ಸಾರಾಂಶ
-ಡಾ. ರಾಜ್ 97ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಭಿಮತ । ಡಾ. ರಾಜ್ ಭಾವಚಿತ್ರಕ್ಕೆ ಪುಷ್ಪ ನಮನ
---ಕನ್ನಡಪ್ರಭವಾರ್ತೆ ಚಿತ್ರದುರ್ಗ
ಕರ್ನಾಟಕದ ಸಾಂಸ್ಕೃಕತೆ ಪ್ರಶ್ನೆ ಬಂದಾಗ ಹಲವು ಪ್ರಥಮಗಳಿಗೆ ಡಾ.ರಾಜಕುಮಾರ್ ಮಾದರಿಯಾಗಿದ್ದಾರೆ. ಅವರ ಚಲನಚಿತ್ರಗಳು ನಮ್ಮ ನಿತ್ಯದ ಜೀವನಕ್ಕೆ ದಿಕ್ಸೂಚಿಯಾಗಿವೆ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹೇಳಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ನಟಸಾರ್ವಭೌಮ ಡಾ.ರಾಜ್ಕುಮಾರ್ ಅವರ 97ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು ಒಂದು ಕುಗ್ರಾಮದ ಮುತ್ತುರಾಜ್ ಅವರು ಡಾ.ರಾಜ್ಕುಮಾರ್ ಆಗಿ ಜವಾಬ್ಧಾರಿ ನಿಭಾಯಿಸುವುದರ ಚಲನಚಿತ್ರ ಇತಿಹಾಸದಲ್ಲಿಯೇ ಮೈಲಿಗಲ್ಲಾದರು ಎಂದರು.
ತಮ್ಮ ಪ್ರತಿ ಸಿನಿಮಾದಲ್ಲೂ ಉತ್ತಮ ಸಂದೇಶ ನೀಡುತ್ತಿದ್ದ ರಾಜಕುಮಾರ್ 200ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಾಯಕ ನಟರಾಗಿ ನಟಿಸಿ, ಕಲಾ ಲೋಕಕ್ಕೆ ತಮ್ಮನ್ನು ಅರ್ಪಣೆ ಮಾಡಿಕೊಂಡಿದ್ದರು. 2017ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ.ರಾಜ್ ಕುಮಾರ್ ಅವರ ಜನ್ಮ ದಿನಾಚರಣೆಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಲು ಆದೇಶ ಮಾಡಿದರು ಎಂದರು.ಡಾ.ರಾಜ್ ಕುಮಾರ್ ಅವರು ತಮ್ಮ ಇಚ್ಚೆಯಂತೆ ಮರಣದ ನಂತರ ತಮ್ಮ ನೇತ್ರಗಳನ್ನು ದಾನ ಮಾಡಿದ್ದಾರೆ. ಇಂದಿಗೂ ಡಾ.ರಾಜ್ ಕುಮಾರ್ ಅವರ ಹೆಸರಿನಲ್ಲಿ ನೇತ್ರದಾನ ಶಿಬಿರಗಳು ನಡೆಯುತ್ತಿವೆ. ಐಎಎಸ್, ಐಪಿಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರಗಳ ಸ್ಥಾಪನೆ, ಅನಾಥಾಶ್ರಮಗಳಿಗೂ ನೆರವು ನೀಡಿದ್ದಾರೆ. ಡಾ.ರಾಜ್ ಕುಮಾರ್ ಮರಣದ ನಂತರ ಅವರ ಕುಟುಂಬವು ಸಹ ಡಾ.ರಾಜ್ ರೂಪಿಸಿರುವ ಕಾರ್ಯಕ್ರಮಗಳನ್ನು ಮುಂದುವರೆಸಿಕೊಂಡು ಹೋಗುತ್ತಿದೆ ಎಂದು ವೀರೇಂದ್ರ ಪಪ್ಪಿ ಮೆಚ್ಚುಗೆ ವ್ಯಕ್ತಪಡಿಸಿದರು.
ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಡಾ.ರಾಜ್ ಕುಮಾರ್ ಅವರು ಸರಳತೆ ಮತ್ತು ಜೀವನ ಮೌಲ್ಯದ ತತ್ವಗಳ ಪಾಲನೆ ಮಾಡುವ ಮೂಲಕ ಬದುಕಿರುವವರೆಗೂ ಸದಾ ಲವಲವಿಕೆಯಿಂದ ಇದ್ದರು. ಡಾ.ರಾಜ್ ಕುಮಾರ್ ನಟನೆಯ ಪ್ರತಿಯೊಂದು ಚಿತ್ರದಲ್ಲಿಯೂ ಒಂದು ತತ್ವ ಹಾಗೂ ಸಂದೇಶವಿದೆ. ಮನೆಯ ಕುಟುಂಬದ ಸದಸ್ಯರೆಲ್ಲರೂ ಸೇರಿ ಒಟ್ಟಿಗೆ ಕುಳಿತು ನೋಡುವ ಚಲನಚಿತ್ರಗಳಾಗಿವೆ ಎಂದರು.ಡಾ.ರಾಜ್ ಕುಮಾರ್ ಅವರು ಕನ್ನಡ ಸಾಹಿತ್ಯ ಹಾಗೂ ಸಂಗೀತಕ್ಕೆ ಅಮೂಲ್ಯವಾದ ಕೊಡುಗೆ ನೀಡಿದ್ದಾರೆ. ಡಾ.ರಾಜ್ ಅವರ ಮರಣದ ನಂತರವೂ ಅವರ ಕಣ್ಣುಗಳು ಇನ್ನೊಬ್ಬರ ಬಾಳಿಗೆ ಬೆಳಕಾಗಿವೆ. ಅವರ ಸಂದೇಶದಲ್ಲಿ ನಾವೆಲ್ಲರೂ ಸಾಗೋಣ ಎಂದು ಹೇಳಿದರು.
ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್ಪೀರ್ ಮಾತನಾಡಿ, ತೆರೆಯ ಮೇಲಾದರೂ ಸರಿ ದುಶ್ಚಟವನ್ನು ಬಿಂಬಿಸುವ ಯಾವುದೇ ಪಾತ್ರವನ್ನು ಡಾ.ರಾಜ್ಕುಮಾರ್ ಅವರು ಅಭಿನಯಿಸಲಿಲ್ಲ. ಡಾ.ರಾಜ್ ಅವರಿಗೂ ಚಿತ್ರದುರ್ಗಕ್ಕೂ ಬಹಳ ನಂಟಿದೆ. ಡಾ.ರಾಜ್ ಅವರಿಗೆ ಕುಮಾರ ರಾಜ್ ಎಂದು ಚಿತ್ರದುರ್ಗದವರು ಬಿರುದು ನೀಡಿದ್ದಾರೆ ಎಂದು ಸ್ಮರಿಸಿದ ಅವರು, ಮುಂಬರುವ ದಿನಗಳಲ್ಲಿ ಡಾ.ರಾಜ್ ಅವರ ಜನ್ಮದಿನದ ಶತಮಾನೋತ್ಸವದ ಅಂಗವಾಗಿ ಡಾ.ರಾಜ್ ನೆನಪಿನಲ್ಲಿ ಉಳಿಯುವಂತಹ ಕಾರ್ಯ ಮಾಡುವಂತೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರಿಗೆ ಮನವಿ ಮಾಡಿದರು.ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಪ್ರಾಸ್ತಾವಿಕವಾಗಿ ಮಾತನಾಡಿ, ಬಹುತೇಕ ಎಲ್ಲರೂ ಡಾ.ರಾಜ್ ಅವರನ್ನು ಅಣ್ಣಾವ್ರು ಎಂದು ಕರೆಯುತ್ತಾರೆ ಎಂದು ತಿಳಿಸಿದ ಅವರು, ನಟನೆ ಹಾಗೂ ಗಾಯನಕ್ಕೆ ರಾಷ್ಟ್ರಪ್ರಶಸ್ತಿ ಪಡೆದ ಏಕೈಕ ಕಲಾವಿದ ಡಾ.ರಾಜ್ ಕುಮಾರ್ ಎಂದು ತಿಳಿಸಿದರು.
ರಾಜ್ ಕುಮಾರ್ ಅವರು ತನ್ನ ಪಾತ್ರಗಳ ಆಯ್ಕೆಯಲ್ಲಿ ಬಹಳ ಜಾಗೃತೆ ವಹಿಸುತ್ತಿದ್ದರು. ಅವರಿಗಿದ್ದ ಅಪಾರ ಅಭಿಮಾನಿಗಳಿಗೆ ಅವರ ಪಾತ್ರಗಳು ಸಮಾಜ ಕಂಟಕ ಸಂದೇಶ ಕೊಡಬಾರದು ಎಂಬ ಕಾಳಜಿ ಅವರಿಗಿತ್ತು ಎಂದು ಹೇಳಿದರು.ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಮಾತನಾಡಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗಳಿಸಿದ ಕನ್ನಡದ ಮೇರು ನಟ ಡಾ.ರಾಜ್ ಕುಮಾರ್ ನಾಡು-ನುಡಿಯ ಹೋರಾಟದ ಜತೆಗೆ ಚಲನಚಿತ್ರಗಳಲ್ಲಿ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆ ಎಂದರು.
ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಕೆಡಿಪಿ ಸದಸ್ಯ ನಾಗರಾಜ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ, ಸಾಹಿತಿ ಹುರುಳಿ ಬಸವರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ರಂಗಕರ್ಮಿ ಕೆಪಿಎಂ ಗಣೇಶಯ್ಯ ಸೇರಿದಂತೆ ಡಾ.ರಾಜ್ ಕುಮಾರ್ ಅಭಿಮಾನಿಗಳು ಇದ್ದರು. ಚಿತ್ರದುರ್ಗದ ಎಂ.ಕೆ ಹರೀಶ್ ಮತ್ತು ಸಂಗಡಿಗರು ಡಾ. ರಾಜ್ಕುಮಾರ್ ಅವರ ಗೀತಗಾಯನ ನಡೆಸಿಕೊಟ್ಟರು.--------------
ಪೋಟೋ :ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಡಾ.ರಾಜಕುಮಾರ ಜನ್ಮ ದಿನಾಚರಣೆಯಲ್ಲಿ ಶಾಸಕ ವೀರೇಂದ್ರ ಪಪ್ಪಿ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
---ಫೋಟೋ:24 ಸಿಟಿಡಿ1