಳ ಮಾರಾಟ ಜಾಲಕ್ಕೆ ಸಿಲುಕಬಾರದು ಎಂದು ಸಲಹೆ ನೀಡಿದ್ದಾರೆ.ಜಿಲ್ಲೆಯಲ್ಲಿ ಯಾವುದೇ ಅನಧಿಕೃತ ಲೂಸ್ ಬಿತ್ತನೆ ಬೀಜ ದಾಸ್ತಾನು ಹಾಗೂ ಮಾರಾಟ ಮಾಡುವವರು ಕಂಡುಬಂದಲ್ಲಿ ತಕ್ಷಣ ಸಹಾಯಕ ಕೃಷಿ ನಿರ್ದೇಶಕರು (ಜಾರಿ ದಳ) ಮೊ: 82779 31106, 82779 31207 ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರು, ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಲು ಇಲಾಖೆ ಜಂಟಿ ನಿರ್ದೇಶಕರು ಮನವಿ ಮಾಡಿದ್ದಾರೆ.
- - - (-ಸಾಂದರ್ಭಿಕ ಚಿತ್ರ)