ಸಾರಾಂಶ
ಭಾರತೀಯ ವೈದ್ಯಕೀಯ ಸಂಘ, ಮಂಗಳೂರು ಶಾಖೆಯ ೨೦೨೫-೨೬ ಸಾಲಿನ ನೂತನ ಅಧ್ಯಕ್ಷರಾಗಿ ನಗರದ ಖ್ಯಾತ ಮೂತ್ರರೋಗ ಶಾಸ್ತ್ರ ತಜ್ಞ ಡಾ. ಸದಾನಂದ ಪೂಜಾರಿ ಅವಿರೋಧ ಆಯ್ಕೆಯಾಗಿದ್ದಾರೆ.
ಮಂಗಳೂರು: ಭಾರತೀಯ ವೈದ್ಯಕೀಯ ಸಂಘ, ಮಂಗಳೂರು ಶಾಖೆಯ ೨೦೨೫-೨೬ ಸಾಲಿನ ನೂತನ ಅಧ್ಯಕ್ಷರಾಗಿ ನಗರದ ಖ್ಯಾತ ಮೂತ್ರರೋಗ ಶಾಸ್ತ್ರ ತಜ್ಞ ಹಾಗೂ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯ ಮೂತ್ರರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸದಾನಂದ ಪೂಜಾರಿ ಅವಿರೋಧ ಆಯ್ಕೆಯಾಗಿದ್ದಾರೆ.
ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಅ. ೧೭ ರಂದು ನಗರದ ಐಎಂಎ ಸಭಾಂಗಣದಲ್ಲಿ ನಡೆಯಲಿದೆ. ಭಾರತೀಯ ವೈದ್ಯಕೀಯ ಸಂಘ, ಮಂಗಳೂರು ಶಾಖೆಯ ಮಾಜಿ ಅಧ್ಯಕ್ಷ ಡಾ. ವೆಂಕಟ್ರಾಯ ಪ್ರಭು ಅವರು ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸಿ ನೂತನ ಪದಾಧಿಕಾರಿಗಳ ಪದಗ್ರಹಣ ವಿಧಿವಿಧಾನವನ್ನು ನೆರವೇರಿಸುವರು. ಬೆಂಗಳೂರು ಗ್ರಾಮಾಂತರ ಪ್ರದೇಶ ಕ್ಷೇತ್ರದ ಸಂಸದ ಹಾಗೂ ಮಾಜಿ ಜಯದೇವ ಹೃದ್ರೋಗ ಚಿಕಿತ್ಸಾ ಆಸ್ಪತ್ರೆಯ ನಿರ್ದೇಶಕ ಡಾ. ಸಿ. ಎನ್. ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಜಿಲ್ಲಾ ಶಸ್ತ್ರ ಚಿಕಿತ್ಸಕ ಹಾಗೂ ವೆನ್ಲಾಕ್ ಆಸ್ಪತ್ರೆಯ ಆಧೀಕ್ಷಕ ಡಾ. ಶಿವಪ್ರಕಾಶ್ ಭಾಗವಹಿಸುವರು. ಡಾ.ಸದಾನಂದ ಪೂಜಾರಿಯವರು ನಿರ್ಗಮನ ಅಧ್ಯಕ್ಷೆ ಡಾ. ಜೆಸ್ಸಿ ಮರಿಯಾ ಡಿಸೋಜಾ ಅವರಿಂದ ಅಧಿಕಾರ ಸ್ವೀಕರಿಸುವರು.ಡಾ. ಪ್ರಕಾಶ್ ಹರಿಶ್ಚಂದ್ರ, ಕಾರ್ಯದರ್ಶಿ ಡಾ. ಜೂಲಿಯನ್ ಸಲ್ಡಾನ್ಹಾ ಕೋಶಾಧಿಕಾರಿಯಾಗಿ, ಸಂಸ್ಥೆಯ ಮಹಿಳಾ ವಿಭಾಗದ ಅಧ್ಯಕ್ಷೆಯಾಗಿ ಡಾ. ಪ್ರೇಮ ಡಿಕುನ್ಹಾ ಅಧಿಕಾರ ವಹಿಸಲಿರುವರು. ಡಾ. ಸದಾನಂದ ಪೂಜಾರಿಯವರು ರಾಜ್ಯಮಟ್ಟದ ಡಾ. ಬಿ.ಸಿ. ರಾಯ್ ಪ್ರಶಸ್ತಿ ಹಾಗೂ ಕನ್ನಡಪ್ರಭ-ಸುವರ್ಣ ನ್ಯೂಸ್ನ 2025ರ ಹೆಲ್ತ್ ಕೇರ್ ಎಕ್ಸೆಲೆನ್ಸ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಭಾರತೀಯ ವೈದ್ಯಕೀಯ ಸಂಘ ಸುಮಾರು ೧,೭೦೦ ಸದಸ್ಯರನ್ನು ಒಳಗೊಂಡಿದೆ.