ಸಾರಾಂಶ
ಬಹುಧರ್ಮ, ಭಾಷೆ ಮತ್ತು ಸಂಸ್ಕೃತಿ ಪ್ರತಿಪಾದಿಸುವ ದೇಶ ನಮ್ಮದಾಗಿದೆ. ಭಾರತ ಆಡಳಿತಾತ್ಮಕ ನಿರ್ವಹಣೆಗೆ ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು 76 ವರ್ಷಗಳು ತುಂಬುತ್ತಿವೆ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.
ಬ್ಯಾಡಗಿ: ವಿವಿಧತೆಯಲ್ಲಿ ಏಕತೆ ಭಾರತದ ದೊಡ್ಡಶಕ್ತಿಯಾಗಿದ್ದು, ವಿಶ್ವಕ್ಕೆ ಮಾದರಿ ಸ್ವರೂಪದ ಸಂವಿಧಾನವನ್ನು ನಮಗೆ ನೀಡಿದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ನೆನಪು ಮಾಡಿಕೊಂಡು ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.
ಭಾನುವಾರ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಹುಧರ್ಮ, ಭಾಷೆ ಮತ್ತು ಸಂಸ್ಕೃತಿ ಪ್ರತಿಪಾದಿಸುವ ದೇಶ ನಮ್ಮದಾಗಿದೆ. ಭಾರತ ಆಡಳಿತಾತ್ಮಕ ನಿರ್ವಹಣೆಗೆ ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು 76 ವರ್ಷಗಳು ತುಂಬುತ್ತಿವೆ. ಭಾರತದ ಎಲ್ಲ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ಚಿಂತನೆ, ಅಭಿವ್ಯಕ್ತಿ ನಂಬಿಕೆ ಮತ್ತು ಆರಾಧನೆ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿಪಡಿಸಿ ಎಲ್ಲರ ನಡುವೆ ಭ್ರಾತೃತ್ವ ಹುಟ್ಟಿಸುವುದೇ ಸಂವಿಧಾನದ ಮೂಲ ಆಶಯವಾಗಿದೆ ಎಂದರು.ಸ್ವಾತಂತ್ರ್ಯ, ಸಮಾನತೆ, ಸಹೋದರತ್ವ, ಏಕತೆ, ಭ್ರಾತೃತ್ವ ಭಾರತದ ಸಂವಿಧಾನದಲ್ಲಿ ಇರುವ 5 ಪ್ರಮುಖ ಮೌಲ್ಯಗಳಾಗಿವೆ ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಮಾತನಾಡಿ, ಭಾರತದ ಸಂವಿಧಾನ ಅಂಗೀಕಾರಗೊಂಡ ದಿನವಿದು. ಭಾರತ ದೇಶದಲ್ಲಿ ಸಂವಿಧಾನ ಜಾರಿಗೆ ಬಂದ ಮೇಲೆಯೇ ದೇಶದ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳಾದ ಸಮಾನತೆ, ಸ್ವಾತಂತ್ರ್ಯ, ಧರ್ಮ, ಸಂಸ್ಕೃತಿ, ಶಿಕ್ಷಣ ಮತ್ತು ಇತರ ಹಕ್ಕುಗಳು ಸಿಕ್ಕಿರುವುದು, ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳಂತೆ ಮೂಲಭೂತ ಕರ್ತವ್ಯಗಳಿವೆ, ದೇಶದ ಸಂಪನ್ಮೂಲಗಳನ್ನು ಕಾಪಾಡುವುದು, ರಾಷ್ಟ್ರಗೀತೆ, ರಾಷ್ಟ್ರಧ್ವಜವನ್ನು ಗೌರವಿಸುವುದು, ಸರ್ಕಾರದ ನಿಯಮಗಳು, ಸಂವಿಧಾನದ ಆದರ್ಶಗಳನ್ನು ಪಾಲಿಸುವುದು ಹಾಗೂ ಇತರ ಜವಾಬ್ದಾರಿಗಳು ನಮ್ಮ ಮೇಲಿವೆ ಎಂದರು.ತಹಸೀಲ್ದಾರ್ ಎಫ್.ಎ. ಸೋಮನಕಟ್ಟಿ ಮಾತನಾಡಿ, ಗಣರಾಜ್ಯ ದೇಶವಾದ ಐತಿಹಾಸಿಕ ದಿನವಾಗಿದೆ ಮತ್ತು ಸಂವಿಧಾನ ಜಾರಿಗೆ ಬಂದ ದಿನವಾಗಿದೆ. ನಮ್ಮಲ್ಲಿ ದೇಶಭಕ್ತಿಯನ್ನು ಇನ್ನಷ್ಟು ಗಟ್ಟಿಗೊಳಿಸುವ ಮಹತ್ವದ ದಿನವಾಗಿದೆ ಎಂದರು.
ಪುರಸಭೆ ಅಧ್ಯಕ್ಷ ಬಾಲಚಂದ್ರಗೌಡ ಪಾಟೀಲ, ಉಪಾಧ್ಯಕ್ಷ ಸುಭಾಸ ಮಾಳಗಿ, ಸ್ಥಾಯಿ ಸಮಿತಿ ಅಧ್ಯಕ್ಷ ಚಂದ್ರಣ್ಣ ಶೆಟ್ಟರ, ಸದಸ್ಯರಾದ ಕವಿತಾ ಸೊಪ್ಪಿನಮಠ, ರಾಮಣ್ಣ ಕೋಡಿಹಳ್ಳಿ, ಕಲಾವತಿ ಬಡಿಗೇರ, ಫಕ್ಕೀರಮ್ಮ ಛಲವಾದಿ, ಶಿವರಾಜ ಅಂಗಡಿ, ಮಲ್ಲಮ್ಮ ಪಾಟೀಲ, ಕಾಂಗ್ರೆಸ್ ತಾಲೂಕಾಧ್ಯಕ್ಷ ದಾನಪ್ಪ ಚೂರಿ, ಬೀರಣ್ಣ ಬಣಕಾರ, ಲಕ್ಷ್ಮೀ ಜಿಂಗಾಡೆ, ಟಿಈಒ ಕೆ.ಎಂ. ಮಲ್ಲಿಕಾರ್ಜುನ, ಸಿಪಿಐ ಮಾಲತೇಶ ಲಂಬಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಿ. ಕೋಟಿ, ಮುಖ್ಯಾಧಿಕಾರಿ ವಿನಯಕುಮಾರ್ ಇನ್ನಿತರರಿದ್ದರು. ಎಂ.ಎಫ್. ಕರಿಯಣ್ಣನವರ (ಮಾಸಣಗಿ) ಕಾರ್ಯಕ್ರಮ ನಿರ್ವಹಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.