ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರಿಗೆ ಬೆಂಗಳೂರಿನ ನಗರ ವಿಶ್ವವಿದ್ಯಾಲಯ (ಡಾ. ಮನಮೋಹನ್‌ ಸಿಂಗ್ ವಿಶ್ವವಿದ್ಯಾಲಯ) ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದೆ.

ಮೂಡುಬಿದಿರೆ: ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರಿಗೆ ಬೆಂಗಳೂರಿನ ನಗರ ವಿಶ್ವವಿದ್ಯಾಲಯ (ಡಾ. ಮನಮೋಹನ್‌ ಸಿಂಗ್ ವಿಶ್ವವಿದ್ಯಾಲಯ) ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದೆ.

ಶನಿವಾರ ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿರುವ 5ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಈ ಗೌರವ ಪ್ರದಾನ ನೆರವೇರಲಿದೆ.ಡಾ. ಎಂ. ಮೋಹನ್ ಆಳ್ವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸ್ಥಾಪಕ ಅಧ್ಯಕ್ಷರಾಗಿದ್ದು, ಕರಾವಳಿ ಕರ್ನಾಟಕದಲ್ಲಿ ಗುಣಮಟ್ಟದ ಶಿಕ್ಷಣವನ್ನು ಗ್ರಾಮೀಣ ಪ್ರದೇಶಗಳಿಗೆ ತಲುಪಿಸಿದ ಪ್ರಮುಖರಲ್ಲಿ ಅಗ್ರ ಗಣ್ಯರು. ಮೂಡುಬಿದಿರೆ ಕೇಂದ್ರವಾಗಿ ಕಾರ್ಯನಿರ್ವಹಿಸುವ ಆಳ್ವಾಸ್ ಸಂಸ್ಥೆಗಳ ಪ್ರಾಥಮಿಕದಿಂದ ಉನ್ನತ ಶಿಕ್ಷಣದವರೆಗೆ ನೂರಾರು ಕೋರ್ಸ್‌ಗಳನ್ನು ಪ್ರಾರಂಭಿಸಿ ಸಾವಿರಾರು ವಿದ್ಯಾರ್ಥಿಗಳ ಬದುಕನ್ನು ರೂಪಿಸಿದ್ದಾರೆ. ಅವರ ನೇತೃತ್ವದಲ್ಲಿ ಶಿಕ್ಷಣ ಮಾತ್ರವಲ್ಲದೆ ಕಲೆ, ಸಂಸ್ಕೃತಿ, ಕ್ರೀಡೆ ಮತ್ತು ವ್ಯಕ್ತಿತ್ವ ವಿಕಸನಕ್ಕೂ ಸಮಾನ ಮಹತ್ವ ನೀಡಲಾಗಿದೆ. ಆಳ್ವಾಸ್ ನುಡಿಸಿರಿ ವಿರಾಸತ್ ಮೊದಲಾದ ಮಹತ್ವದ ಸಾಹಿತ್ಯಕ- ಸಾಂಸ್ಕೃತಿಕ ಕಾಠ್ಯಕ್ರಮಗಳ ಮೂಲಕ ಭಾರತೀಯ ಪರಂಪರೆ ಮತ್ತು ಸಂಸ್ಕೃತಿಯನ್ನು ಉತ್ತೇಜಿಸುವಲ್ಲಿ ಅವರ ಪಾತ್ರ ಶ್ಲಾಘನೀಯ. ಅವರ ಸಾಧನೆಯನ್ನು ಗುರುತಿಸಿ ಹತ್ತು ಹಲವು ಪ್ರಶಸ್ತಿ ಪುರಸ್ಕಾರಗಳು ಬಂದಿದ್ದು, 2010ರಲ್ಲಿ ಮಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು.

ಇತ್ತೀಚೆಗೆ ಉತ್ತರ ಪ್ರದೇಶದ ವಾರಾಣಸಿಯ ಬನಾರಸ್ ಹಿಂದೂ ವಿವಿಯಲ್ಲಿ ಭಾರತ ಸರ್ಕಾರದ ಆಯುಷ್ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಆಯುರ್ವೇದ ವಿದ್ಯಾಪೀಠದ 29ನೇ ಪದವಿ ಪ್ರದಾನ ಸಮಾರಂಭದಲ್ಲಿ ಡಾ ಎಂ. ಮೋಹನ್ ಆಳ್ವರಿಗೆ ‘ಫೆಲೋ ಆಫ್ ರಾಷ್ಟ್ರೀಯ ಆಯುರ್ವೇದ ವಿದ್ಯಾಪೀಠ’ ಎಂಬ ಪ್ರತಿಷ್ಠಿತ ಗೌರವ ಫೆಲೋಶಿಪ್ ನೀಡಿ ಗೌರವಿಸಲಾಗಿತ್ತು. ಈ ಎಲ್ಲ ಸಾಧನೆಗಳು ಮತ್ತು ದೀರ್ಘ ಕಾಲದ ಸಮರ್ಪಿತ ಸೇವೆಯನ್ನು ಪರಿಗಣಿಸಿ, ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ. ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಫಾವರ್‌ಚಂದ್ ಗೆಹ್ಲೋತ್ , ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ಸ್ ಸಿಸ್ಟ್‌ಮ್ಸ್‌ನ ಮಹಾನಿರ್ದೇಶಕ ಡಾ. ಬಿನಯ ಕುಮಾರ್ ದಾಸ್, ಕರ್ನಾಟಕ ಸರಕಾರದ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ ಹಾಗೂ ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ರಮೇಶ್ ಬಿ. ಅವರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.