ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ
ಜನ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಅಧಿಕಾರಿಗಳು ಜಾಗೃತಿ ವಹಿಸಬೇಕು. ಈಗಾಗಲೇ ಜಿಲ್ಲೆಯ ಕೆರೆಗಳನ್ನು ತುಂಬಿಸಲು ಕಾಲುವೆ ಮೂಲಕ ನೀರನ್ನು ಹರಿಸಲಾಗುತ್ತಿದ್ದು, ಕಟ್ಟುನಿಟ್ಟಾಗಿ ನಿಗಾವಹಿಸಿ ಕೆರೆಗಳನ್ನು ತುಂಬಿಸುವ ಮೂಲಕ ಕುಡಿಯುವ ನೀರಿನ ಸಮರ್ಪಕ ಬಳಕೆಗೆ ಎಲ್ಲ ಅಧಿಕಾರಿಗಳು ಕಾರ್ಯೋನ್ಮುಖರಾಗುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆಯನ್ನು ನೀಡಿದ್ದಾರೆ.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ನೀರಿನ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನ ನೀಡಿದರು. ಜಿಲ್ಲೆಯಲ್ಲಿ ಈಗಾಗಲೇ ನೀರಿನ ಅವಶ್ಯಕತೆ ಇರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ಒದಗಿಸಲಾಗುತ್ತಿದೆ. ಶಾಲೆ, ಆಸ್ಪತ್ರೆ ಸೇರಿದಂತೆ ಅಗತ್ಯವಿರುವ ಕಡೆ ಆದ್ಯತೆ ಮೇರಗೆ ನೀರು ಪೂರೈಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕುಡಿಯುವ ನೀರಿಗಾಗಿ ಖಾಸಗಿ ಬೋರ್ವೆಲ್ಗಳು, ತೆರೆದ ಬಾವಿಗಳನ್ನು ಗುರುತಿಸಿ ನೀರಿನ ಲಭ್ಯತೆ ಪರಿಶೀಲಿಸಬೇಕು. ಕಾಲಕಾಲಕ್ಕೆ ಟಾಸ್ಕ್ಪೋರ್ಸ್ ಸಮಿತಿ ಸಭೆ ನಡೆಸಿ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಟ್ಯಾಂಕರ್ ನೀರು ಅವಶ್ಯಕತೆ ಇದ್ದ ಕಡೆ ಟಾಸ್ಕ್ಪೋರ್ಸ್ ಸಮಿತಿ ಸಭೆಯಲ್ಲಿ ಅನುಮೋದನೆ ಪಡೆದು ನೀರು ಒದಗಿಸಲು ಕ್ರಮ ವಹಿಸಬೇಕು. ಕಾಲುವೆಯ ಕೊನೆಯ ಭಾಗದವರೆಗೂ ನೀರು ತಲುಪುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಸಂಗ್ರಹಿಸಿಡಲು ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆಯನ್ನು ನೀಡಿದ್ದಾರೆ.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಅಧಿಕಾರಿ ಬಸವರಾಜ ಕುಂಬಾರ, ಹೆಸ್ಕಾಂ ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ, ಕೆಬಿಜೆಎನ್ಎಲ್ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.ಬಾಕ್ಸ್ವಿಮಾನ ನಿಲ್ಧಾಣ ಸ್ಥಳಕ್ಕೆ ಡಿಸಿ ಭೇಟಿ, ಪರಿಶೀಲನೆ
ವಿಜಯಪುರ: ಬುರಣಾಪುರ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಸ್ಥಳಕ್ಕೆ ತೆರಳಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಮಧಭಾವಿ, ಅಲಿಯಾಬಾದ ಹಾಗೂ ಬುರಣಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲು ಅಗತ್ಯ ಕ್ರಮ ವಹಿಸುವುದಾಗಿ ಹೇಳಿದರು. ಸ್ಥಳೀಯ ಸಾರ್ವಜನಿಕರ ಜೊತೆಗೆ ಪರಿಸರ ಅಭಿಯಾನ ಜಾಗೃತಿ ಕುರಿತು ಸಭೆಯಲ್ಲಿ ಮಾತನಾಡಿದ ಅವರು, ತಾವು ಮಂಡಿಸಿರುವ ಅನಿಸಿಕೆಗಳನ್ನು ದೃಢೀಕರಿಸಿ ಕೇಂದ್ರ ಸರ್ಕಾರದ ಅರಣ್ಯ ಮಂತ್ರಾಲಯಕ್ಕೆ ವರದಿ ಸಲ್ಲಿಸುವುದಾಗಿ ತಿಳಿಸಿದರು. ಬೆಳಗಾವಿ ವಿಭಾಗದ ಹಿರಿಯ ಪರಿಸರ ಅಭಿಯಂತರ ಗೋಪಾಲಕೃಷ್ಣ ಸಣ್ಣತಂಗಿ, ಜಿಲ್ಲಾ ಪರಿಸರ ಅಧಿಕಾರಿ ಎಮ್.ಎ.ಮಣಿಯಾರ, ಎಕ್ಸಿಕ್ಯೂಟಿವ್ ಎಂಜಿನಿಯರ್ ರಾಜು ಮಜುಮದಾರ, ಸಹಾಯಕ ಅಭಿಯಂತರ ಎಮ್.ಎಮ್.ಪಾಟೀಲ, ರವಿ ಪಾಟೀಲ ಇತರರು ಉಪಸ್ಥಿತರಿದ್ದರು.