ಸಾರಾಂಶ
ಭದ್ರಾವತಿ: ಭದ್ರಾ ಅಚ್ಚುಕಟ್ಟು ರೈತರ ಬದುಕಿಗೆ ಮಾರಕವಾಗುವಂತೆ ಭದ್ರಾ ಜಲಾಶಯದ ಬಲದಂಡೆ ನಾಲೆ ಸೀಳಿ ನೀರು ಪೂರೈಸುವ ಕಾಮಗಾರಿ ತಕ್ಷಣ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ದಾವಣಗೆರೆ ಜಿಲ್ಲಾ ರೈತ ಒಕ್ಕೂಟ ಹಾಗೂ ಬಿಜೆಪಿ ಜಿಲ್ಲಾ ರೈತ ಮೋರ್ಚಾ ವತಿಯಿಂದ ಸೋಮವಾರ ಇಲ್ಲಿನ ಭದ್ರಾ ಜಲಾಶಯದ ಬಳಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಯುವ ಮುಖಂಡರಾದ ಮಾಡಾಳ್ ಮಲ್ಲಿಕಾರ್ಜುನ್, ಮಂಗೋಟೆ ರುದ್ರೇಶ್ ಸೇರಿದಂತೆ ಪ್ರಮುಖರು ಮಾತನಾಡಿ, ಜಲಾಶಯದ ನಿರ್ಬಂಧಿತ ಪ್ರದೇಶದಲ್ಲಿ ಯಾವುದೇ ಕಾಮಗಾರಿಗಳನ್ನು ಕೈಗೊಳ್ಳಬಾರದು ಎಂಬ ನಿಯಮವಿದ್ದರೂ ಬಲದಂಡೆ ನಾಲೆ ಸೀಳಿ ನೆರೆ ಜಿಲ್ಲೆಗಳಾದ ಚಿತ್ರದುರ್ಗ ಜಿಲ್ಲೆ, ಹೊಸದುರ್ಗ ತಾಲೂಕಿನ 346 ಗ್ರಾಮಗಳು, ಚಿಕ್ಕಮಗಳೂರು ಜಿಲ್ಲೆ ತರೀಕೆರೆ, ಕಡೂರು ತಾಲೂಕುಗಳ 172 ಗ್ರಾಮಗಳಿಗೆ ನೀರು ಪೂರೈಸುವ ಕಾಮಗಾರಿ ನಡೆಸುತ್ತಿರುವುದು ಸರಿಯಲ್ಲ. ಮಧ್ಯ ಕರ್ನಾಟಕದ ಜೀವನದಿ ಭದ್ರಾ ಬೃಹತ್ ಜಲಾಶಯದ ಸುರಕ್ಷತೆ ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದರು.ರಾಜ್ಯ ಸರ್ಕಾರ 1660 ಹಳ್ಳಿಗಳಿಗೆ ಕುಡಿಯುವ ನೀರನ್ನು ಒದಗಿರುವ ಬೃಹತ್ ಕಾಮಗಾರಿ ಭದ್ರಾ ಜಲಾಶಯದ ನಿರ್ಬಂಧಿತ ಪ್ರದೇಶದಲ್ಲಿ (ಬಫರ್ಜೋನ್) ಕೈಗೊಂಡಿದೆ. ಸರ್ಕಾರ ಸೌಜನ್ಯಕ್ಕಾದರೂ ಭದ್ರಾ ಅಚ್ಚುಕಟ್ಟಿನ ಪ್ರದೇಶದ ಜನಪ್ರತಿನಿಧಿಗಳು, ರೈತರ ಸಭೆಯನ್ನು ನಡೆಸದೆ ಕಾಮಗಾರಿ ಕೈಗೊಂಡಿರುವುದು ಅಕ್ಷಮ್ಯ ಅಪರಾಧವಾಗಿದೆ. ಇದು ಅಚ್ಚುಕಟ್ಟು ರೈತರ ಕತ್ತು ಹಿಸುಕುವ ಅಮಾನವೀಯ ಕೃತ್ಯವಾಗಿದೆ ಎಂದು ದೂರಿದರು.
ಕುಡಿಯುವ ನೀರಿನ ಪೂರೈಕೆಗೆ ಯಾವುದೇ ವಿರೋಧ ಇಲ್ಲ. ಸರ್ಕಾರ ಪರ್ಯಾಯ ವ್ಯವಸ್ಥೆ ಕೈಗೊಂಡು ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.ಮಾಜಿ ಶಾಸಕ ಬಸವರಾಜನಾಯ್ಕ, ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ್, ಮಾಜಿ ಮೇಯರ್ ಅಜಯ್ಕುಮಾರ್, ಬಿ.ಎಂ.ಸತೀಶ ಕೊಳೇನಹಳ್ಳಿ, ಲೋಕಿಕೆರೆ ನಾಗರಾಜ, ಸ್ಥಳೀಯ ರೈತ ಮುಖಂಡ ಆನಂದಕುಮಾರ್, ಮಾಳೇನಹಳ್ಳಿ ವಿಶ್ವನಾಥ್ ಸೇರಿದಂತೆ ದಾವಣಗೆರೆ ಜಿಲ್ಲಾ ರೈತ ಒಕ್ಕೂಟ ಹಾಗೂ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರಮುಖರು, ರೈತರು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಜೂ.28 ರಂದು ದಾವಣಗೆರೆ ಬಂದ್:ಈ ವಿಚಾರಕ್ಕೆ ಸಂಬಂಧಿಸಿದಂತೆ ಜೂ.೨೫ರ ಬುಧವಾರ ಬೆಳಿಗ್ಗೆ ದಾವಣಗೆರೆ ಬಾಡಾ ಕ್ರಾಸ್ನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುವುದು. ಜೂ.೨೮ರ ಶನಿವಾರ ದಾವಣಗೆರೆ ನಗರ ಬಂದ್ಗೆ ಕರೆ ನೀಡಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಮುಖಂಡರು ಮನವಿ ಮಾಡಿದ್ದಾರೆ.
ಭದ್ರಾ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಭದ್ರಾವತಿ: ಭದ್ರಾ ಅಚ್ಚುಕಟ್ಟು ರೈತರ ಬದುಕಿಗೆ ಮಾರಕವಾಗುವಂತೆ ಭದ್ರಾ ಜಲಾಶಯದ ಬಲದಂಡೆ ನಾಲೆ ಸೀಳಿ ನೀರು ಪೂರೈಸುವ ಕಾಮಗಾರಿ ತಕ್ಷಣ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದವರನ್ನು ತಡೆದು ಪೊಲೀಸರು ವಶಕ್ಕೆ ಪಡೆದರು. ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಮಾಜಿ ಶಾಸಕ ಮಾಯಕೊಂಡ ಬಸವರಾಜನಾಯ್ಕ ಸೇರಿದಂತೆ ದಾವಣಗೆರೆ ಜಿಲ್ಲಾ ರೈತ ಒಕ್ಕೂಟ ಹಾಗೂ ಬಿಜೆಪಿ ಜಿಲ್ಲಾ ರೈತ ಮೋರ್ಚಾದ ಪ್ರಮುಖರು, ರೈತರು ಸೇರಿದಂತೆ ಪ್ರತಿಭಟನಾನಿರತನ್ನು ಪೊಲೀಸರು ತಡೆದು ವಶಕ್ಕೆ ಪಡೆದರು.