ಕುಟುಂಬದ ವಿರುದ್ಧದ ಅಪಪ್ರಚಾರಕ್ಕೆ ತಲೆ ಕೆಡಿಸಿಕೊಳ್ಳಲ್ಲ: ಎಚ್‌.ಡಿ.ರೇವಣ್ಣ

| Published : Apr 25 2024, 01:00 AM IST

ಕುಟುಂಬದ ವಿರುದ್ಧದ ಅಪಪ್ರಚಾರಕ್ಕೆ ತಲೆ ಕೆಡಿಸಿಕೊಳ್ಳಲ್ಲ: ಎಚ್‌.ಡಿ.ರೇವಣ್ಣ
Share this Article
  • FB
  • TW
  • Linkdin
  • Email

ಸಾರಾಂಶ

ನಮ್ಮ ಕುಟುಂಬದ ಬಗ್ಗೆ ಅಪಪ್ರಚಾರ ಮಾಡುವುದು ಮಾಮೂಲಿ. ಇದನ್ನೆಲ್ಲ ಜಿಲ್ಲೆಯ ಜನರು ಗಮನಿಸುತ್ತಿದ್ದಾರೆ. ಈ ಚುನಾವಣೆಯಲ್ಲಿ ಹಾಸನ, ಮಂಡ್ಯ, ಕೋಲಾರ ಸೇರಿದಂತೆ ಎಲ್ಲಾ ೨೮ಕ್ಕೆ ೨೮ ಸ್ಥಾನವನ್ನೂ ನಾವು ಗೆಲ್ಲುತ್ತೇವೆ’ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಪ್ರಜ್ವಲ್‌ದ್ದು ಎನ್ನಲಾದ ಅಶ್ಲೀಲ ವಿಡಿಯೋ ಬಗ್ಗೆ ಪ್ರತಿಕ್ರಿಯೆ । ದೇವೇಗೌಡರ ಕಾಲದಿಂದಲೂ ಅವಹೇಳನ

ಕನ್ನಡಪ್ರಭ ವಾರ್ತೆ ಹಾಸನ

‘ಹಿಂದಿನಿಂದಲೂ ನಮ್ಮ ಕುಟುಂಬದ ಬಗ್ಗೆ ಅನೇಕರು ಒಂದಲ್ಲ ಒಂದು ರೀತಿಯ ಅಪಪ್ರಚಾರ ಮಾಡುತ್ತಿದ್ದಾರೆ. ದೇವೇಗೌಡರ ಕಾಲದಿಂದಲೂ ಇದು ನಡೆಯುತ್ತಿದೆ. ಇದಕ್ಕೆಲ್ಲಾ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಮ್ಮ ಕುಟುಂಬದ ಬಗ್ಗೆ ಅಪಪ್ರಚಾರ ಮಾಡುವುದು ಮಾಮೂಲಿ. ಇದನ್ನೆಲ್ಲ ಜಿಲ್ಲೆಯ ಜನರು ಗಮನಿಸುತ್ತಿದ್ದಾರೆ. ಈ ಚುನಾವಣೆಯಲ್ಲಿ ಹಾಸನ, ಮಂಡ್ಯ, ಕೋಲಾರ ಸೇರಿದಂತೆ ಎಲ್ಲಾ ೨೮ಕ್ಕೆ ೨೮ ಸ್ಥಾನವನ್ನೂ ನಾವು ಗೆಲ್ಲುತ್ತೇವೆ’ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಬುಧವಾರ ತಮ್ಮ ಆಪ್ತರ ನಿವಾಸದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಕರ್ನಾಟಕ ರಾಜ್ಯ ಲೂಟಿಕೋರರ ಕೈಯಲ್ಲಿ ಸಿಲುಕಿಕೊಂಡಿದೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಖಜಾನೆ ಖಾಲಿ ಮಾಡಿ ಜನರಿಗೆ ಭಿಕ್ಷೆ ಹಾಕುತ್ತಿದೆ. ಮುಂದಿನ ದಿನಗಳಲ್ಲಿ ಜನರ ಕೈಗೆ ಚೊಂಬು ಹಾಗೂ ಜಾಗಟೆ ಕೊಡುವುದು ಗ್ಯಾರಂಟಿ ಎಂದು ಲೇವಡಿ ಮಾಡಿದರು.

ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ಅವಧಿಯಲ್ಲಿ ಹಾಸನ ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರರ ಬದಲಾವಣೆ ಆಗಿದೆ. ಶಾಲಾ ಕಾಲೇಜು ಕಟ್ಟಡಗಳು, ಗುಣಮಟ್ಟದ ಶಿಕ್ಷಣದ ಮೂಲಕ ಹಾಸನ ಜಿಲ್ಲೆ ಎಸ್‌ಎಸ್‌ಎಲ್‌ಸಿಯಲ್ಲಿ ಕೂಡ ಪ್ರಥಮ ಸ್ಥಾನ ಪಡೆಯುವ ಮೂಲಕ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಆದರೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಾಸನ ಜಿಲ್ಲೆಗೆ ಕೊಡುಗೆ ಶೂನ್ಯ. ನಂಬಿದವರಿಗೆ ಟೋಪಿ ಹಾಕಿ ನಿಷ್ಕಲ್ಮಶ ರಾಜಕಾರಣಿ ದೇವೇಗೌಡರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ್ದಾರೆ ಎಂದು ಕಿಡಿಕಾರಿದರು.

‘ರಾಜ್ಯದಲ್ಲಿ ಗ್ಯಾರಂಟಿ ಆಯ್ತು ಈಗ ಪೊಳ್ಳು ಗ್ಯಾರಂಟಿ ಶುರುವಾಗಿದೆ. ಬಾಂಡ್ ಪೇಪರ್‌ನಲ್ಲಿ ಸಿಎಂ ಹಾಗೂ ಡಿಸಿಎಂ ಒಂದು ಲಕ್ಷ ರು. ಕೊಡುವುದಾಗಿ ಕರಪತ್ರ ಹಂಚುತ್ತಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ ಗಮನಿಸಬೇಕು. ಒಂದು ಕಡೆ ಪ್ರಜ್ವಲ್, ದೇವೇಗೌಡರು ಏನು ಮಾಡಿದ್ದಾರೆ ಅಂತಾರೆ. ಆದರೆ ಅವರು ಈ ಜಿಲ್ಲೆಗೆ ಏನು ಕೊಡುಗೆ ಕೊಟ್ಟಿದ್ದಾರೆ ಎಂಬುದು ಜನರಿಗೆ ಗೊತ್ತು. ೧೧ ತಿಂಗಳಲ್ಲಿ ರಾಜ್ಯದ ಖಜಾನೆ ಖಾಲಿ ಮಾಡಿ ಖಾಲಿ ಚೊಂಬು ಕೊಟ್ಟಿದ್ದಾರೆ. ಒಂದೇ ಒಂದು ಅಭಿವೃದ್ಧಿ ಕೆಲಸ ಆಗಿಲ್ಲ’ ಎಂದು ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಎಚ್‌.ಡಿ.ರೇವಣ್ಣ.