ಸಾರಾಂಶ
ಸುಭಾಷ್ ಚಂದ್ರಬೋಸ್ ಆಟದ ಮೈದಾನದಲ್ಲಿ ಅಂತಾರಾಷ್ಟ್ರೀಯ ಮಾದಕ ವ್ಯಸನ- ಅಕ್ರಮ ಕಳ್ಳಸಾಗಣಿಕೆ ವಿರೋಧಿ ದಿನ ಉದ್ಘಾಟನೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಮಾದಕ ವ್ಯಸನಕ್ಕೆ ಒಮ್ಮೆ ಬಲಿಯಾದರೆ ಅದರಿಂದ ಹೊರ ಬರುವುದು ಕಷ್ಟ ಸಾಧ್ಯ. ಜೊತೆಗೆ ನಮ್ಮ ಬದುಕನ್ನು ನಾವೇ ಹಾಳು ಮಾಡಿಕೊಂಡಂತಾಗುತ್ತದೆ. ಹೀಗಾಗಿ ಯಾರೂ ಮಾದಕ ವ್ಯಸನಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿ ಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.ನಗರದ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಪೊಲೀಸ್ ಇಲಾಖೆಯಿಂದ ಗುರುವಾರ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳಸಾಗಣಿಕೆ ವಿರೋಧಿ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿ ದಿಸೆಯಲ್ಲಿ ವಿದ್ಯಾಭ್ಯಾಸದ ಬಗ್ಗೆ ಹೆಚ್ಚು ಗಮನಹರಿಸಿದಾಗ ಮಾದಕ ವ್ಯಸನದಿಂದ ಮುಕ್ತರಾಗುವ ಜೊತೆಗೆ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಹೇಳಿದರು.
ದೇಶದಲ್ಲೇ ಅತ್ಯಂತ ಉತ್ತಮ ಗಾಳಿ ಹೊಂದಿರುವ ನಗರಗಳಲ್ಲಿ ಚಿಕ್ಕಮಗಳೂರು ಎರಡನೇ ಸ್ಥಾನ ಪಡೆದಿದೆ. ಇಂಥ ಉತ್ತಮ ಪರಿಸರದಲ್ಲಿ ವಾಸಿಸುತ್ತಿರುವ ಪ್ರತಿಯೊಬ್ಬರೂ ಮಾದಕ ವ್ಯಸನಗಳಿಂದ ಮುಕ್ತರಾಗಬೇಕು. ಇತ್ತೀಚಿನ ದಿನಗಳಲ್ಲಿ ಮಾದಕ ವ್ಯಸನದ ಹಲವು ಪ್ರಕರಣಗಳು ಹೆಚ್ಚು ಕಂಡುಬರುತ್ತಿವೆ. ಅತಿಯಾದ ಒತ್ತಡ ಹಾಗೂ ಜೀವನದ ಮೇಲಿನ ಜಿಗುಪ್ಸೆಯಿಂದ ಮಾದಕ ವ್ಯಸನಕ್ಕೆ ಯುವ ಪೀಳಿಗೆ ಬಲಿಯಾಗುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೆ ಮನುಷ್ಯ ಮನಸ್ಸು ಮಾಡಿದರೆ ಯಾವುದೂ ಅಸಾಧ್ಯವಲ್ಲ. ಆದರೆ ಎಲ್ಲರೂ ಮನಸ್ಸು ಮಾಡಬೇಕು. ಆಗ ನಿಮ್ಮ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದರು.ಇದೇ ನಿಟ್ಟಿನಲ್ಲಿ ಜಿಲ್ಲೆ ಪ್ರತಿ ಗ್ರಾಪಂ ಮಟ್ಟದಲ್ಲಿಯೂ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕಾರ್ಯಕ್ರಮ ರೂಪಿಸುತ್ತೇವೆ. ಈ ಮೂಲಕ ಪ್ರತಿಯೊಬ್ಬರಲ್ಲಿಯೂ ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು.
ನ್ಯಾಯಾಧೀಶೆ ರಾಜೇಶ್ವರಿ ಮಾತನಾಡಿ, ಚೀನಾದಲ್ಲಿ ಹಿಂದೆ ಡ್ರಗ್ಸ್ ಬಳಕೆ ಹೆಚ್ಚಾಗಿತ್ತು. ಇದನ್ನು ನಿಯಂತ್ರಿಸಬೇಕು ಎಂಬ ಉದ್ದೇಶ ದಿಂದ ಓರ್ವ ವ್ಯಕ್ತಿ ಆರಂಭಿಸಿದ ಹೋರಾಟದ ಫಲವಾಗಿ 1998 ರಿಂದ ಅಂತಾರಾಷ್ಟ್ರೀಯ ದಿನಾಚರಣೆಯನ್ನಾಗಿ ಮಾಡ ಲಾಗುತ್ತಿದೆ. ಮಾದಕ ವ್ಯಸನಕ್ಕೆ ಬಲಿಯಾದಲ್ಲಿ ಕುಟುಂಬ, ಹಣ, ಸ್ನೇಹಿತರು ಸೇರಿದಂತೆ ಎಲ್ಲವನ್ನೂ ಕಳೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಮಾದಕ ವಸ್ತುಗಳನ್ನು ಸೇವಿಸಿದಾಗ ಕ್ಷಣಿಕ ಸುಖ ಸಿಗಬಹುದು. ಆದರೆ ಮುಂದೆ ಜೀವನದಲ್ಲಿ ಕೆಟ್ಟ ಪರಿಣಾಮ ಎದುರಿಸ ಬೇಕಾಗುತ್ತದೆ. ಹೀಗಾಗಿ ಡ್ರಗ್ಸ್ ಸೇರಿದಂತೆ ಎಲ್ಲ ರೀತಿ ಮಾದಕ ವಸ್ತುಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಸರ್ಕಾರ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಕೆಲಸ ಮಾಡುತ್ತಿವೆ. ಎಲ್ಲಿಯಾದರೂ ಮಾದಕ ವಸ್ತು ಸೇವನೆ ಹಾಗೂ ಮಾರಾಟ ಕಂಡು ಬಂದಲ್ಲಿ ಸಂಬಂಧಿಸಿದವರಿಗೆ ಮಾಹಿತಿ ನೀಡಬೇಕು. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದರು.
ಎಸ್ಪಿ ಡಾ. ವಿಕ್ರಂ ಅಮಟೆ ಮಾತನಾಡಿ, ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮ ಅರಿತು ಕರ್ನಾಟಕ ಸರ್ಕಾರ ಡ್ರಗ್ಸ್ ಫ್ರೀ ಕರ್ನಾಟಕ ಆ್ಯಪ್ ಅಭಿವೃದ್ಧಿಗೊಳಿಸಿದೆ. ಪ್ಲೇ ಸ್ಟೋರ್ನಲ್ಲಿ ಈ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಎಲ್ಲಿಯಾದರೂ ಮಾದಕ ವಸ್ತುಗಳ ಸೇವನೆ ಹಾಗೂ ಮಾರಾಟ ಮಾಡುವುದು ಕಂಡು ಬಂದಲ್ಲಿ ದೂರು ನೀಡಬಹುದು ಎಂದರು.ಕಾರ್ಯಕ್ರಮದಲ್ಲಿ ಎಎಸ್ಪಿ ಸಿ.ಟಿ.ಜಯಕುಮಾರ್, ಜಿಪಂ ಸಿಇಒ ಎಚ್.ಎಸ್.ಕೀರ್ತನಾ ಸೇರಿದಂತೆ ಪೊಲೀಸ್ ಅಧಿಕಾರಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. 26 ಕೆಸಿಕೆಎಂ 2ಚಿಕ್ಕಮಗಳೂರಿನ ನೇತಾಜಿ ಸುಭಾಷ್ ಚಂದ್ರ ಜಿಲ್ಲಾ ಕ್ರೀಡಾಂಗಣದಲ್ಲಿ ಪೊಲೀಸ್ ಇಲಾಖೆಯಿಂದ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳಸಾಗಣಿಕೆ ವಿರೋಧಿ ದಿನ ಕಾರ್ಯಕ್ರಮದ ಜಾಥಕ್ಕೆ ನ್ಯಾಯಾಧೀಶೆ ರಾಜೇಶ್ವರಿ ಚಾಲನೆ ನೀಡಿದರು. ಎಸ್ಪಿ ಡಾ. ವಿಕ್ರಂ ಅಮಟೆ, ಎಎಸ್ಪಿ ಸಿ.ಟಿ.ಜಯಕುಮಾರ್, ಭಾಗ್ಯ ಇದ್ದರು.