ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ವೈದ್ಯರ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯಕ್ಕೆ 3 ತಿಂಗಳ ಹಸುಗೂಸು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ.

ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ ಬೇರೆ ಆಸ್ಪತ್ರೆಗೆ ರೆಫರ್ ಮಾಡಿದ ಪರಿಣಾಮ ಮಾರ್ಗ ಮಧ್ಯದಲ್ಲೇ ಮಗು ಕೊನೆಯುಸಿರೆಳೆದಿದೆ ಎಂದು ಆರೋಪಿಸಿದ್ದಾರೆ.​ಚಿಕ್ಕಮಗಳೂರು ನಗರದ ಅರವಿಂದ ನಗರ ನಿವಾಸಿ ರವೀಶ್ ಹಾಗೂ ತೇಜಸ್ವಿನಿ ದಂಪತಿಯ 3 ತಿಂಗಳ ಮಗುವಿಗೆ ಗುರುವಾರ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪೋಷಕರು ಚಿಕ್ಕಮಗಳೂರಿನ ಸರ್ಕಾರಿ ಹೆರಿಗೆ ಆಸ್ಪತ್ರೆಗೆ ದಾಖಲಿಸಿದ್ದರು. ಮಗುವಿಗೆ ರಕ್ತದ ಕೊರತೆ ಇದೆ ಎಂದು ತಿಳಿಸಿದ್ದ ವೈದ್ಯರು, ಪ್ರಾಥಮಿಕ ಚಿಕಿತ್ಸೆ ನೀಡಿದ್ದರು. ಶುಕ್ರವಾರ ಮುಂಜಾನೆ ಮಗುವನ್ನು ಪರೀಕ್ಷಿಸಿದ್ದ ವೈದ್ಯರು ಮಗು ಈಗ ಚೆನ್ನಾಗಿದೆ. ಯಾವುದೇ ತೊಂದರೆ ಇಲ್ಲ ಎಂದಿದ್ದರು.​ ಆದರೆ 11 ಗಂಟೆ ಸುಮಾರಿಗೆ ಮಗುವಿನ ಸ್ಥಿತಿ ಹದಗೆಡುತ್ತಿದ್ದಂತೆ ದಿಢೀರ್ ಕೈಚೆಲ್ಲಿದ ವೈದ್ಯರು, ತಕ್ಷಣ ಹಾಸನದ ಆಸ್ಪತ್ರೆಗೆ ಕರೆದೊಯ್ಯು ವಂತೆ ಸೂಚಿಸಿದ್ದಾರೆ. ವೈದ್ಯರ ಮಾತಿನಂತೆ ಪೋಷಕರು ಮಗುವನ್ನು ಆಂಬ್ಯುಲೆನ್ಸ್ ನಲ್ಲಿ ಹಾಸನಕ್ಕೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಬೇಲೂರು ಸಮೀದ ಮಗು ಸುಸ್ತಾಗಿ ಕೊನೆಯುಸಿರೆಳೆದಿದೆ.​ಆಸ್ಪತ್ರೆ ಮುಂಭಾಗ ಪ್ರತಿಭಟನೆ: ​ವೈದ್ಯರ ಹಠಾತ್ ನಿರ್ಧಾರ ಮತ್ತು ನಿರ್ಲಕ್ಷ್ಯಮಗುವಿನ ಸಾವಿಗೆ ಕಾರಣ ಎಂದು ಆರೋಪಿಸಿ ಮಗುವಿನ ಪೋಷಕರು ಹಾಗೂ ಸಂಬಂಧಿಕರು ಚಿಕ್ಕಮಗಳೂರಿನ ಸರ್ಕಾರಿ ಹೆರಿಗೆ ಆಸ್ಪತ್ರೆ ಮುಂಭಾಗ ಜಮಾಯಿಸಿ, ಬೆಳಗ್ಗೆ ಮಗು ಚೆನ್ನಾಗಿದೆ ಎಂದು ಹೇಳಿ, ಕೊನೆ ಕ್ಷಣದಲ್ಲಿ ಹಾಸನಕ್ಕೆ ಹೋಗಿ ಎಂದರೆ ಎಲ್ಲಿಗೆ ಹೋಗಬೇಕು? ಮೊದಲೇ ಪರಿಸ್ಥಿತಿ ತಿಳಿಸಿ ದ್ದರೆ ಬೇರೆ ಖಾಸಗಿ ಆಸ್ಪತ್ರೆಗಾದರೂ ದಾಖಲಿಸುತ್ತಿದ್ದೆವು ಎಂದು ಆಸ್ಪತ್ರೆ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೇ ನಿರ್ಲಕ್ಷ್ಯ ವಹಿಸಿದ ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.