ಕನ್ನಡಿಗರು ಮೊದಲು ದಿನನಿತ್ಯ ಮತ್ತು ಸಾರ್ವಜನಿಕವಾಗಿ ಕನ್ನಡವನ್ನು ಬಳಸಬೇಕು.‌ ಕನ್ನಡಿಗರು ತಮ್ಮ ಪತ್ರ ವ್ಯವಹಾರಗಳನ್ನು ಕನ್ನಡದಲ್ಲಿ ರಾಜ್ಯ ಸರ್ಕಾರಕ್ಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೂ ಮಾಡಬೇಕು. ಬೆಂಗಳೂರಿನಲ್ಲಿ ಹಲವು ಭಾಷೆಗಳನ್ನು ಮಾತನಾಡುವ ಜನರಿದ್ದಾರೆ. ಇವರುಗಳ ಮಧ್ಯೆ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಕನ್ನಡಿಗರಿಗೆ ಇದೆ.

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ಭಾಷೆಯ ಅಸ್ಮಿತೆಯ ರಕ್ಷಣೆಗಾಗಿ ಎಲ್ಲ ಹಂತಗಳಲ್ಲಿ ಕನ್ನಡದ ಅನುಷ್ಠಾನವನ್ನು ಸರ್ಕಾರ ಮಾಡುತ್ತಿದೆ. ಇದರ ಜೊತೆಗೆ ಕರ್ನಾಟಕ ರಾಜ್ಯದ ಪ್ರತಿಯೊಬ್ಬರೂ ಕನ್ನಡ ಮಾತನಾಡುವಂತೆ ಆಗಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್ಲ ತಿಳಿಸಿದರು.

ನಗರದ ಕನ್ನಡ ಜಾಗೃತ ಭವನದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಜಾಗೃತಿ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಜಾಗೃತ ಪರಿಷತ್ತು ಸಹಯೋಗದಲ್ಲಿ ನಡೆದ ಕನ್ನಡ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕನ್ನಡಿಗರು ಮೊದಲು ದಿನನಿತ್ಯ ಮತ್ತು ಸಾರ್ವಜನಿಕವಾಗಿ ಕನ್ನಡವನ್ನು ಬಳಸಬೇಕು.‌ ಕನ್ನಡಿಗರು ತಮ್ಮ ಪತ್ರ ವ್ಯವಹಾರಗಳನ್ನು ಕನ್ನಡದಲ್ಲಿ ರಾಜ್ಯ ಸರ್ಕಾರಕ್ಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೂ ಮಾಡಬೇಕು. ಬೆಂಗಳೂರಿನಲ್ಲಿ ಹಲವು ಭಾಷೆಗಳನ್ನು ಮಾತನಾಡುವ ಜನರಿದ್ದಾರೆ. ಇವರುಗಳ ಮಧ್ಯೆ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಕನ್ನಡಿಗರಿಗೆ ಇದೆ. ಕನ್ನಡ ಅಭಿವೃದ್ದಿ ಪ್ರಾಧಿಕಾರ ಕನ್ನಡೇತರಿಗೆ ಕನ್ನಡ ಕಲಿಸುವ ಯೋಜನೆಯನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ ಎಂದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಟಿ.ತಿಮ್ಮೇಶ್ ಮಾತನಾಡಿ, ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಕನ್ನಡ ಉಳಿಸಿ ಬೆಳೆಸುವಲ್ಲಿ ಕನ್ನಡಪರ ಸಂಘಟನೆಗಳು ಪ್ರಧಾನ ಪಾತ್ರ ವಹಿಸುವೆ. ಇದರಿಂದ ಕನ್ನಡಕ್ಕಾಗಿ ದುಡಿಯುವರಿಗೆ ಸಾರ್ಥಕತೆ ಇದೆ. ಬೆಂಗಳೂರಿನಲ್ಲಿ ಕನ್ನಡಿಗರ ಸಂಖ್ಯೆ ಶೇ.40 ರಷ್ಟು ಮಾತ್ರವಿದೆ. ಕನ್ನಡವನ್ನು ನಿರ್ಲಕ್ಷಿಸುವ ಕನ್ನಡ ವಿರೋಧಿಗಳ ಬಗ್ಗೆ ಸದಾ ಎಚ್ಚರವಹಿಸಬೇಕಾಗಿದೆ. ಕರ್ನಾಟಕದಲ್ಲಿ ಕನ್ನಡ ಶೇ.100 ರಷ್ಟು ಜಾರಿಗೆ ಬರಬೇಕು. ಕನ್ನಡಿಗರು ಕನ್ನಡ ನಾಡಿನಲ್ಲಿ ವಿದ್ಯೆ ಮತ್ತು ಉದ್ಯೋಗದಿಂದ ವಂಚಿತರಾಗಬಾರದು. ಕನ್ನಡದ ಅನುಷ್ಠಾನಕ್ಕೆ ಪ್ರಸ್ತುತ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಮಿತಿಗಳು ಮತ್ತು ಸದಸ್ಯರು ಇದ್ದಾರೆ. ಇವರು ಕನ್ನಡಪರ ಸಂಘಟನೆಗಳೊಂದಿಗೆ ಸೇರಿ ಕನ್ನಡ ಅನುಷ್ಠಾನ ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದರು.

ಬೆಂ.ಗ್ರಾ ಜಿಲ್ಲಾ ಕಸಾಪ ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ ಮಾತನಾಡಿ, ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಬಹುರಾಷ್ಟ್ರೀಯ ಕಂಪನಿಗಳು ಮತ್ತು ರಾಷ್ಟ್ರೀಕೃತ ಬ್ಯಾಂಕುಗಳು , ಸ್ವಾಯತ್ತತೆಯ ವಿಶ್ವವಿದ್ಯಾಲಯಗಳು ಮುಂತಾದವು ಕನ್ನಡ ಭಾಷೆಯನ್ನು ನಿರ್ಲಕ್ಷ್ಯ ಮಾಡುತ್ತಿವೆ. ಇದರ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಗಮನ‌ನೀಡಬೇಕಾಗಿದೆ. ಕನ್ನಡ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಬೇಕಾಗಿದೆ ಎಂದರು.

ದ್ವಿಭಾಷಾ ನೀತಿಗೆ ಮನವಿ, ಒತ್ತಾಯ:

ಶಿಕ್ಷಣದಲ್ಲಿ ದ್ವಿಭಾಷಾ ನೀತಿಯನ್ನು ಶಾಸನವಾಗಿ ರೂಪಿಸಿ ಜಾರಿಗೊಳಿಸಬೇಕೆಂದು ದೊಡ್ಡಬಳ್ಳಾಪುರ ವಿವಿಧ ಕನ್ನಡಪರ ‌ಸಂಘಟನೆಗಳು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ್ ಹಾನಗಲ್ಲ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಸಲ್ಲಿಸಿದರು.

ದ್ವಿಭಾಷಾ ನೀತಿಯನ್ನು ಶಾಸನಗೊಳಿಸಿ ಜಾರಿಗೆ ತರುವ ಮೂಲಕ ಕನ್ನಡ ಭಾಷೆಯ ಬಳಕೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ದ್ವಿಭಾಷಾ ನೀತಿಯನ್ನು ಕಡ್ಡಾಯಗೊಳಿಸುವುದರಿಂದ ಪ್ರತಿಯೊಬ್ಬರೂ ಕನ್ನಡವನ್ನು ಶಿಕ್ಷಣದಲ್ಲಿ ಕಲಿಯುವಂತೆ ಕಡ್ಡಾಯಗೊಳಿಸುತ್ತದೆ ಎಂದು ಕನ್ನಡಪರ ಸಂಘಟನೆಗಳ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಡಾ.ಮಲ್ಲಪ್ಪ ಕೆ.ಯರಗೋಳ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಶಂಕರಯ್ಯ, ತಾ.ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ಕನ್ನಡಿಗ ಸ್ನೇಹಕೂಟ ಅಧ್ಯಕ್ಷ ರಾಂ.ಕೆ.ಹನುಮಂತಯ್ಯ, ಕನ್ನಡ ಜಾಗೃತ ಪರಿಷತ್ತು ಕಾರ್ಯದರ್ಶಿ ಡಿ.ಪಿ.ಆಂಜನೇಯ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಕೆ.ಮಹಾಲಿಂಗಯ್ಯ, ನಾಗರತ್ನಮ್ಮ, ವಿ.ಬಸವರಾಜು, ಯು.ಸಿರಾಜ್ ಅಹಮದ್, ರವಿಚಂದ್ರ, ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು.