ಮಹನೀಯರನ್ನು ಒಂದೇ ಜಾತಿಗೆ ಸೀಮಿತಗೊಳಿಸಬೇಡಿ

| Published : Oct 08 2025, 01:00 AM IST

ಸಾರಾಂಶ

ಮಹನೀಯರನ್ನು ಒಂದೇ ಜಾತಿಗೆ ಸೀಮಿತಗೊಳಿಸದೆ ಎಲ್ಲಾ ಜಾತಿಯವರು ಎಲ್ಲಾ ಮಹನೀಯರ ಜಯಂತಿಗಳನ್ನು ಆಚರಣೆ ಮಾಡಬೇಕು ಎಂದು ಶಾಸಕ ಎಸ್.ಆರ್ ಶ್ರೀನಿವಾಸ್ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಗುಬ್ಬಿ

ಮಹನೀಯರನ್ನು ಒಂದೇ ಜಾತಿಗೆ ಸೀಮಿತಗೊಳಿಸದೆ ಎಲ್ಲಾ ಜಾತಿಯವರು ಎಲ್ಲಾ ಮಹನೀಯರ ಜಯಂತಿಗಳನ್ನು ಆಚರಣೆ ಮಾಡಬೇಕು ಎಂದು ಶಾಸಕ ಎಸ್.ಆರ್ ಶ್ರೀನಿವಾಸ್ ಮನವಿ ಮಾಡಿದರು.ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲೂಕು ಆಡಳಿತ,ಸಮಾಜ ಕಲ್ಯಾಣ ಇಲಾಖೆ ಮತ್ತು ತಾಲೂಕಿನ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಏರ್ಪಡಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು,

ಮಹಾನ್ ವ್ಯಕ್ತಿಗಳು ಸಮಾಜವನ್ನು ಪರಿವರ್ತನೆಯ ಮಾಡುವ ನಿಟ್ಟಿನಲ್ಲಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಆದ್ದರಿಂದ ಮಹಾನ್ ವ್ಯಕ್ತಿಗಳ ತತ್ವ ಆದರ್ಶಗಳನ್ನು ನಾವುಗಳು ಮೈಗೂಡಿಸಿಕೊಳ್ಳಬೇಕು.ಶ್ರೀಮಹರ್ಷಿ ವಾಲ್ಮೀಕಿಯವರು ಒಂದು ಸಮಾಜಕ್ಕೆ ಮಾತ್ರ ರಾಮಾಯಣವನ್ನು ಬರೆದಿಲ್ಲ, ಇಡೀ ಪ್ರಪಂಚಕ್ಕೆ ಅವರು ರಾಮಾಯಣವನ್ನು ಬರೆದು ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿದೆ. ನಾವುಗಳು ಮಹಾನ್ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ನಡೆದರೆ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದರು.

ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಎನ್.ಅಣ್ಣಪ್ಪಸ್ವಾಮಿ ಮಾತನಾಡಿ, ಗುಬ್ಬಿ ತಾಲೂಕು ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘಕ್ಕೆ ಶಾಸಕರ ನೇತೃತ್ವದಲ್ಲಿ 21 ಗುಂಟೆ ಜಮೀನನ್ನು ಮಂಜೂರು ಮಾಡಿರುವುದರಿಂದ ಶಾಸಕರಿಗೆ ಹಾಗೂ ತಹಸೀಲ್ದಾರ್ ಅವರಿಗೆ ಸಂಘದ ವತಿಯಿಂದ ಕೃತಜ್ಞತೆ ಸಲ್ಲಿಸಿದರು. ಮಹರ್ಷಿ ವಾಲ್ಮೀಕಿ ಅವರು ಋಷಿಯಾಗಿ ಜ್ಞಾನ ಪಡೆದುಕೊಂಡು ನಂತರ ರಾಮಾಯಣ ಬರೆದು ಮುಂದಿನ ಯುವ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆ ಎಂದರು.

ಶ್ರೀ ಮಹರ್ಷಿ ವಾಲ್ಮೀಕಿ ಅವರ ವಿಚಾರಧಾರೆಗಳ ಬಗ್ಗೆ ಕಡಬ ಕೆಪಿಎಸ್ ಶಾಲೆಯ ಸಹಶಿಕ್ಷಕ ಮುರಳಿಧರ ಎಚ್.ಆರ್ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಮಿಮಿಕ್ರಿ ಗೋಪಿ ಅವರಿಂದ ನಗೆಹಬ್ಬವನ್ನು ನಡೆಸಲಾಯಿತು. ಶ್ರೀ ವಾಲ್ಮೀಕಿ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿ ಪಟ್ಟಣದ ಪ್ರಮುಖ ಬೀದಿಯಲ್ಲಿ ವಿವಿಧ ಜಾನಪದ ಕಲಾ ತಂಡಗಳಾದ ವೀರಗಾಸೆ, ಮಹಿಳಾ ಚಂಡೇವಾದ್ಯ, ಪೂಜಾ ಕುಣಿತ, ಗೊಂಬೆ ಬಳಗ, ನಾಸಿಕ್ ಡೋಲ್, ಗರಡಿ ಆಂಜನೇಯ ಇನ್ನೂ ಮುಂತಾದ ಜಾನಪದ ಕಲಾ ತಂಡದೊಂದಿಗೆ ಮೆರವಣಿಗೆ ಮೂಲಕ ಮೆರವಣಿಗೆ ಮಾಡಲಾಯಿತು.ಇದೇ ಸಂದರ್ಭದಲ್ಲಿ ವಾಲ್ಮೀಕಿ ಸಮಾಜದ ನಿವೃತ್ತಿ ಹೊಂದಿದ ಅಧಿಕಾರಿಗಳಿಗೆ, ತಾಲೂಕಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಗ್ಯಾರೆಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಆರ್. ವೆಂಕಟೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹೆಚ್.ಸಿ.ಗುರುಪ್ರಸಾದ್, ಗುಬ್ಬಿ ತಾಲೂಕು ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ತಾಲೂಕು ಅಧ್ಯಕ್ಷ ಜಿ.ಎನ್.ಅಡವೀಶಯ್ಯ, ಸಣ್ಣರಂಗಯ್ಯ, ತಹಸೀಲ್ದಾರ್ ಬಿ.ಆರತಿ, ಇಒ ರಂಗನಾಥ್, ಪ.ಪಂ. ಮುಖ್ಯಾಧಿಕಾರಿ ಮಂಜುಳಾದೇವಿ, ಬಿಇಒ ಎಂ.ಎಸ್.ನಟರಾಜು, ಟಿ.ಎಚ್.ಒ ಬಿಂದು ಮಾಧವ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಿ.ಎಸ್.ವೀಣಾ, ಸಂಘದ ಪದಾಧಿಕಾರಿಗಳಾದ ರಾಮಚಂದ್ರಪ್ಪ, ಉಪಾಧ್ಯಕ್ಷ ನರಸಿಂಹಮೂರ್ತಿ, ರಘು , ಎಂಎಚ್ ಪಟ್ನಾ ದೇವರಾಜು, ರಂಗನಾಥ್, ಹೊಸಹಳ್ಳಿ ಚೇತನ್ ನಾಯಕ್, ಸೋಮಲಾಪುರ ಕೃಷ್ಣಮೂರ್ತಿ, ಮಂಚಲದೊರೆ ರಮೇಶ್, ಎಂಎನ್ ಕೋಟೆ ಪಾಂಡಪ್ಪ, ನಾಗರಾಜು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ದಲಿತ ಮುಖಂಡರು, ಎಲ್ಲಾ ಇಲಾಖೆಯ ಮುಖ್ಯಸ್ಥರು ಉಪಸ್ಥಿತರಿದ್ದರು.