ಸಾರಾಂಶ
ಧಾರವಾಡ:
ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಗೆ ತೊಂದರೆಯಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಬೆಳಗಾವಿ ಕಂದಾಯ ವಿಭಾಗದ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಹೇಳಿದರು.ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನೆಯಲ್ಲಿ ಮಾತನಾಡಿದ ಅವರು, ಹಳ್ಳಿ ಭಾಗಗಳಿಗೆ ಸರಿಯಾಗಿ ಬಸ್ ಸಂಚಾರದ ವ್ಯವಸ್ಥೆ ಮಾಡಿ, ಯಾವುದೇ ಸಮಸ್ಯೆಯಾಗದಂತೆ ಗಮನಹರಿಸಿ. ಅವಳಿ ನಗರಕ್ಕೆ ಹಳ್ಳಿಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಕಾರ್ಮಿಕರು ಮತ್ತು ಸಾರ್ವಜನಿಕರು ಓಡಾಡುವುದರಿಂದ ಬೆಳಗ್ಗೆ ಹಾಗೂ ಸಂಜೆ ಸಮಯದಲ್ಲಿ ಸರಿಯಾಗಿ ಬಸ್ಗಳ ಕಾರ್ಯಾಚರಣೆ ಆಗಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಬಸ್ ವ್ಯವಸ್ಥೆಯಾಗಬೇಕು ಎಂದರು.
ಹೆಚ್ಚು ಮಳೆಯಾಗಿದ್ದರಿಂದ ಗ್ರಾಮೀಣ ಭಾಗದಲ್ಲಿರುವ ವಿದ್ಯುತ್ ಕಂಬಗಳು ಬಾಗಿವೆ. ಇದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಎಂಬ ಸಾರ್ವಜನಿಕ ದೂರಗಳಿದ್ದು, ಹೆಸ್ಕಾಂ ಅಧಿಕಾರಿಗಳು ಈ ಕುರಿತು ಗಮನಹರಿಸಿ, ಪರಿಹರಿಸಬೇಕು. ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿದಾರರಿಗೆ ನಿಯಮಾನುಸಾರ ಪಡಿತರ ವಿತರಣೆ ಮಾಡಲಾಗುತ್ತಿದೆ. ನೇರ ನಗದು ವರ್ಗಾವಣೆ ಮೂಲಕ ಹಣ ಸಂದಾಯ ಮಾಡಲಾಗುತ್ತಿದೆ ಎಂದು ತಿಳಿಸಿದರು.ಗೃಹಲಕ್ಷ್ಮಿ ಯೋಜನೆಯನ್ನು ಬಳಸಿಕೊಂಡು ಹೈನುಗಾರಿಕೆ, ಕೋಳಿ ಸಾಕಾಣಿಕೆ, ಸ್ವಯಂ ಉದ್ಯೋಗ ಮತ್ತು ಉದ್ಯೋಗ ಸೃಷ್ಟಿಯಂತಹ ಕಾರ್ಯಗಳನ್ನು ಮಾಡುತ್ತಿರುವ ಫಲಾನುಭವಿಗಳನ್ನು ಗುರುತಿಸಿ ದಾಖಲಿಸುವಂತೆ ಅವರು ಹೇಳಿದರು.ಗೃಹಲಕ್ಷ್ಮಿ ಯೋಜನೆಯಡಿ 4.04 ಲಕ್ಷ ಅರ್ಹ ಫಲಾನುಭವಿಗಳಿದ್ದು, 3,82,189 ಫಲಾನುಭವಿಗಳಿಗೆ ನೋಂದಣಿಯಾಗಿದ್ದಾರೆ. ಇವರಿಗೆ ಡಿಬಿಟಿ ಮೂಲಕ ಹಣ ಜಮಾ ಮಾಡಲಾಗುತ್ತಿದೆ. 22 ಸಾವಿರ ಫಲಾನುಭವಿಗಳ ಅರ್ಜಿ ಪರಿಶೀಲನೆ ಬಾಕಿ ಇದ್ದು, ಶೇ. 94ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದ ಅವರು, ಯುವನಿಧಿ ಯೋಜನೆಯ ಬಗ್ಗೆ ಹೆಚ್ಚಿನ ಪ್ರಚಾರ ಮಾಡಿ, ಯುವ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರು.
ಜಿಪಂ ಸಿಇಒ ಸ್ವರೂಪ ಟಿ.ಕೆ. ಮಾತನಾಡಿದರು. ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು ಭಾಗವಹಿಸಿದ್ದರು.