ಕನ್ನಡಪ್ರಭ ವಾರ್ತೆ ಮಡಿಕೇರಿ

ಸರ್ಕಾರಿ ಪೈಸಾರಿ ಜಾಗದಲ್ಲಿ ಮನೆಕಟ್ಟಿಕೊಂಡು ಹಕ್ಕು ಪತ್ರ ಪಡೆಯಲು ಅರ್ಜಿ ಸಲ್ಲಿಸಿ ವಿವಿಧ ಕಾರಣಕ್ಕೆ ತಿರಸ್ಕೃತ ಗೊಂಡು ನಿರಾಶೆ ಹೊಂದಿದ ನಗರ ಪ್ರದೇಶದ ಸುಮಾರು 1500 ಕ್ಕೂ ಹೆಚ್ಚು ಕುಟುಂಬಗಳಿಗೆ ಹಾಗೂ ಗ್ರಾಮೀಣ ಪ್ರದೇಶದ 11 ಸಾವಿರಕ್ಕೂ ಅಧಿಕ ಕುಟುಂಬಗಳಿಗೆ ನ್ಯಾಯ ದೊರಕಿಸುವ ಪ್ರಯತ್ನಕ್ಕೆ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ಪ್ರಯತ್ನ ಮಾಡಿದ್ದಾರೆ. ಮಡಿಕೇರಿ ವಿಧಾನ ಸಭಾ ಕ್ಷೇತ್ರದಲ್ಲಿ 2015 ರಿಂದ 2022 ರ ವರೆಗೆ 94 ಸಿ.ಸಿ. ಅಡಿಯಲ್ಲಿ 1500 ಕ್ಕೂ ಹೆಚ್ಚು ಜನರು ಮತ್ತು 94 ಸಿ ಅಡಿ 11 ಸಾವಿರಕ್ಕೂ ಹೆಚ್ಚು ಜನರು ಸಲ್ಲಿಸಿದ ಅರ್ಜಿಗಳು ತಿರಸ್ಕರಿಸಿತವಾಗಿದ್ದವು. ಕ್ಷೇತ್ರ ವ್ಯಾಪ್ತಿಯಲ್ಲಿ ಜನರ ಬಳಿ ಶಾಸಕ ಡಾ ಮಂತರ್ ಗೌಡ ತೆರಳಿದ ಸಂದರ್ಭದಲ್ಲಿ ಬಹಳಷ್ಟು ಜನರು ನ್ಯಾಯ ಒದಗಿಸುವಂತೆ ಶಾಸಕರಲ್ಲಿ ಮನವಿ ಸಲ್ಲಿಸುತ್ತಿದ್ದರು. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಡಾ ಮಂತರ್ ಗೌಡ ಸದನದಲ್ಲಿ ಈ ವಿಚಾರದ ಪ್ರಸ್ತಾವನೆಯನ್ನು ಸರ್ಕಾರದ ಮುಂದೆ ತಂದಿದ್ದಾರೆ. ಹಿಂದೆ ಸಲ್ಲಿಸಿದ ಅರ್ಜಿಯಲ್ಲಿ ಅರಣ್ಯದ ಜಾಗವನ್ನು ಹೊರತುಪಡಿಸಿ ಪೈಸಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಸಕ್ರಮಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.