ಹಾವೇರಿ: ಕೆಲವು ಅಂಗಡಿಕಾರರು ಒತ್ತಾಯಪೂರ್ವಕವಾಗಿ ರೈತರಿಗೆ ಕಾಂಪ್ಲೆಕ್ಸ್ ಗೊಬ್ಬರ ಕೊಡುತ್ತಿರುವ ಬಗ್ಗೆ ದೂರುಗಳಿವೆ. ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಇಲ್ಲಿನ ಜಿಪಂ ಸಭಾಂಗಣದಲ್ಲಿ ಸೋಮವಾರ ನಡೆದ ಕೇಂದ್ರ ಪುರಸ್ಕೃತ ಯೋಜನೆಗಳ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯಲ್ಲಿ ಅವರು ಮಾತನಾಡಿದರು. ರೈತರಿಗೆ ಗೊಬ್ಬರ ಮತ್ತು ಬೀಜ ವಿತರಣೆಯಲ್ಲಿ ಮೊದಲು ಸಹಕಾರಿ ಸಂಘಗಳಿಗೆ ಆದ್ಯತೆ ನೀಡಬೇಕು. ಬಳಿಕ ಖಾಸಗಿ ಮಾರಾಟಗಾರರಿಗೂ ಡಿಎಪಿ ಹಾಗೂ ಯೂರಿಯಾ ಪೂರೈಕೆಗೆ ಅವಕಾಶ ಮಾಡಿಕೊಡಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, ಈ ಬಾರಿ ಹೆಚ್ಚಿನ ರೈತರು ಸೋಯಾಬಿನ್ ಬೆಳೆ ಬೆಳೆಯಲು ಆಸಕ್ತಿ ತೋರುತ್ತಿದ್ದಾರೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಸೋಯಾಬಿನ್ ಬೀಜ ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ ಈಗಲೇ ಬೀಜ ತರಿಸಿಕೊಳ್ಳಲು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.ಜಂಟಿ ಕೃಷಿ ನಿರ್ದೇಶಕ ಕೆ. ಮಲ್ಲಿಕಾರ್ಜುನ ಮಾತನಾಡಿ, ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರಕ್ಕೆ 65 ಸಾವಿರ ಟನ್ ಬೇಡಿಕೆ ಇದ್ದು, ಮಳೆ ಕೊರತೆಯಿಂದ ವಿತರಣೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿತ್ತು. ಈಗ ಮಳೆಯಾಗುತ್ತಿರುವ ಹಿನ್ನೆಲೆ ಯೂರಿಯಾ ವಿತರಣೆ ಪ್ರಾರಂಭಿಸಲಾಗುವುದು ಎಂದರು. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಸರ್ಕಾರಿ ನೌಕರರು ಹಾಗೂ ಆದಾಯ ತೆರಿಗೆ ಪಾವತಿಸುವವರ ಹೆಸರನ್ನು ಕೈಬಿಡಲಾಗಿದ್ದು, ಜಿಲ್ಲೆಯಲ್ಲಿ ಸುಮಾರು 54 ಸಾವಿರ ರೈತರ ಹೆಸರುಗಳನ್ನು ಯೋಜನೆಯಿಂದ ತೆಗೆದುಹಾಕಲಾಗಿದೆ ಎಂದು ಅವರು ತಿಳಿಸಿದರು.

ಅರ್ಹರಿಗೆ ಬೆಳೆವಿಮೆ ನೀಡಿ: ಬೆಳೆವಿಮೆ ಮಾಡಿಸುವ ಅರ್ಹ ರೈತರಿಗೆ ಅನ್ಯಾಯ ಆಗಬಾರದು. ಬೆಳೆವಿಮೆಯಲ್ಲಿ ಏಜೆಂಟರೊಂದಿಗೆ ಕೆಲ ಕೃಷಿ ಅಧಿಕಾರಿಗಳೇ ಶಾಮೀಲಾಗಿರುವ ಬಗ್ಗೆ ಒಂದಿಲ್ಲೊಂದು ದಿನ ತನಿಖಾ ತಂಡ ಬಂದು ಸಮಗ್ರವಾಗಿ ತನಿಖೆ ನಡೆಸುತ್ತೆ. ಆಗ ಶಾಮೀಲಾಗಿರುವ ಅಧಿಕಾರಿಗಳ ತಲೆದಂಡವಾಗಲಿದೆ ಎಂದು ಸವಣೂರು ಭಾಗದ ಹಲವಾರು ರೈತರಿಗೆ ಕಳೆದ ವರ್ಷದ ಬೆಳೆ ವಿಮೆ ಪರಿಹಾರ ಇನ್ನೂ ಸಿಗದಿರುವ ಕುರಿತು ಬೊಮ್ಮಾಯಿ ವಿಮಾ ಕಂಪನಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ಈ ಕುರಿತು ಶೀಘ್ರದಲ್ಲೇ ರಾಜ್ಯ ಮಟ್ಟದ ಸಭೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿ ತಿಳಿಸಿದರು. `ರೈತರಿಗೆ ಅನ್ಯಾಯ ಮಾಡಬೇಡಿ. ಇಲ್ಲವಾದರೆ ವಿಮಾ ಕಂಪನಿಗಳ ಮೇಲಿನ ಜನರ ನಂಬಿಕೆ ಕಳೆದುಹೋಗುತ್ತದೆ'''''''' ಎಂದು ಬೊಮ್ಮಾಯಿ ಎಚ್ಚರಿಸಿದರು.

ಕೇಂದ್ರ ಸರ್ಕಾರದ ಅಕ್ಕಿ ಎಂಬ ಫಲಕ ಹಾಕಿ: ಆಹಾರ ಇಲಾಖೆ ಉಪ ನಿರ್ದೇಶಕ ಡಿ.ಜೆ. ಮಂಜುನಾಥ ಮಾತನಾಡಿ, ಅಕ್ರಮ ಅಕ್ಕಿ ಸಾಗಾಟ ಹಾಗೂ ಮಾರಾಟ ವಿರುದ್ಧ 17 ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, “ಅನ್ನ ಕದಿಯುವವರಿಗೆ ಜಾಮೀನು ಸಿಗದಂತೆ ಕಾನೂನು ಮಾಡಬೇಕು. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.ರೇಷನ್ ಅಂಗಡಿಗಳಲ್ಲಿ ಕೇಂದ್ರ ಸರ್ಕಾರದ ಯೋಜನೆಯಡಿ ಅಕ್ಕಿ ವಿತರಿಸಲಾಗುತ್ತಿದೆ ಹಾಗೂ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಹಣ ನೀಡಲಾಗುತ್ತಿದೆ ಎಂಬುದನ್ನು ಸ್ಪಷ್ಟಪಡಿಸುವ ಫಲಕ ಅಳವಡಿಸಬೇಕು ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.ಅತಿಥಿ ಶಿಕ್ಷಕರು ಬೇಕು: ಶಿಕ್ಷಣ ಇಲಾಖೆಯಲ್ಲಿ 1,294 ಪ್ರಾಥಮಿಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಈಗಾಗಲೇ 740 ಅತಿಥಿ ಶಿಕ್ಷಕರನ್ನು ನೇಮಿಸಲಾಗಿದ್ದು, ಇನ್ನೂ 134 ಅತಿಥಿ ಶಿಕ್ಷಕರ ಬೇಡಿಕೆ ಸಲ್ಲಿಸಲಾಗಿದೆ ಎಂದು ಡಿಡಿಪಿಐ ಮೋಹನ ದಂಡಿನ ತಿಳಿಸಿದರು.ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಆಕರ್ಷಿಸಲು ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸಲಾಗುತ್ತಿದೆ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, `ಕನ್ನಡ ಶಾಲೆಗಳಲ್ಲಿ ಇಂಗ್ಲಿಷ್ ಕಲಿಸುತ್ತೇವೆ ಎಂದು ಶಿಕ್ಷಣ ಸಚಿವರು ಅಧಿಕೃತವಾಗಿ ಘೋಷಿಸಲಿ'''''''' ಎಂದು ಟೀಕಿಸಿದರು.ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದರೂ ಪಾಸ್ ಮಾಡುವುದು ಹಾಗೂ ಹಲವು ಅವಕಾಶ ನೀಡುವ ಶಿಕ್ಷಣ ವ್ಯವಸ್ಥೆಯ ಬದಲಾವಣೆಗಳನ್ನು ಟೀಕಿಸಿದ ಬೊಮ್ಮಾಯಿ, `ಎರಡು ವರ್ಷಗಳ ಹಿಂದೆ ರಾಜ್ಯದ ಫಲಿತಾಂಶ ಶೇ.48 ಇತ್ತು. ಈಗ ಏಕಾಏಕಿ ಶೇ.95ಕ್ಕೆ ಏರಿದೆ. ರಾಜ್ಯದ ಶಿಕ್ಷಣ ವ್ಯವಸ್ಥೆಗೆ ಜಯವಾಗಲಿ'''''''' ಎಂದು ವ್ಯಂಗ್ಯವಾಡಿದರು.


ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಡಾ. ಪುನೀತ್, ಹೆಚ್ಚುವರಿ ಎಸ್ಪಿ ಲಕ್ಷ್ಮಣ ಶಿರಕೋಳ ಸೇರಿದಂತೆ ವಿವಿಧ ಅಧಿಕಾರಿಗಳು ಇದ್ದರು..