ತೇರು ಬೀದಿಯಲ್ಲಿ ಅಂಗಡಿಗಳ ಹಾಕಲು ಅವಕಾಶ ಕೊಡಬೇಡಿ

| Published : Mar 19 2024, 12:57 AM IST

ಸಾರಾಂಶ

ನಾಯಕನಹಟ್ಟಿ ಗುರುತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ ಮಾ.26ರಂದು ನಡೆಯಲಿದ್ದು, ತೇರು ಬೀದಿಗಳಲ್ಲಿ ರಥೋತ್ಸವ ಜರುಗುವವರೆಗೆ ಯಾವುದೇ ಅಂಗಡಿಗಳನ್ನು ಹಾಕಿಕೊಳ್ಳಲು ಅವಕಾಶ ನೀಡಬಾರದು.

ಚಿತ್ರದುರ್ಗ: ನಾಯಕನಹಟ್ಟಿ ಗುರುತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ ಮಾ.26ರಂದು ನಡೆಯಲಿದ್ದು, ರಥ ಸಾಗಲು ಯಾವುದೇ ಅಡಚಣೆಯಾಗದಂತೆ ಕ್ರಮವಹಿಸಬೇಕು. ಈ ಹಿನ್ನಲೆಯಲ್ಲಿ ತೇರು ಬೀದಿಗಳಲ್ಲಿ ರಥೋತ್ಸವ ಜರುಗುವವರೆಗೆ ಯಾವುದೇ ಅಂಗಡಿಗಳನ್ನು ಹಾಕಿಕೊಳ್ಳಲು ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಾಯಕನಹಟ್ಟಿ ಗುರುತಿಪ್ಪೇರುದ್ರ ಸ್ವಾಮಿ ದೇವಸ್ಥಾನದ 2024ನೇ ಸಾಲಿನ ಜಾತ್ರೆಯ ಕೆಲಸ ಕಾರ್ಯಗಳನ್ನು ಪರಿಶೀಲಿಸಲು ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಾತ್ರೆಗೆ ಲಕ್ಷಾಂತರ ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇದ್ದು, ಬರ ಹಾಗೂ ಬಿಸಿಲು ಹೆಚ್ಚಿರುವ ಕಾರಣ ಭಕ್ತಾಧಿಕಾಗಳಿಗೆ ಸಮರ್ಪಕವಾಗಿ ಶುದ್ಧ ಕುಡಿಯುವ ನೀರು ಪೂರೈಕೆ ಹಾಗೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್ ಮಾತನಾಡಿ, ನಾಯಕನಹಟ್ಟಿ ಜಾತ್ರೆಗೆ ಆಗಮಿಸವ ಭಕ್ತಾದಿಗಳಿಗೆ ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸ್ವಚ್ಛತೆಗೆ ಅಗತ್ಯಕ್ರಮವಹಿಸಲಾಗಿದೆ. ಜಾತ್ರೆ ಅಂಗವಾಗಿ ಪೌರಕಾರ್ಮಿಕರನ್ನು ಹಾಗೂ ಮೇಲ್ವಿಚಾರಕರನ್ನೂ ನಿಯೋಜನೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಚಳ್ಳಕೆರೆ ತಾಲೂಕು ಆರೋಗ್ಯಾಧಿಕಾರಿ ಡಾ.ಕಾಶಿ ಮಾತನಾಡಿ, ಜಾತ್ರೆಯಲ್ಲಿ ತಾತ್ಕಾಲಿಕವಾಗಿ ನಾಲ್ಕು ಕಡೆ ಪ್ರಥಮ ಚಿಕಿತ್ಸೆ ಕೇಂದ್ರಗಳನ್ನು ತೆರೆಯಲಾಗುವುದು. ತುರ್ತು ಚಿಕಿತ್ಸೆಗಾಗಿ ನಾಲ್ಕು ಅಂಬುಲೆನ್ಸ್ ನಿಯೋಜನೆ ಮಾಡಿಕೊಳ್ಳಲಾಗುವುದು. 20 ಮಂದಿ ವೈದ್ಯಾಧಿಕಾರಿಗಳು ಸೇರಿದಂತೆ 160 ಮಂದಿ ಆರೋಗ್ಯ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಅಗತ್ಯ ಔಷಧೋಪಚಾರಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ಕುಡಿಯುವ ನೀರಿನ ಪರೀಕ್ಷೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದರು.

ಲೋಕಸಭಾ ಚುನಾವಣೆ ಪ್ರಯುಕ್ತ ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಾತ್ರೆ ಸಿದ್ಧತೆಯನ್ನು ಬಹಳ ಎಚ್ಚರಿಕೆಯಿಂದ ನಿರ್ವಹಿಸಬೇಕು. ಚುನಾವಣಾ ಪ್ರಚಾರದ ಯಾವುದೇ ರೀತಿಯ ಕಾರ್ಯಚಟುವಟಿಕೆಗಳು ನಡೆಸಬಾರದು. ಈ ಕುರಿತು ಹೆಚ್ಚಿನ ಗಮನಹರಿಸಬೇಕು. ನೀತಿ ಸಂಹಿತೆ ಉಲ್ಲಂಘನೆಯಾದರೆ ತಕ್ಷಣವೇ ಪ್ರಕರಣ ದಾಖಲು ಮಾಡಬೇಕು ಎಂದು ತಾಕೀತು ಮಾಡಿದರು.

ರಕ್ಷಣೆ ಹಾಗೂ ಬಂದೋಬಸ್ತ್‌ಗೆ ಸಂಬಂಧಪಟ್ಟಂತೆ ಪೊಲೀಸ್ ಇಲಾಖೆ ಅಗತ್ಯಕ್ರಮವಹಿಸಬೇಕು. ಜಾತ್ರೆ ಸಂದರ್ಭದಲ್ಲಿ ಬ್ಯಾರಿಕೇಡ್ ಮತ್ತು ಸಲಹಾ ಕೌಂಟರ್‌ಗಳನ್ನು ಅಗತ್ಯ ಇರುವ ಕಡೆ ವಾಚ್‌ಟವರ್‌ಗಳ ವ್ಯವಸ್ಥೆ ಕಲ್ಪಿಸಿಕೊಳ್ಳಬೇಕು. ಮತ್ತು ತಾತ್ಕಾಲಿಕವಾಗಿ ಸಿಸಿ ಕ್ಯಾಮೆರಾಗಳನ್ನು ಅಗತ್ಯ ಇರುವ ಕಡೆ ಅಳವಡಿಸಿಕೊಳ್ಳಲು ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.

ಜಾತ್ರೆಗೆ ವಿವಿಧ ಮಾರ್ಗಗಳಿಂದ ಬರುವ ಮಾರ್ಗಗಳಲ್ಲಿ 7 ಕಡೆ ಚೆಕ್‍ಪೋಸ್ಟ್ ನಿರ್ಮಿಸಿ ಪ್ರಾಣಿಬಲಿ ನಿಷೇಧ ಕಡ್ಡಾಯವಾಗಿ ಜಾರಿಗೊಳಿಸಲು ಜಿಲ್ಲಾಧಿಕಾರಿ ವೆಂಕಟೇಶ್ ನಿರ್ದೇಶನ ನೀಡಿದರು. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಜಾತ್ರೆ ಅಂಗವಾಗಿ ಹಾಗೂ ಬೇಸಿಗೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಗತ್ಯ ಇರುವ ಅಗ್ನಿಶಾಮಕ ವಾಹನಗಳ ಸೌಲಭ್ಯ ಹಾಗೂ ಅಗ್ನಿ ಅವಘಡಗಳನ್ನು ತಡೆಯಲು ನುರಿತ ಸಿಬ್ಬಂದಿ ನಿಯೋಜಿಸಿಕೊಳ್ಳುವಂತೆ ಅಗ್ನಿಶಾಮಕ ಠಾಣಾಧಿಕಾರಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ ಸೋಮಶೇಖರ್, ಉಪವಿಭಾಗಾಧಿಕಾರಿ ಎಂ.ಕಾರ್ತೀಕ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀನಾರಾಯಣ, ಕೆಎಸ್‍ಆರ್‌ಟಿಸಿ ವಿಭಾಗೀಯ ಅಧಿಕಾರಿ ಸಿದ್ದೇಶ್ವರ್ ಹೆಬ್ಬಾಳ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ.ಕಾಳೇಸಿಂಘೆ, ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಗಂಗಾಧರಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.