ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ವಿಶ್ವನಾಥಪುರ ಗ್ರಾಪಂ ಸಂಯುಕ್ತ ಆಶ್ರಯದಲ್ಲಿ ವರದಕ್ಷಿಣೆ ಒಂದು ಸಾಮಾಜಿಕ ಪಿಡುಗು ಎಂಬ ವಿಷಯ ಕುರಿತು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ವಿಶ್ವನಾಥಪುರ ಗ್ರಾಪಂ ಸಂಯುಕ್ತ ಆಶ್ರಯದಲ್ಲಿ ವರದಕ್ಷಿಣೆ ಒಂದು ಸಾಮಾಜಿಕ ಪಿಡುಗು ಎಂಬ ವಿಷಯ ಕುರಿತು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಎನ್.ಎಂ.ಜಗದೀಶ್ ಮಾತನಾಡಿ, ವರದಕ್ಷಿಣೆ ಸಮಾಜಕ್ಕೆ ಪಿಡುಗಾಗಿದ್ದು, ಇದರ ಪರಿಣಾಮ ಅನೇಕ ಮಹಿಳೆಯರ ಜೀವನ ಸಂಕಷ್ಟಕ್ಕೆ ಸಿಲುಕುತ್ತಿದೆ. ಮದುವೆ ಸಂದರ್ಭದಲ್ಲಿ ವಧುವಿನ ಕುಟುಂಬ ವರ ಅಥವಾ ಅವರ ಕುಟುಂಬಕ್ಕೆ ಹಣ, ಆಸ್ತಿ, ಒಡವೆ ಅಥವಾ ಅಮೂಲ್ಯ ವಸ್ತುಗಳನ್ನು ನೀಡುವುದನ್ನೇ ವರದಕ್ಷಿಣೆ ಎನ್ನುತ್ತೇವೆ ಎಂದು ವಿವರಿಸಿದರು.

ಭಾರತ ಸರ್ಕಾರ ವರದಕ್ಷಿಣೆ ತಡೆಯುವ ಉದ್ದೇಶದಿಂದ 1961ರಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದ್ದು, ವರದಕ್ಷಿಣೆ ಕೇಳುವುದು, ನೀಡುವುದು ಅಥವಾ ಸ್ವೀಕರಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಇಂತಹ ಕಿರುಕುಳಗಳಿಗೆ ಐದು ವರ್ಷಗಳವರೆಗೆ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸುವ ಅವಕಾಶವಿದೆ ಇಂತಹ ಪ್ರಕರಣವಿದ್ದರೆ ತಕ್ಷಣ 181 ಮಹಿಳಾ ಸಹಾಯವಾಣಿ ಕರೆ ಮಾಡಿ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮುದ್ದಣ್ಣ ಮಾತನಾಡಿ, ವರದಕ್ಷಿಣೆ ನಿಷೇಧ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಮತ್ತು ಬಾಲ್ಯ ವಿವಾಹದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಭಿಕರಿಗೆ ಮಾಹಿತಿ ನೀಡಿದರು.

ಜಿಲ್ಲಾ ನಿರೂಪಣಾಧಿಕಾರಿ ರಮೇಶ್ ಮಾತನಾಡಿ, 1961ರಲ್ಲಿ ಜಾರಿಗೆ ಬಂದ ವರದಕ್ಷಿಣೆ ನಿಷೇಧ ಕಾಯ್ದೆಯ ಬಗ್ಗೆ ಇಂದಿಗೂ ಅರಿವು ಮೂಡಿಸುವ ಅಗತ್ಯ ಇರುವುದೇ ವಿಷಾದನೀಯ ಸಂಗತಿ ಎಂದು ಅಭಿಪ್ರಾಯಪಟ್ಟರು.

ವರದಕ್ಷಿಣೆ, ಬಾಲ್ಯ ವಿವಾಹ, ಮರ್ಯಾದ ಹತ್ಯೆ, ಲಿಂಗಾನುಪಾತ ಮತ್ತು ಹೆಣ್ಣು ಮಕ್ಕಳ ಶಿಕ್ಷಣದ ಮಹತ್ವದ ಕುರಿತು ಜಾಗೃತಿಯ ಭಾಗವಾಗಿ ಮಾನವ ಸರಪಳಿ ನಿರ್ಮಿಸಿ ಅರಿವು ಮೂಡಿಸಲಾಯಿತು.

ಗ್ರಾಪಂ ಕಾರ್ಯದರ್ಶಿ ಲಕ್ಷ್ಮಿದೇವಮ್ಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧೀಕ್ಷಕ ವಿನೋದ್ ರಾಜ್, ಹಿರಿಯ ಮೇಲ್ವಿಚಾರಕರಾದ ದೊಡ್ಡಬಳ್ಳಾಪುರದ ಹೇಮಾವತಿ ಬಾಯಿ, ನೆಲಮಂಗಲದ ಮುನಿಲಕ್ಷ್ಮಮ್ಮ ಮತ್ತಿತರರು ಉಪಸ್ಥಿತರಿದ್ದರು.

ಕೋಟ್................

ವರದಕ್ಷಿಣೆ ವಿರುದ್ಧ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅದರ ಅಂಗವಾಗಿ ಮಾನವ ಸರಪಳಿ ನಿರ್ಮಿಸಿ ಜಾಗೃತಿ ಘೋಷಣೆ ಗಳನ್ನು ಕೂಗಲಾಯಿತು ಮುಂದಿನ ದಿನಗಳಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮ ಆಯೋಜನೆ ಮಾಡುವ ಯೋಜನೆ ರೂಪಿಸಲಾಗಿದೆ.

-ಎನ್.ಎಂ.ಜಗದೀಶ್‌, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ

ಫೋಟೋ-

9ಕೆಡಿಬಿಪಿ5- ಬೆಂ.ಗ್ರಾ ಜಿಲ್ಲಾಡಳಿತದ ನೇತೃತ್ವದಲ್ಲಿ ವರದಕ್ಷಿಣೆ ಸೇರಿದಂತೆ ವಿವಿಧ ಸಾಮಾಜಿಕ ಸಮಸ್ಯೆಗಳ ಜಾಗೃತಿಗಾಗಿ ಮಾನವ ಸರಪಳಿ ನಿರ್ಮಿಸಿ ಅರಿವು ಮೂಡಿಸಲಾಯಿತು.