ಫೋಟೋ- 7 ಎಂವೈಎಸ್‌ 45

----

ಕನ್ನಡಪ್ರಭ ವಾರ್ತೆ ಮೈಸೂರು

ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಮತ್ತು ಆರೋಗ್ಯ ಇಲಾಖೆಯ ವಿವಿಧ ವೃಂದದ ನೌಕರರ ಸಂಘದ ವತಿಯಿಂದ ಮಾ,11 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಶಾಖೆಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಪದಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ವಿವಿಧ ವೃಂದಗಳ ಸಂಘಗಳ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರ ಸಮ್ಮುಖದಲ್ಲಿ ಭೇಟಿ ಮಾಡಿ, ಬೇಡಿಕೆಗಳ ಬಗ್ಗೆ ಮನವಿ ಪತ್ರ ಸಲ್ಲಿಸಿದರು.

ಆರೋಗ್ಯ ಇಲಾಖೆಯ ಸರ್ಕಾರಿ ವೈದ್ಯಾಧಿಕಾರಿಗಳು ಮತ್ತು ವಿವಿಧ ವೃಂದದ ನೌಕರರ ಬೇಡಿಕೆಗಳ ಮನವಿ ಪತ್ರ ಮುಖ್ಯಮಂತ್ರಿಗಳು ಸ್ವೀಕರಿಸಿ, ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಕಾನೂನು ಮಿತಿಯೊಳಗೆ ಬೇಡಿಕೆಗಳನ್ನು ಪರಿಶೀಲಿಸಿ ಈಡೇರಿಸುವ ಸಂಬಂಧ ಡಾ. ಮಹದೇವಪ್ಪ ಅವರ ಮಧ್ಯಸ್ಥಿಕೆಯಲ್ಲಿ ಮಾತುಕತೆಯ ಮೂಲಕ ಬಗೆ ಹರಿಸುವಂತೆ ಸೂಚಿಸಿ, ಸದರಿ ಮುಷ್ಕರವನ್ನು ಹಿಂಪಡೆಯುವಂತೆ ತಿಳಿಸಿದರು.


ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಮೈಸೂರು ಶಾಖೆಯ ಗೌರವಾಧ್ಯಕ್ಷ ಡಾ.ಪಿ.ಸಿ. ಕುಮಾರಸ್ವಾಮಿ, ಎಚ್‌.ಡಿ. ಕೋಟೆ ತಾ, ಆರೋಗ್ಯಾಧಿಕಾರಿ ಡಾ. ರವಿಕುಮಾರ, ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಉಪಾಧ್ಯಕ್ಷೆ ಡಾ. ರಮ್ಯಾ, ವೈದ್ಯಾಧಿಕಾರಿಗಳಾದ ಡಾ. ಎಚ್.ಎಸ್. ಶರತ್ ಆಲ್ ಕೆಡರ್.ನ ಅಧ್ಯಕ್ಷ ಎಚ್.ಎನ್ ಉಮೇಶ್ ಬಾಬು, ಸರಗೂರು ತಾಲ್ಲೂಕು ಅಧ್ಯಕ್ಷ ಸೋಮಶೇಖರ್, ಹಾಗೂ ಆರೋಗ್ಯ ಇಲಾಖೆಯ ವಿವಿಧ ವೃಂದದ ಸಂಘಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.