ಸೋಮವಾರಪೇಟೆ: ಐಗೂರು ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿಯನ್ನು ಶಾಸಕ ಡಾ. ಮಂತರ್ ಗೌಡ ಪರಿಶೀಲಿಸಿದರು. ಮಡಿಕೇರಿಯಿಂದ ಹಾಸನಕ್ಕೆ ತೆರಳುವ ರಾಜ್ಯ ಹೆದ್ದಾರಿಯಾಗಿರುವುದರಿಂದ ಕಾಮಗಾರಿ ಪೂರ್ಣಗೊಳ್ಳದ ಕಾರಣ ಸಮಸ್ಯೆಯಾಗಿದೆ. ಕೂಡಲೇ ಕಾಮಗಾರಿ ಮುಗಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂದು ಸ್ಥಳೀಯರು ಶಾಸಕರಲ್ಲಿ ಮನವಿ ಮಾಡಿದರು. ಇದೇ ಸಂದರ್ಭ ನೂರಾರು ವರ್ಷಗಳ ಇತಿಹಾಸವಿದ್ದ ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾದ ಸೇತುವೆ ತೆರವುಗೊಳಿಸಿದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಶಾಸಕ ಡಾ. ಮಂತರ್ ಗೌಡ ಮಾತನಾಡಿ, ಗುಣಮಟ್ಟದ ಕಾಮಗಾರಿಯೊಂದಿಗೆ ಶೀಘ್ರ ಸೇತುವೆ ಕಾಮಗಾರಿ ಪೂರ್ಣಗೊಳಿಸುವಂತೆ ಇಂಜಿನಿಯರ್ ವಿಜಯಕುಮಾರ್ ಅವರಿಗೆ ಸೂಚಿಸಿದರು. ಪಾದಚಾರಿಗಳ ಮಾರ್ಗದಲ್ಲಿ ಸುರಕ್ಷಾ ಕ್ರಮ ತೆಗೆದುಕೊಳ್ಳಬೇಕು ಎಂದರು. ಈ ಹಿಂದೆ ಇದ್ದ ಕಬ್ಬಿಣ ಸೇತುವೆ ನೆನಪಿನಲ್ಲಿ ಮತ್ತು ಅದರ ಇತಿಹಾಸವನ್ನು ಪರಿಚಯಿಸುವ ವೀಕ್ಷಣಾ ಮಾದರಿಯನ್ನು ನಿರ್ಮಿಸುವ ಮೂಲಕ ಸೇತುವೆಯ ನೆನಪು ಜನರಲ್ಲಿ ಉಳಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.