ಉಡುಪಿ: ಭಾರತ ಸ್ವತಂತ್ರ ರಾಷ್ಟ್ರವಾಗಿ ಗುರುತಿಸಿಕೊಳ್ಳುವ ಮುನ್ನವೇ ರಾಷ್ಟ್ರೀಯತೆಯ ಚಿಂತನೆಯ ತಳಹದಿಯಲ್ಲಿ ಸ್ಥಾಪನೆಗೊಂಡ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನೋಂದಣಿಯ ಬಗ್ಗೆ ಪ್ರಶ್ನೆ ಮಾಡುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಇಸ್ಲಾಮಿಕ್ ಮತೀಯವಾದಿ, ಸಮಾಜದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ಸಂಘಟನೆಗಳನ್ನು ಪ್ರಶ್ನಿಸುವ ಧೈರ್ಯ ಇದೆಯೇ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪ್ರಶ್ನಿಸಿದ್ದಾರೆ.

ಆರ್‌ಎಸ್‌ಎಸ್ ಸ್ಥಾಪನೆಯಾಗಿ ನೂರು ವರ್ಷಗಳಲ್ಲಿ ಸ್ವಾತಂತ್ರ್ಯ ಹೋರಾಟ, ತುರ್ತು ಪರಿಸ್ಥಿತಿ ಹಾಗೂ ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಜೀವದ ಹಂಗು ತೊರೆದು ಲಕ್ಷಾಂತರ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣ ಎಂಬ ಮಹಾಸಂಕಲ್ಪದೊಂದಿಗೆ ಸಾಗುತ್ತಿರುವ ದೇಶಭಕ್ತ ಈ ಸಂಘಟನೆಯ ಘನತೆಗೆ ಧಕ್ಕೆ ತರುವ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯತೆ ವಿರೋಧಿ ನಿಲುವನ್ನು ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ಪ್ರದರ್ಶಿಸಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರ್‌ಎಸ್‌ಎಸ್‌ನ ರಾಷ್ಟ್ರೀಯತೆ, ರಾಷ್ಟ್ರನಿರ್ಮಾಣದ ವೈಖರಿಯನ್ನು ಹಲವು ರಾಷ್ಟ್ರಗಳೇ ಮೆಚ್ಚಿಕೊಂಡಿವೆ. ಇಂತಹ ಆರ್‌ಎಸ್‌ಎಸ್‌ನ ಕಾರ್ಯವೈಖರಿ, ಸಾಮಾಜಿಕ ಬದ್ಧತೆಯ ಬಗ್ಗೆ ಜನರಲ್ಲಿ ಅನುಮಾನ ಮೂಡಿಸುವ ಹೇಳಿಕೆಗಳನ್ನು ನೀಡಿ, ಮತೀಯವಾದಿ ಹಾಗೂ ರಾಷ್ಟ್ರ ವಿರೋಧಿ ಶಕ್ತಿಗಳನ್ನು ಓಲೈಕೆ ಮಾಡಲು ಗೃಹ ಸಚಿವರೇ ಮುಂದಾಗಿರುವುದು ದುರದೃಷ್ಟಕರ ಎಂದು ಯಶ್‌ಪಾಲ್ ಹೇಳಿದ್ದಾರೆ. ಭಯೋತ್ಪಾದನೆ, ಸಮಾಜದಲ್ಲಿ ಅಶಾಂತಿ, ರಾಷ್ಟೀಯ ಆಂತರಿಕ ಭದ್ರತೆಗೆ ಸವಾಲು ಹಾಕಿರುವ ಇಸ್ಲಾಮಿಕ್ ಮತೀಯ ಶಕ್ತಿಗಳು ಹಲವಾರು ಪ್ರಕರಣಗಳಲ್ಲಿ ಭಾಗಿಯಾದ ಬಗ್ಗೆ ಪುರಾವೆಗಳಿದ್ದರೂ ಈ ಬಗ್ಗೆ ಪ್ರಿಯಾಂಕ್ ಖರ್ಗೆ ಚಕಾರ ಎತ್ತುವ ಧೈರ್ಯ ಮಾಡಿಲ್ಲ. ರಾಜ್ಯ ಸರ್ಕಾರದ ಜನವಿರೋಧಿ ನೀತಿಯಿಂದ ವ್ಯಾಪಕ ಆಕ್ರೋಶ ಉಂಟಾಗುತ್ತಿದ್ದು, ಪ್ರಿಯಾಂಕ್ ಖರ್ಗೆ ತಮ್ಮ ಬೇಜವಾಬ್ದಾರಿ ಹೇಳಿಕೆಗಳ ಮೂಲಕ ಜನತೆಯ ದಿಕ್ಕು ತಪ್ಪಿಸಲು ವಿಫಲ ಪ್ರಯತ್ನ ಮಾಡುತ್ತಿದ್ದು, ಆರ್‌ಎಸ್‌ಎಸ್ ತನ್ನ ವಿರುದ್ಧದ ಬಾಲಿಶ ಹೇಳಿಕೆಗಳಿಗೆ ತಕ್ಕ ಉತ್ತರ ನೀಡಲಿದೆ ಎಂದು ಯಶ್ ಪಾಲ್ ಸುವರ್ಣ ಹೇಳಿದ್ದಾರೆ.