ಸಾರಾಂಶ
ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರ ನುಡಿದಂತೆ ಜನತೆಗೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆಗೊಳಿಸಿ ಜನರ ಮನ್ನಣೆಗೆ ಪಾತ್ರವಾಗುತ್ತಿದ್ದು, ಇದನ್ನು ಸಹಿಸಲು ಸಾಧ್ಯವಾಗದ ಸಚಿವೆ ಇಲ್ಲಸಲ್ಲದ ಹೇಳಿಕೆಗಳ ಮೂಲಕ ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಆರೋಪಿಸಿದರು.
ಕನ್ನಡಪ್ರಭ ವಾರ್ತೆ ಉಡುಪಿಲೋಕಸಭಾ ಚುನಾವಣೆಯ ಬಳಿಕ ಕರ್ನಾಟಕ ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರ ಪತನವಾಗಲಿದೆ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೇಳಿಕೆ ಹತಾಶೆಯ ಪರಮಾವಧಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದ್ದಾರೆ.ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರ ನುಡಿದಂತೆ ಜನತೆಗೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆಗೊಳಿಸಿ ಜನರ ಮನ್ನಣೆಗೆ ಪಾತ್ರವಾಗುತ್ತಿದ್ದು, ಇದನ್ನು ಸಹಿಸಲು ಸಾಧ್ಯವಾಗದ ಸಚಿವೆ ಇಲ್ಲಸಲ್ಲದ ಹೇಳಿಕೆಗಳ ಮೂಲಕ ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅಗತ್ಯ ಸಂಖ್ಯಾ ಬಲದೊಂದಿಗೆ ರಾಜ್ಯ ಸರ್ಕಾರ ಅಧಿಕಾರ ನಡೆಸುತ್ತಿದ್ದು, ಈ ಬಾರಿ ಆಪರೇಶನ್ ಕಮಲ ನಡೆಸಲು ಹೊರಟರೆ ಇದಕ್ಕೆ ಬಗ್ಗುವ ನಾಯಕರು ಕಾಂಗ್ರೆಸ್ನಲ್ಲಿ ಯಾರೂ ಇಲ್ಲ ಎಂದವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಪತನದ ಚಿಂತೆ ಮಾಡುತ್ತಿರುವ ಸಂಸದೆ ಶೋಭಾ ಕರಂದ್ಲಾಜೆಯವರು ಮೊದಲು ತಮ್ಮ ಸ್ಥಾನವನ್ನು ಭದ್ರಪಡಿಸುವ ಪರಿಸ್ಥಿತಿ ಎದುರಾಗಿದೆ ಎನ್ನುವುದನ್ನು ಮರೆಯದಿರಲಿ. ಅವರ ಪಕ್ಷದ ಕಾರ್ಯಕರ್ತರು ಈಗಾಗಲೇ ಗೋ ಬ್ಯಾಕ್ ಶೋಭಾ ಅಭಿಯಾನ ನಡೆಯುತ್ತಿದ್ದಾರೆ. ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಮುಕ್ತಿ ನೀಡಲು ವಿಫಲರಾಗಿರುವ ಶೋಭಾ ಕರಂದ್ಲಾಜೆ ಅವರ ವಿರುದ್ಧ ಇಂತಹ ಅಭಿಯಾನ ನಡೆಯುತ್ತಿರುವುದು ಸರಿಯಾಗಿ ಇದೆ. ಮಲ್ಪೆ ರಾಷ್ಟ್ರೀಯ ಹೆದ್ದಾರಿ, ಸಂತೆಕಟ್ಟೆ ಅಂಡರ್ ಪಾಸ್, ಇಂದ್ರಾಳಿ ಸೇತುವೆ ಇಂತಹ ಹತ್ತು ಹಲವು ಸಮಸ್ಯೆಗಳಿಂದ ಜನರನ್ನು ಎದುರಿಸಲು ಸಾಧ್ಯವಾಗದ ಅವರ ಕಾರ್ಯಕರ್ತರು ಗೋ ಬ್ಯಾಕ್ ಚಳುವಳಿ ನಡೆಸುತ್ತಿದ್ದಾರೆ ಎಂದು ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಹೇಳಿದ್ದಾರೆ.