ಕಾರ್ಕಳದ ಅಭಿವೃದ್ಧಿಗೆ ಅಡ್ಡಗಾಲು ಹಾಕಬೇಡಿ: ರವೀಂದ್ರ ಮೊಯ್ಲಿ

| Published : Nov 04 2025, 03:15 AM IST

ಸಾರಾಂಶ

ಕಾರ್ಕಳ ಕ್ಷೇತ್ರದ ಅಭಿವೃದ್ಧಿ ಕುರಿತು ತಪ್ಪು ಮಾಹಿತಿಯ ಆಧಾರದಲ್ಲಿ ಕೆಲವು ಕಾಂಗ್ರೆಸ್ ನಾಯಕರು ನೀಡಿರುವ ಪತ್ರಿಕಾ ಹೇಳಿಕೆಗಳು ರಾಜಕೀಯ ಪ್ರಚಾರದ ಉದ್ದೇಶದಿಂದ ಆಗಿದ್ದು, ಅದು ಜನತೆಗೆ ತಪ್ಪು ಸಂದೇಶ ನೀಡುತ್ತದೆ ಎಂದು ರವೀಂದ್ರ ಮೊಯ್ಲಿ ಹೇಳಿದರು.

ಕನ್ನಡಪ್ರಭ ವಾರ್ತೆ ಕಾರ್ಕಳ

ಕಾರ್ಕಳ ಕ್ಷೇತ್ರದ ಅಭಿವೃದ್ಧಿ ಕುರಿತು ತಪ್ಪು ಮಾಹಿತಿಯ ಆಧಾರದಲ್ಲಿ ಕೆಲವು ಕಾಂಗ್ರೆಸ್ ನಾಯಕರು ನೀಡಿರುವ ಪತ್ರಿಕಾ ಹೇಳಿಕೆಗಳು ರಾಜಕೀಯ ಪ್ರಚಾರದ ಉದ್ದೇಶದಿಂದ ಆಗಿದ್ದು, ಅದು ಜನತೆಗೆ ತಪ್ಪು ಸಂದೇಶ ನೀಡುತ್ತದೆ. ಕಾರ್ಕಳದ ಅಭಿವೃದ್ಧಿಗೆ ಅಡ್ಡಗಾಲು ಹಾಕುವ ಬದಲು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವರಿಕೆ ಮಾಡಿಕೊಡಬೇಕು ಎಂದು ಬಿಜೆಪಿ ಕಾರ್ಕಳ ಘಟಕದ ವಕ್ತಾರ ರವೀಂದ್ರ ಮೊಯ್ಲಿ ಹೇಳಿದರು.ಅವರು ಪತ್ರಿಕಾ ಪ್ರಕಟಣೆಯಲ್ಲಿ, ಕಾರ್ಕಳ ಕ್ಷೇತ್ರವು ಶೈಕ್ಷಣಿಕ ಹಾಗೂ ಪ್ರವಾಸೋದ್ಯಮದ ಕೇಂದ್ರವಾಗಬೇಕೆಂಬ ಉದ್ದೇಶದಿಂದ 2004ರಲ್ಲಿ ಶಾಸಕ ವಿ. ಸುನೀಲ್ ಕುಮಾರ್ ಅವರ ನೇತೃತ್ವದಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳು ಜಾರಿಗೆ ಬಂದವು. ವಿಶೇಷವಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಮಹಿಳೆಯರಿಗೆ ಅವಕಾಶ ಕಲ್ಪಿಸುವ ದೃಷ್ಟಿಯಿಂದ ಕಾರ್ಕಳವನ್ನು ಶೈಕ್ಷಣಿಕ ಹಬ್ ಆಗಿ ರೂಪಿಸುವ ಪ್ರಯತ್ನದಿಂದ ಸರ್ಕಾರದ ಆದೇಶದಂತೆ ಬಿ.ಎಸ್ಸಿ ನರ್ಸಿಂಗ್ ಕಾಲೇಜು ಸ್ಥಾಪಿಸಲಾಯಿತು. ಇದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಸರ್ಕಾರಿ ನರ್ಸಿಂಗ್ ಕಾಲೇಜು ಆಗಿದೆ ಎಂದು ಹೇಳಿದ್ದಾರೆ.

ಶಾಸಕರ ಸತತ ಪ್ರಯತ್ನದಿಂದ ಆರೋಗ್ಯ ಇಲಾಖೆಯಿಂದ ಕಳೆದ ಜುಲೈ 30ರಂದು ಸರ್ಕಾರಿ ಮಟ್ಟದ ಟಿಪ್ಪಣಿ ಪತ್ರ ಪ್ರಧಾನ ಕಾರ್ಯದರ್ಶಿಗಳಿಗೆ ಕಳುಹಿಸಲಾಗಿದೆ. ಅದೇ ರೀತಿ ಶಿಕ್ಷಕರ ನೇಮಕಾತಿ ವಿಚಾರದಲ್ಲಿಯೂ ಹಲವು ಬಾರಿ ಮನವಿ ಸಲ್ಲಿಸಲಾಗಿದ್ದು, ಇನ್ನೂ ಸ್ಪಂದನೆ ದೊರೆತಿಲ್ಲ. ಖಾಸಗಿ ಸಂಸ್ಥೆಗಳು ಮತ್ತು ಆರೋಗ್ಯ ಇಲಾಖೆ ಸಹಕಾರ ನೀಡಿದೆ. ಜೊತೆಗೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಸಹ ಅನುದಾನ ನೀಡಲಾಗಿದೆ.

ಮಾಹಿತಿ ಕೊರತೆಯಿಂದ ಅಥವಾ ರಾಜಕೀಯ ಲಾಭದ ಆಸೆಯಿಂದ ಕಾಂಗ್ರೆಸ್ ನಾಯಕರು ನೀಡುತ್ತಿರುವ ಆರೋಪಗಳು ತಿರುಚಲ್ಪಟ್ಟಿವೆ. ಅಭಿವೃದ್ಧಿಯ ವಿಷಯದಲ್ಲಿ ರಾಜಕೀಯ ಭೇದವಿರಬಾರದು. ಕಾರ್ಕಳದ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳ ಹಿತಕ್ಕಾಗಿ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು ಅಭಿವೃದ್ಧಿಗೆ ಸಹಕಾರ ನೀಡಬೇಕು. ಬಾಯಿಚಪಲಕ್ಕಾಗಿ ಪತ್ರಿಕಾ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದಿದ್ದಾರೆ.