ಸಾರಾಂಶ
ಒರಿಸ್ಸಾದ ಪುರಿ ಕ್ಷೇತ್ರದಲ್ಲಿ ಭಾರತ ಸರ್ಕಾರದ ಅಧೀನದಲ್ಲಿರುವ ನದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಹಾಗೂ ಲೋಕಭಾಷಾ ಪ್ರಚಾರ ಸಮಿತಿ ಆಶ್ರಯದಲ್ಲಿ ನಡೆದ ಮೂರು ದಿನಗಳ ಅಂತಾರಾಷ್ಟ್ರೀಯ ಸಂಸ್ಕೃತ ಸಮ್ಮೇಳನದಲ್ಲಿ ಪ್ರಾಚೀನ ಗ್ರಂಥಗಳ ಸಂರಕ್ಷಣೆ ಮತ್ತು ಸಂಶೋಧನಾ ಕಾರ್ಯದ ಹಿನ್ನೆಲೆಯಲ್ಲಿ ಉಡುಪಿಯ ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನದ ನಿರ್ದೇಶಕ ಡಾ.ಬಿ. ಗೋಪಾಲಾಚಾರ್ಯ ಅವರನ್ನು ಪ್ರಾಚ್ಯವಿದ್ಯಾವಿಶಾರದ ಎಂಬ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಒರಿಸ್ಸಾದ ಪುರಿ ಕ್ಷೇತ್ರದಲ್ಲಿ ಭಾರತ ಸರ್ಕಾರದ ಅಧೀನದಲ್ಲಿರುವ ನದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಹಾಗೂ ಲೋಕಭಾಷಾ ಪ್ರಚಾರ ಸಮಿತಿ ಆಶ್ರಯದಲ್ಲಿ ನಡೆದ ಮೂರು ದಿನಗಳ ಅಂತಾರಾಷ್ಟ್ರೀಯ ಸಂಸ್ಕೃತ ಸಮ್ಮೇಳನದಲ್ಲಿ ಪ್ರಾಚೀನ ಗ್ರಂಥಗಳ ಸಂರಕ್ಷಣೆ ಮತ್ತು ಸಂಶೋಧನಾ ಕಾರ್ಯದ ಹಿನ್ನೆಲೆಯಲ್ಲಿ ಉಡುಪಿಯ ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನದ ನಿರ್ದೇಶಕ ಡಾ.ಬಿ. ಗೋಪಾಲಾಚಾರ್ಯ ಅವರನ್ನು ಪ್ರಾಚ್ಯವಿದ್ಯಾವಿಶಾರದ ಎಂಬ ಪ್ರಶಸ್ತಿ ನೀಡಿ ಗೌರವಿಸಲಾಯಿತು.ವಿದ್ವಾನ್ ಗೋಪಾಲ ಆಚಾರ್ಯ, ಶ್ರೀ ಪುತ್ತಿಗೆ ಮಠದ ಅಧೀನದಲ್ಲಿರುವ ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನದಿಂದ ವಿಶೇಷ ಯೋಜನೆಯನ್ನು ಹಮ್ಮಿಕೊಂಡಿದ್ದು, ಅದರ ಭಾಗವಾಗಿ ದೇಶದ ವಿವಿಧ ಭಾಗಗಳಲ್ಲಿ ಗ್ರಂಥ ಸಂರಕ್ಷಣೆ ಮತ್ತು ಪ್ರಾಚೀನ ಇತಿಹಾಸಗಳ ಅನ್ವೇಷಣೆ ಕಾರ್ಯದಲ್ಲಿ ನಿರತರಾಗಿದ್ದಾರೆ. ಈ ಸಾಧನೆಯನ್ನು ಗುರುತಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿದ್ವತ್ ವೃಂದವನ್ನು ಹೊಂದಿದ ಸಮಿತಿಯ ನಿರ್ಣಯದಂತೆ ಮಾ.29ರಿಂದ 31ರ ವರೆಗೆ ನಡೆದ ಸಮ್ಮೇಳನದಲ್ಲಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಒರಿಸ್ಸಾದ ಪ್ರಸಿದ್ಧ ಸಂಸ್ಕೃತ ಸಂಶೋಧಕ, ವಿದ್ವಾಂಸ ಡಾ.ವಿಪಿನ ವಿಹಾರಿ ಶತಪಥೀ, ಲೋಕ ಭಾಷಾ ಪ್ರಚಾರ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ಪ್ರೊ. ಸದಾನಂದ ದೀಕ್ಷಿತ್, ನೇಪಾಳ ಸಂಸ್ಕೃತ ವಿಶ್ವವಿದ್ಯಾಲಯದ ಸಂಸ್ಕೃತ ವಿಭಾಗ ಮುಖಸ್ಥ ಡಾ. ಕಾಶೀನಾಥ ನ್ಯೌಪಾನೇ, ಅಸ್ಸಾಂನ ಕುಮಾರಭಾಸ್ಕರ ವರ್ಮಾ, ಸಂಸ್ಕೃತ ವಿಶ್ವವಿದ್ಯಾಲಯದ ಸಂಸ್ಕೃತ ವಿಭಾಗ ಮುಖಸ್ಥ ಡಾ. ಗೋಕುಲೇಂದ್ರ ನಾರಾಯಣದೇವಗೋಸ್ವಾಮಿ, ಉತ್ಕಲ ಪ್ರಾಂತ್ಯದ ಪ್ರಸಿದ್ಧ ಸಂಸ್ಕೃತ ವಿದ್ವಾಂಸ ಪ್ರೊ. ಅರುಣ್ ತ್ರಿಪಾಠಿ, ಬಿಹಾರದ ಶ್ರೀ ಜಯಪ್ರಕಾಶ್ ನಾರಾಯಣ್ ವಿಶ್ವವಿದ್ಯಾಲಯದ ಹಿರಿಯ ಸಂಸ್ಕೃತ ವಿದ್ವಾಂಸ ಪ್ರೊ. ವೈದ್ಯನಾಥ ಮಿಶ್ರ ಉಪಸ್ಥಿತರಿದ್ದರು.ಈ ಸಮ್ಮೇಳನದಲ್ಲಿ ದೇಶ-ವಿದೇಶಗಳ ಸುಮಾರು ಮುನ್ನೂರಕ್ಕೂ ಅಧಿಕ ಸಂಖ್ಯೆಯಲ್ಲಿ ವಿದ್ವಾಂಸರು ಭಾಗವಹಿಸಿದ್ದರು.