ವಿದ್ಯುತ್ ವಿತರಣಾ ಪರವಾನಗಿ ನೀಡಲು ಕೋರಿ ದಿ ಟಾಟಾ ಪವರ್ ಕಂಪನಿ ಲಿಮಿಟೆಡ್ ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಸಮಿತಿ ವತಿಯಿಂದ ಬುಧವಾರ ಜೆಸ್ಕಾಂ ಉಪ ವಿಭಾಗದ ಶಾಖಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಸಂಡೂರು: ರಾಜ್ಯದ ವಿವಿಧ ಸಾರ್ವಜನಿಕ ವಿದ್ಯುತ್ ವಿತರಣಾ ಕಂಪನಿಯ 19 ಕಂದಾಯ ಜಿಲ್ಲೆಗಳಲ್ಲಿ ವಿದ್ಯುತ್ ವಿತರಣಾ ಪರವಾನಗಿ ನೀಡಲು ಕೋರಿ ದಿ ಟಾಟಾ ಪವರ್ ಕಂಪನಿ ಲಿಮಿಟೆಡ್ ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಸಮಿತಿ ವತಿಯಿಂದ ಬುಧವಾರ ಜೆಸ್ಕಾಂ ಉಪ ವಿಭಾಗದ ಶಾಖಾಧಿಕಾರಿ ಎಚ್. ಶ್ರೀಧರ್ ಅವರ ಮೂಲಕ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಘಟಕದ ಕಾರ್ಯದರ್ಶಿ ಖಲಂದರ್ ಬಾಷ, ಸಾರ್ವಜನಿಕ ವಿದ್ಯುತ್ ವಿತರಣಾ ಕಂಪನಿಗಳಿಗೆ ಸಮಾನಾಂತರವಾಗಿ ವಿದ್ಯುತ್ ವಿತರಣಾ ಲೈಸೆನ್ಸ್ ಕೋರಿ ದಿ ಟಾಟಾ ಪವರ್ ಕಂಪನಿ ಲಿಮಿಟೆಡ್ ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸಬೇಕು. ಕಂಪನಿ ಸಲ್ಲಿಸಿರುವ ಅರ್ಜಿಅಪೂರ್ಣವಾಗಿದೆ. ವಿದ್ಯುತ್ ಪೂರೈಕೆಯಲ್ಲಿ ದಕ್ಷತೆ ಹಾಗೂ ಸೇವಾ ಗುಣಮಟ್ಟವನ್ನು ಉತ್ತಮ ಪಡಿಸಿದ ಯಾವ ಅನುಭವ ಈ ಕಂಪನಿಗೆ ಇಲ್ಲ ಎಂದು ಆರೋಪಿಸಿದರು.ರಾಜ್ಯ ಒಂಟಿ ಮಹಿಳೆಯರ ಸಂರಕ್ಷಣಾ ಸಂಘದ ಕಾರ್ಯದರ್ಶಿ ತ್ರಿವೇಣಿ, ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ಅಧ್ಯಕ್ಷೆ ಹುಲಿಗೆಮ್ಮ, ಕಾರ್ಯದರ್ಶಿ ಎಚ್. ದುರುಗಮ್ಮ, ಡಿವೈಎಪ್ಐ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಸ್ವಾಮಿ, ಸದಸ್ಯರಾದ ಕೆಂಚಮ್ಮ, ಮಾರೆಮ್ಮ, ಇಂದ್ರಮ್ಮ, ಸಿದ್ದಮ್ಮ, ಈರಮ್ಮ, ಮಂಜುಳಾ, ಶಾರದಮ್ಮ ಮುಂತಾದವರು ಉಪಸ್ಥಿತರಿದ್ದರು.